ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ  Bhoomi Puja for Maulana Azad Model English Medium School building work

ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ  

ಸಿಂದಗಿ 07: ಮತಕ್ಷೇತ್ರಕ್ಕೆ 2 ಮೌಲಾನ ಆಜಾದ್ ಶಾಲೆಯನ್ನು ನೀಡುವ ಜೊತೆಗೆ ಸಿಂದಗಿ ನಗರದ 32ಕೋಣೆಯ ರೂ.5ಕೋಟಿ ವೆಚ್ಚದ ಮೌಲಾನ ಆಜಾದ್ ಶಾಲೆಗೆ ಅನುದಾನ ರಾಜ್ಯ ಸರಕಾರದಿಂದ ಮಂಜೂರಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. 

ಪಟ್ಟಣದ ಇಂಡಸ್ಟ್ರೀಯಲ್ ಏರಿಯಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಜಯಪುರ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ರೂ.5ಕೋಟಿ ವೆಚ್ಚದ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅದೇ ರೀತಿಯಾಗಿ ಆಲಮೇಲ ಪಟ್ಟಣಕ್ಕೂ ಈಗಾಗಲೇ ಶಾಲೆ ಪ್ರಾರಂಭವಾಗಿದೆ. ಜಮೀನಿನ ಪರೀಶೀಲನೆ ಮಾಡಲಾಗುತ್ತಿದೆ. ಇನ್ನು ಕೆಲವು ದಿನಗಳಲ್ಲಿ ರೂ.5ಕೋಟಿ ವೆಚ್ಚದ ಮೌಲಾನ ಆಜಾದ್ ಶಾಲೆಯ ಕಾಮಗಾರಿ ಪ್ರಾರಂಭ ಮಾಡಲಾಗುವುದು. ಒಟ್ಟಿನಲ್ಲಿ ರಾಜ್ಯ ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತಗೆ ಪ್ರಾಥಮಿಕ, ಪ್ರೌಢ ಶಾಲೆ-ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ವಿಶೇಷ ಅನುದಾನ ನೀಡುತ್ತಿದೆ. ಹಿಕ್ಕನಗುತ್ತಿ ಗ್ರಾಮದಲ್ಲಿ ಅಲ್ಪ ಸಂಖ್ಯಾತರಿಗಾಗಿಯೇ ರೂ.16ಕೋಟಿ ಅಲ್ಪ ಸಂಖ್ಯಾತರ ಮೂರಾರ್ಜಿ ವಸತಿ ಶಾಲೆ ಮತ್ತು ರೂ.8ಕೋಟಿಯ ವಸತಿ ಗೃಹಗಳಿಗಾಗಿ ಅನುದಾನವನ್ನು ಮಂಜೂರು ಮಾಡಿದೆ. ಒಟ್ಟು ರೂ.24ಕೋಟಿಯ ಅಲ್ಪ ಸಂಖ್ಯಾತರಿಗಾಗಿ ಸರಕಾರ ಮಂಜೂರ ಮಾಡಿದೆ. ಕೆಲವೇ ದಿನಗಳಲ್ಲಿ ಈ ಕಾಮಗಾರಿಗೆ ಚಾಲನೆ ನೀಡಲಾಗುವುದು.  

ಕಳೆದ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆದಿದ್ದೇವೆ. ಸಿಂದಗಿ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನವನ್ನು ಹರಿದು ಬಂದಿದೆ. 4ಲಕ್ಷ 9ಸಾವಿರ ಕೋಟಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಪ್ರತಿ ಜಿಲ್ಲೆಗೆ ಒಂದು ಕಾರ್ಮಿಕ ಇಲಾಖೆ ವಸತಿ ಶಾಲೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ವಸತಿ ದೊರೆಯಬೇಕು ಎನ್ನುವ ದಿಸೆಯಲ್ಲಿ ಸಿಂದಗಿ ನಗರಕ್ಕೆ ಮಂಜೂರು ಮಾಡಿ ಕೊಡಿ ಎಂದು ಜಿಲ್ಲಾ ಉಸ್ತವಾರಿ ಸಚಿವ ಎಂ.ಬಿ.ಪಾಟೀಲ ಹಾಗೂ ಶಿವಾನಂದ ಪಾಟೀಲ ಮನವಿ ಮಾಡಿಕೊಳ್ಳಲಾಗಿದೆ. ಈರ್ವ ಸಚಿವರು ಸಿಎಂ ಹಾಗೂ ಕಾರ್ಮಿಕ ಸಚಿವರಿಗೆ ಪತ್ರ ಬರೆದು ಕೊಟ್ಟಿದ್ದಾರೆ. ಈ ರೂ.32ಕೋಟಿಯ ಕಾರ್ಮಿಕ ವಸತಿ ಶಾಲೆ ಮುಂಬರುವ ದಿನಮಾನಗಳಲ್ಲಿ ಸಿಂದಗಿ ಮತಕ್ಷೇತ್ರಕ್ಕೆ ಮಂಜೂರಾಗುವ ಆಶಾ ಭಾವನೆ ನನ್ನಲ್ಲಿದೆ. ಒಟ್ಟಾರೆ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚನ ಆಧ್ಯತೆ ನೀಡಲಾಗುವುದು ಎಂದರು. 

ಆಲಮೇಲ ಪಪಂ ಅಧ್ಯಕ್ಷ ಸಾದಿಕ್ ಸುಂಬಡ ಮಾತನಾಡಿ, ಸಿಂದಗಿ ಮತಕ್ಷೇತ್ರದ ಶಾಸಕರು ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಮಾಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿರುವುದು ಶ್ಲಾಘನೀಯ. ಇಂದಿನ ಸಮಾಜದಲ್ಲಿ ಅಲ್ಪ ಸಂಖ್ಯಾತ ಬಂಧುಗಳು ತಮ್ಮ ಮಕ್ಕಳು ವಿದ್ಯಾವಂತರಾಗಿದ್ದರು ತಮ್ಮ ಮಕ್ಕಳಿಗೆ ಖಾಸಗಿ ಶಾಲೆಯ ದುಪ್ಪಟ್ಟು ಶುಲ್ಕ ನೀಡಿ ಓದಿಸಲು ಸಾಧ್ಯವಾಗುವುದಿಲ್ಲ. ಇಂತಹ ಸರಕಾರಿ ಶಾಲೆಗಳಾದರೆ ಅಲ್ಪ ಸಂಖ್ಯಾತ ಮಕ್ಕಳಿಗೆ ಅನುಕೂಲವಾಗಲಿದ ಎಂದರು. 

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಹ್ಮದ ಅತ್ತಾರ, ಯೋಜನಾ ಪ್ರಾಧಿಕಾರಿ ಅಧ್ಯಕ್ಷ ಬಸವರಾಜ ಕಾಂಬಳೆ, ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ನಾಯ್ಕೋಡಿ, ಶರಣಪ್ಪ ಶುಲ್ಪಿ, ಎಸ್‌.ಬಿ.ಖಾನಾಪೂರ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.