‘ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 7,500 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ’

'Target to settle 7,500 cases in Rashtriya Lok Adalat'

ಕಾರವಾರ 20: ಮಾರ್ಚ್‌ 8 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ 7,500 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಹೇಳಿದರು. 

ಅವರು ಗುರುವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ವಿವಿಧ ಹಂತದ ನ್ಯಾಯಾಲಯದಲ್ಲಿ ಒಟ್ಟು 38,072 ಪ್ರಕರಣಗಳು ಬಾಕಿ ಇದ್ದು, ಈಗಾಗಲೇ ಇತ್ಯರ್ಥಪಡಿಸಲು ಸಿದ್ದವಿರುವ 907 ಪ್ರಕರಣಗಳು ಬಾಕಿ ಇದ್ದು, ಇವು ಸೇರಿದಂತೆ ಒಟ್ಟು 7,500 ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ 5,495 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿತ್ತು ಎಂದು ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ವಿವರಿಸಿದರು. ಲೋಕ ಅದಾಲತ್‌ನಲ್ಲಿ ಸಾರ್ವಜನಿಕರ ಬ್ಯಾಂಕ್ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವಿದ್ಯುತ್, ಆಸ್ತಿ ಕರ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ, ಕೌಟುಂಬಿಕ ಪ್ರಕರಣಗಳು, ಚೆಕ್‌ಅಮಾನ್ಯದ ಪ್ರಕರಣಗಳು, ಇತರೆ ಸಿವಿಲ್ ಮತ್ತುಕ್ರಿಮಿನಲ್ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ತಪಡಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ತಮ್ಮ ವಕೀಲರ ಮೂಲಕ ಅಥವಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು. 

ಜಿಲ್ಲೆಯ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಹಾಗಾಗಿ ಸಾರ್ವಜನಿಕರು ಮಾರ್ಚ್‌ 8 ರಂದು ನಡೆಯುವ ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರಕರಣವನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.