ಆಧಾರ್ ನೋಂದಣಿ ಕೇಂದ್ರಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು
Aadhaar enrollment centers should function more efficiently
ಆಧಾರ್ ನೋಂದಣಿ ಕೇಂದ್ರಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು
ಹಾವೇರಿ 29 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಧಾರ್ ನೋಂದಣಿ ಕೇಂದ್ರಗಳು ಕುಂಟು ನೆಪ ಹೇಳುವುದನ್ನು ಬಿಟ್ಟು ಚುರುಕಿನಿಂದ ಕೆಲಸಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಆಧಾರ ಮೇಲ್ವಿಚಾರ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಷ್ಟು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಹಾಗೂ ಎಷ್ಟು ಕೇಂದ್ರಗಳು ಸ್ಥಗಿತಗೊಂಡಿವೆ ಹಾಗೂ ಯಾವ ಯಾವ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಪರೀಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಧಾರ್ ಕೇಂದ್ರಗಳಲ್ಲಿ ಶಾಲಾ ವಿದ್ಯಾರ್ಥಿಗಳ ಹೆಸರು ತಿದ್ದುಪಡಿ ವಿಳಂಬವಾಗುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಆದ್ಯತೆ ಮೇಲೆ ಕೆಲಸ ಮಾಡಬೇಕು ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಬಗೆಹರಿಸಬೇಕು ಎಂದು ತಿಳಿಸಿದರು.
ಆಧಾರ್ ನೋಂದಣಿ, ತಿದ್ದುಪಡಿ, ಮೊಬೈಲ್ ನಂಬರ್ ಬದಲಾವಣೆಗೆ ಬರುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಬೇಕು. ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳ ಕುರಿತು ಸರಿಯಾಗಿ ತಿಳಿಸಬೇಕು, ಪದೇ ಪದೇ ಕೇಂದ್ರಗಳಿಗೆ ಅಲೆದಾಡಿಸಬಾರದು ಎಂದು ಸೂಚಿಸಿದರು.
ವಿರಾಟ್ ರವಿರಾಜ ಪಾಟೀಲ ಎಂಬ ವಿದ್ಯಾರ್ಥಿಯ ಆಧಾರ್ ಕಾರ್ಡ್ನಲ್ಲಿ ಹೆಸರು ತಿದ್ದುಪಡಿಗೆ ಕಳೆದ 15 ದಿನದಿಂದ ಅಲೆದಾಡುತ್ತಿದ್ದು, ಈವರೆಗೆ ಆ ವಿದ್ಯಾರ್ಥಿಯ ಸಮಸ್ಯೆ ಇತ್ಯರ್ಥವಾಗಿಲ್ಲ. ಇದರಿಂದ ಆ ವಿದ್ಯಾರ್ಥಿ ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗಿದೆ. ವಿದ್ಯಾರ್ಥಿಯ ಪಾಲಕರು ಇಂದು ನನ್ನ ಗಮನಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಬೇಕು, ಈ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸಬೇಕು ಎಂದು ಆಧಾರ್ ಕೇಂದ್ರ ನಿರ್ವಹಣೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ 25, ಹಾನಗಲ್-41, ಹಾವೇರಿ-35, ಹಿರೇಕೆರೂರು-13, ರಾಣೇಬೆನ್ನೂರು-33, ರಟ್ಟಿಹಳ್ಳಿ-16, ಸವಣೂರ-17 ಹಾಗೂ ಶಿಗ್ಗಾಂವ ತಾಲೂಕಿನಲ್ಲಿ 20 ಸೇರಿ ಒಟ್ಟು 200 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್, ತಾಲೂಕು ಪಂಚಾಯತ್, ಅಂಚೆ ಕಚೇರಿ, ವಿವಿಧ ಬ್ಯಾಂಕ್ಗಳಲ್ಲಿ ಆಧಾರ ದಾಖಲೆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿರುವುದಾಗಿ ಆಧಾರ್ ನೋಂದಣಿ ಕೇಂದ್ರ ಮೇಲುಸ್ತುವಾರಿ ಅಧಿಕಾರಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸೊನ್ನೆಯಿಂದ ಐದು ವರ್ಷದೊಳಗಿನ 81,719, ಐದರಿಂದ 18 ವರ್ಷದೊಳಗಿನ 3,78,268 ಹಾಗೂ 18 ವರ್ಷ ಮೇಲ್ಪಟ್ಟ 14,26,791 ಜನರು ಆಧಾರ್ ನೋಂದಣಿ ಮಾಡಲಾಗಿದೆ. ಐದು ವರ್ಷ ಮೇಲ್ಪಟ್ಟ 80,301 ಮಕ್ಕಳ ಹಾಗೂ 15 ವರ್ಷ ಮೇಲ್ಪಟ್ಟ 57,815 ಮಕ್ಕಳು ಸೇರಿ 1,38,116 ಮಕ್ಕಳ ಬಯೋಮೆಟ್ರಿಕ್ ಬಾಕಿ ಇದೆ. ಅದೇ ರೀತಿ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುದೇವ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 