ಮಹನೀಯರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್‌.ಎನ್ ನಿರ್ದೇಶನ

ಮಹನೀಯರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್‌.ಎನ್ ನಿರ್ದೇಶನ ADC Mohammed Zubair N. directed to make necessary preparations for the celebration of Mahaniyar Jay

       ಬಳ್ಳಾರಿ  23: ಜಿಲ್ಲಾ ಕೇಂದ್ರದಲ್ಲಿ ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ, ಫೆ.10 ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್‌.ಎನ್ ಅವರು ಸೂಚಿಸಿದರು.  

ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಅಧಿಕಾರಿಗಳು, ಸಮುದಾಯದ ಮುಖಂಡರೊಂದಿಗೆ ಶುಕ್ರವಾರ ಏರಿ​‍್ಡಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ನಗರದ ಡಾ.ರಾಜ್ ಕುಮಾರ್ ರಸ್ತೆಯ ಹೊಂಗಿರಣ ಸಭಾಂಗಣದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಬೇಕು. ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು. 

ಶಿವಶರಣರು ಬಿತ್ತಿದ ಸಾಮಾಜಿಕ ಮೌಲ್ಯಗಳನ್ನು ಶಾಲಾ ಕಾಲೇಜು ಮಕ್ಕಳಿಗೂ ಅರಿವು ಮೂಡಿಸುವ ಅಗತ್ಯವಿದೆ. ಶರಣರು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಾದವರಲ್ಲ; ಅವರ ಜೀವನ, ಚಿಂತನೆ, ದಾರ್ಶನಿಕ ಬದುಕುಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಲು ಸರ್ಕಾರವು ಜಯಂತಿ ಕಾರ್ಯಕ್ರಮ ಆಚರಿಸುತ್ತಿದೆ ಎಂದು ತಿಳಿಸಿದರು. 

ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು. ಬೈಕ್ ರ್ಯಾಲಿ, ಡಿಜೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು. 

ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ-ಸಂಸ್ಥೆಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು. 

ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ-ಸೂಚನೆ ನೀಡಿದರು. 

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ಡಿಡಿಪಿಐ, ಡಿಡಿಪಿಯು, ತೋಟಗಾರಿಕೆ ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.