ನೀರಿನ ಮಹತ್ವದ ಅರಿವು ಮೂಡಿಸಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ 19: ನೈಸರ್ಗಿಕ ಸಂಪನ್ಮೂಲವಾದ ನೀರು ನಮ್ಮೆಲ್ಲರಿಗೂ ಅತ್ಯಮೂಲ್ಯವಾಗಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶದ ಜನ ಸಮುದಾಯದವರಿಗೆ ನೀರಿನ ಮಹತ್ವದ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಬುಧವಾರ, ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಫೀಡ್ಬ್ಯಾಕ್ ಫೌಂಡೇಶನ್ ವತಿಯಿಂದ ಜಲ ಜೀವನ್ ಮಿಷನ್ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಕುರಿತು ಆಯೋಜಿಸಿದ್ದ ನಾಲ್ಕು ದಿನ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯು ಗ್ರಾಮದ ಅಭಿವೃದ್ಧಿಯಲ್ಲಿ ಅಡಗಿದೆ. ಹಾಗಾಗಿ ಗ್ರಾಪಂ ಅಧಿಕಾರಿಗಳು ಹಾಗೂ ಚುನಾಯಿತ ಜನ ಪ್ರತಿನಿಧಿಗಳು ಸಮಗ್ರ ಗ್ರಾಮ ಅಭಿವೃದ್ಧಿಗೆ ಕಾರ್ಯಗತರಾಗಬೇಕು ಎಂದರು.
ತರಬೇತಿ ಪಡೆದವರು ಕ್ಷೇತ್ರ ಪರೀವೀಕ್ಷಣೆ ಕೈಗೊಳ್ಳಬೇಕು. ಇದರಿಂದ ಜಲ ಜೀವನ್ ಮಿಷನ್ 24*7 ಅನುಷ್ಠಾನಗೊಳಿಸಲು ಇನ್ನಷ್ಟು ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಜೆಜೆಎಂ ಯೋಜನೆಯಡಿ ಶುದ್ಧ ನೀರು ಸರಬರಾಜು ಮುಖ್ಯ ಮಾಡುವುದು ಮುಖ್ಯ ಧ್ಯೇಯವಾಗಬೇಕು. ಸಾರ್ವಜನಿಕರು ನೀರನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಇದೇ ವೇಳೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ ಗ್ರಾ.ಪಂ ಅಧ್ಯಕ್ಷರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹೆಚ್.ಇಂಧುದಾರ್, ಫೀಡ್ ಬ್ಯಾಂಕ್ ಫೌಂಡೇಶನ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅಜಯ್ ಸಿನ್ಹ, ಜಿ.ಪಂ ನ ಜಿಲ್ಲಾ ವ್ಯವಸ್ಥಾಪಕ ತಿಪ್ಪೇಸ್ವಾಮಿ, ಫೀಡ್ ಬ್ಯಾಕ್ ಸಂಸ್ಥೆಯ ರಾಜ್ಯ ಯೋಜನಾ ಸಮನ್ವಯಾಧಿಕಾರಿ ಡಾ.ನಂದಕುಮಾರ್, ಜಿಲ್ಲಾ ಸಂಯೋಜಕರಾದ ಓಂಕಾರ್, ಅಭಿಷೇಕ್. ಹೆಚ್., ತಿಪ್ಪೇಸ್ವಾಮಿ, ಶಶಿಕಾಂತ್, ರವಿ, ಮಂಜುನಾಥ್, ಐಎಸ್ಆರ್ಒ ಶ್ರೀಧರ್ ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು, ವಿವಿಧ ಗ್ರಾಪಂ ಅಧ್ಯಕ್ಷರು, ಪಿಡಿಒ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.