ಮುಸ್ಲಿಂ ಬಾಂಧವರಿಂದ ಬಕ್ರೀದ್ ಶ್ರದ್ಧೆಯಿಂದ ಆಚರಣೆ
ರಾಣಿಬೆನ್ನೂರ:8 ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವನ್ನು ಶನಿವಾರ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಡಗರ ಸಂಭ್ರಮದಿಂದ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ನಗರದಲ್ಲಿ ಬೆಳಿಗ್ಗೆಯಿಂದಲೇ ಮಕ್ಕಳು ಸೇರಿದಂತೆ ಹಿರಿಯರು ಹೊಸ ಉಡುಪುಗಳನ್ನು ಧರಿಸಿ ಬಕ್ರೀದ್ ಆಚರಣೆಯಲ್ಲಿ ತೊಡಗಿದ್ದು ವಿಶೇಷವಾಗಿತ್ತು. ಇಲ್ಲಿನ ಕೋಟೆಯ ದರ್ಗಾದಿಂದ ಕಾಲ್ನಡಿಗೆಯ ಮುಖಾಂತರ ನಗರದ ಹೊರ ವಲಯದಲ್ಲಿರುವ ಮಾರುತಿ ನಗರದ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ಮೌಲಾನವರು ಮುಸ್ಲಿಂ ಬಾಂಧವರಿಗೆ ಪ್ರಾರ್ಥನೆಯನ್ನು ಬೋಧಿಸಿದರು. ವಿಶಾಲವಾದ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದು ವಿಶೇಷವಾಗಿತ್ತು. ಶಾಸಕ ಪ್ರಕಾಶ ಕೋಳಿವಾಡ ಮತ್ತು ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಹಿಂದು ಮತ್ತು ಮುಸ್ಲಿಂ ಮುಖಂಡರು ಪರಸ್ಪರ ಅಪ್ಪುಗೆಯ ಮೂಲಕ ಶುಭಕೋರಿದರು