ಬಳ್ಳಾರಿ: ‘ನಿಮ್ಮ ಹಣ-ನಿಮ್ಮ ಹಕ್ಕು’ ಅಭಿಯಾನ ಜಾಗೃತಿ ಮತ್ತು ಪ್ರಗತಿ ಸಭೆ
Bellary: ‘Your Money-Your Rights’ campaign awareness and progress meeting
ಬಳ್ಳಾರಿ 21: ಅನೇಕ ವರ್ಷಗಳಿಂದ ಬ್ಯಾಂಕ್ ಗಳಲ್ಲಿರುವ ನಿಷ್ಕ್ರಿಯ ಖಾತೆಗಳು, ಠೇವಣಿ ಅಥವಾ ಇತರೆ ಕಾರಣಗಳಿಂದ ಬಾಕಿ ಉಳಿದಿರುವ ಹಣವನ್ನು ಹಿಂಪಡೆಯದೇ ಇರುವುದರಿಂದ ಆರ್ಥಿಕತೆಗೆ ಪೆಟ್ಟು ಬೀಳಲಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ಹಣಕಾಸು ಸೇವೆಗಳ ಇಲಾಖೆ, ಹಣಕಾಸು ಸಚಿವಾಲಯ, ಆರ್ಬಿಐ, ಎಸ್ಎಲ್ಬಿಸಿ ಮತ್ತು ಬಳ್ಳಾರಿ ಜಿಲ್ಲಾಡಳಿತ ನಿರ್ದೇಶನದಂತೆ ಹಕ್ಕು ಪಡೆಯದ ನಿಷ್ಕ್ರಿಯ ಖಾತೆಗಳ ಮುಚ್ಚುವಿಕೆ ಮತ್ತು ಮರು-ಸಕ್ರಿಯಗೊಳಿಸುವಿಕೆಗಾಗಿ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ‘ನಿಮ್ಮ ಹಣ-ನಿಮ್ಮ ಹಕ್ಕು’ ಅಭಿಯಾನ ಕುರಿತು ಜಾಗೃತಿ ಮತ್ತು ಪ್ರಗತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಿಷ್ಕ್ರಿಯ ಖಾತೆಗಳಲ್ಲಿರುವ ಹಣ ವ್ಯವಹಾರಗಳಲ್ಲಿ ಬಳಕೆಯಾಗಬೇಕು. ಅಂದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಇಲ್ಲವಾದಲ್ಲಿ ಆರ್ಥಿಕತೆಗೆ ಪೆಟ್ಟು ಬೀಳಲಿದೆ. ಹಾಗಾಗಿ ಹೆಚ್ಚು ಶಿಬಿರ ಆಯೋಜಿಸುವ ಮೂಲಕ ನಿಗದಿತ ವೇಳೆಗೆ ಜಿಲ್ಲೆಯಲ್ಲಿರುವ ನಿಷ್ಕ್ರಿಯ ಖಾತೆಗಳನ್ನು ಇತ್ಯರ್ಥಗೊಳಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಹೇಳಿದರು.
ಹಣಕಾಸು ಸೇವೆಗಳ ಇಲಾಖೆಯು ಅಕ್ಟೋಬರ್ 03 ರಿಂದ ಡಿಸೆಂಬರ್ 31 ರವರೆಗೆ ನಿಷ್ಕ್ರಿಯ ಖಾತೆಗಳು, ಹಕ್ಕು ಪಡೆಯದ ಠೇವಣಿಗಳು, ವಿಮಾ ಪಾಲಿಸಿ ಮೊತ್ತ, ಷೇರುಗಳನ್ನು ಇತ್ಯರ್ಥಪಡಿಸಲು ಅಭಿಯಾನ ಪ್ರಾರಂಭಿಸಿದೆ. ಗ್ರಾಹಕರಿಗೆ ಮತ್ತು ಅವರ ವಾರಸುದಾರರಿಗೆ ‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನ ಅನುಕೂಲವಾಗಲಿದ್ದು, ಇದರ ಕುರಿತು ಶಿಬಿರ ಆಯೋಜಿಸಿ ಹೆಚ್ಚು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಲೀಡ್ ಬ್ಯಾಂಕ್ ನ ಜಿಲ್ಲಾ ವ್ಯವಸ್ಥಾಪಕ ಗೀರೀಶ್ ವಿ.ಕುಲಕರ್ಣಿ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ 2,73,484 ನಿಷ್ಕ್ರಿಯ ಖಾತೆಗಳಿದ್ದು, ಒಟ್ಟು 73.54 ಕೋಟಿ ರೂ. ಮೊತ್ತವಿದೆ. 10 ವರ್ಷಗಳಿಗೂ ಹೆಚ್ಚು ಕಾಲದಿಂದ ಬಾಕಿ ಇರುವ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವ ಅಥವಾ ಕೆವೈಸಿ ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ನಿಷ್ಕ್ರಿಯ ಖಾತೆಗಳನ್ನು ಮರು-ಸಕ್ರಿಯಗೊಳಿಸಿಕೊಳ್ಳಬೇಕು. ಈ ಹಣ ಸಂಬಂಧಪಟ್ಟ ಖಾತೆದಾರರಿಗೆ ಅಥವಾ ಅವರ ವಾರಸುದಾರರಿಗೆ ಸೇರಬೇಕಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಜಂಟಿ ಶಿಬಿರಗಳನ್ನು ನಡೆಸಬೇಕು ಎಂದು ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.
ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿ ಸಿ.ಗೌತಮ್ ಅವರು ಮಾತನಾಡಿ, ನಿಷ್ಕ್ರಿಯ ಖಾತೆಗಳು, ಹಕ್ಕು ಪಡೆಯದ ಠೇವಣಿಗಳ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳನ್ನು ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್ ಗಳಲ್ಲಿ ಹೊಂದಿರುವ ಖಾತೆಗಳನ್ನು ವರ್ಗೀಕರಣ ಮಾಡಬೇಕು. ಗ್ರಾಹಕರು ತಾವು ಯಾವ ಯಾವ ಶಾಖೆಗಳಲ್ಲಿ ಖಾತೆ ಹೊಂದಿದ್ದಾರೆ ಎಂಬುದರ ಕುರಿತು ಆಯೋಜಿಸುವ ವಿಶೇಷ ಶಿಬಿರಗಳಲ್ಲಿ ಅರಿವು ಮಾಹಿತಿ ನೀಡಬೇಕು. ಮುಖ್ಯವಾಗಿ ವರ್ಷಗಳ ಆಧಾರದ ಮೇಲೆ ಠೇವಣಿ ಮಾಡಿದ ಹಣದ ಮೇಲೆ ಇನ್ಸೆಂಟಿವ್ ನೀಡುವುದರ ಕುರಿತು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಆನ್ಲೈನ್ ಣಣಠಿ://ಣಜರಚಿಟ.ಡಿಛ.ಠರ.ಟಿ ವೆಬ್ಸೈಟ್ ಗೆ ಭೇಟಿ ನೀಡಿ ಪರೀಶೀಲಿಸಬಹುದು ಅಥವಾ ಗ್ರಾಹಕರು ತಮ್ಮ ಹತ್ತಿರದ ಬ್ಯಾಂಕ್ ಶಾಖೆ, ಎಲ್ಐಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ದಾಖಲೆಗಳನ್ನು ಸಲ್ಲಿಸುವ ಮೂಲಕ ನಿಷ್ಕ್ರಿಯ ಖಾತೆಗಳ ಮುಚ್ಚುವಿಕೆ ಮತ್ತು ಮರು-ಸಕ್ರಿಯಗೊಳಿಸುವಿಕೆಗಾಗಿ ಇತ್ಯರ್ಥಪಡಿಸಿಕೊಳ್ಳಬೇಕು. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಬ್ಯಾಂಕ್ ಗಳಲ್ಲಿನ ದೀರ್ಘಕಾಲದಿಂದ ಹಕ್ಕು ಪಡೆಯದೇ ಉಳಿದಿರುವ ಬ್ಯಾಂಕ್ ಠೇವಣಿ ವಿಮೆ ಕಂತು ಮತ್ತು ಷೇರುಗಳನ್ನುಅವುಗಳ ಮಾಲೀಕರಿಗೆ ಮತ್ತು ಕಾನೂನು ಬದ್ಧ ವಾರಸುದಾರರಿಗೆ ಅಪರ ಜಿಲ್ಲಾಧಿಕಾರಿಯವರು ಅಧಿಕೃತ ಪ್ರತಿ ಹಸ್ತಾಂತರಿಸಿದರು. 33 ಖಾತೆಗಳ 8 ಲಕ್ಷದ ಮೊತ್ತದ ಭಾರತೀಯ ಜೀವ ವಿಮೆ (ಎಲ್ಐಸಿ) ಇತ್ಯರ್ಥಗೊಳಿಸಿದ ಅಧಿಕಾರಿಗಳನ್ನು ಅಭಿನಂದಿಸಲಾಯಿತು.
ನನ್ನ ನಿಷ್ಕ್ರಿಯ ಖಾತೆಯಲ್ಲಿ 22 ಸಾವಿರ ಹಣವಿರುವುದು ನನಗೆ ತಿಳಿದಿರಲಿಲ್ಲ. ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿ, ನನ್ನ ಕೆವೈಸಿ ದಾಖಲೆ ಪಡೆದು ಹಣ ವರ್ಗಾವಣೆ ಮಾಡಿದ್ದಾರೆ. ಬಹಳ ಸಂತೋಷವಾಗಿದೆ.
- ನಿಷ್ಕ್ರಿಯ ಖಾತೆಯ ವಾರಸುದಾರರಾದ ವಸಂತ.
ಈ ಸಂದರ್ಭದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳ್ಳಾರಿ ಪ್ರಾದೇಶಿಕ ವ್ಯವಸ್ಥಾಪಕ ರವಿ ಮೆಶ್ರಮ್ ಸೇರಿದಂತೆ ಜಿಲ್ಲೆಯ ವಿವಿಧ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು, ಅಧಿಕಾರಿಗಳು ಹಾಗೂ ಸಾರ್ವಜನಿಕ ಗ್ರಾಹಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 