ದ್ವಿತೀಯ ಪಿಯುಸಿ-15,652 ವಿದ್ಯಾರ್ಥಿಗಳು, ಎಸ್‌ಎಸ್‌ಎಲ್‌ಸಿ-23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ದ್ವಿತೀಯ ಪಿಯುಸಿ-15,652 ವಿದ್ಯಾರ್ಥಿಗಳು, ಎಸ್‌ಎಸ್‌ಎಲ್‌ಸಿ-23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ 15,652 students registered for the second PUC exam, 23,271 students registered for the SSLC exam.


ಬಳ್ಳಾರಿ 19:  ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 23,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಹಿತದೃಷ್ಟಿಯಿಂದ ಜಿಲ್ಲಾಡಳಿತ ವತಿಯಿಂದ ಸ್ನೇಹಮಹಿ ವಾತಾವರಣ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು ಹೇಳಿದರು. 

ಗುರುವಾರ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಂತೆ ಪರೀಕ್ಷೆಗಳ ವೇಳಾಪಟ್ಟಿ, ವಿದ್ಯಾರ್ಥಿಗಳ ಸಂಖ್ಯೆ, ಭದ್ರತಾ ವ್ಯವಸ್ಥೆಗಳು, ಉಚಿತ ಸಾರಿಗೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮಗಳ ಕುರಿತು ಮಾಹಿತಿ ನೀಡಲು ಏರಿ​‍್ಡಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 

*ದ್ವಿತೀಯ ಪಿಯುಸಿ:* 

ದ್ವಿತೀಯ ಪಿಯುಸಿ ಪರೀಕ್ಷೆ-1 ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 15,652 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 13,286 ಹೊಸ ಅಭ್ಯರ್ಥಿಗಳು(ಹುಡುಗ-5,580 ಮತ್ತು ಹುಡುಗಿಯರು-7,706), 1,899 ಮರು ಪರೀಕ್ಷಾರ್ಥಿಗಳು, 467 ಖಾಸಗಿ ಅಭ್ಯರ್ಥಿಗಳು ಒಳಗೊಂಡಿದ್ದಾರೆ. ಬಳ್ಳಾರಿ ನಗರ-12, ಸಿರುಗುಪ್ಪ-03, ಸಂಡೂರು-02, ಕಂಪ್ಲಿ-02 ಮತ್ತು ಕುರುಗೋಡು-01 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಹೇಳಿದರು. 

*ಎಸ್‌ಎಸ್‌ಎಲ್‌ಸಿ ಪರೀಕ್ಷೆ:* 

ಅದೇರೀತಿಯಾಗಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ-1 ಮಾರ್ಚ್‌ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಜಿಲ್ಲೆಯಲ್ಲಿ ಒಟ್ಟು 326 ಹತ್ತನೆಯ ಶಾಲೆಗಳಿಂದ ಒಟ್ಟು 23,271 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 19,722 ಹೊಸ ಅಭ್ಯರ್ಥಿಗಳು, 2,009 ಮರು ಪರೀಕ್ಷಾರ್ಥಿಗಳು, 1,328 ಖಾಸಗಿ ಅಭ್ಯರ್ಥಿಗಳು, 212 ಖಾಸಗಿ ಮರು ಪರೀಕ್ಷಾರ್ಥಿಗಳು ಒಳಗೊಂಡಿದ್ದಾರೆ. ಒಟ್ಟು ಜಿಲ್ಲೆಯ 65 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ ಎಂದು ತಿಳಿಸಿದರು. 

*ವಿದ್ಯಾರ್ಥಿಗಳಿಗೆ ಸ್ನೇಹಮಯಿ ವಾತಾವರಣ:* 

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಹಿತದೃಷ್ಟಿಯಿಂದ ಜಿಲ್ಲಾಡಳಿತ ವತಿಯಿಂದ ಸ್ನೇಹಮಹಿ ವಾತಾವರಣ ಕಲ್ಪಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಕೆಕೆಆರ್‌ಟಿಸಿ ಮತ್ತು ನಗರ ಸಾರಿಗೆ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂತಿರುಗಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು. 

*ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ:* 

ಪರೀಕ್ಷಾ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಹೋಗಲು ಕೆಕೆಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಗಾಳಿ, ಬೆಳಕು, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಸಮರ​‍್ಕವಾಗಿರುವಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಸೂಚಿಸಲಾಗಿದೆ ಎಂದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್‌ ಅಂಗಡಿಗಳು, ಸೈಬರ್ ಸೆಂಟರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿಯವರ ಆದೇಶದ ಮೂಲಕ ಆದೇಶಿಸಲಾಗುತ್ತದೆ ಎಂದು ಹೇಳಿದರು. 

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ತಪ್ಪು ಮಾಹಿತಿಯನ್ನು ತಡೆಯಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸುಳ್ಳು ಪ್ರಚಾರ ಮಾಡುವ ಖಾತೆಗಳನ್ನು ಗುರುತಿಸಿ ತಡೆದು ಕಾನೂನು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗಳು ಸುರಕ್ಷಿತವಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇಡಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಒಳಗಡೆ, ಹೊರಗಡೆ ಮತ್ತು ಪ್ರಾಚಾರ್ಯರ ಕೊಠಡಿಗಳಲ್ಲಿಯೂ ಸಹ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್‌.ಎನ್ ಇದ್ದರು