ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ರಕ್ಷಣೆ ಚಿಕಿತ್ಸೆ ಪಡೆಯುವ ಹಕ್ಕಿದೆ: ನ್ಯಾ.ದಿವ್ಯಶ್ರೀ ಸಿ.ಎಂ

ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ರಕ್ಷಣೆ ಚಿಕಿತ್ಸೆ ಪಡೆಯುವ ಹಕ್ಕಿದೆ: ನ್ಯಾ.ದಿವ್ಯಶ್ರೀ ಸಿ.ಎಂ Everyone has the right to mental health care and treatment: Justice Divyashri C.M.

ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ರಕ್ಷಣೆ ಚಿಕಿತ್ಸೆ ಪಡೆಯುವ ಹಕ್ಕಿದೆ: ನ್ಯಾ.ದಿವ್ಯಶ್ರೀ ಸಿ.ಎಂ. 

ಕಾರವಾರ, ಅ.15 ಸಾಮಾನ್ಯವಾಗಿ ಎಲ್ಲರೂ ಒತ್ತಡವನ್ನು ಹಾಗೂ ಜೀವನದ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಆದರೆ ಒತ್ತಡವನ್ನು ಮತ್ತು ಸವಾಲುಗಳನ್ನು  ಎದುರಿಸದೇ ಮಾನಸಿಕ ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಅಸ್ವಸ್ಥೆಗಳಿಗೆ ಚಿಕಿತ್ಸೆಯು ಎಲ್ಲಾ ಕಡೆಯಲ್ಲೂ ಲಭ್ಯವಿರುತ್ತದೆ ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಚಿಕಿತ್ಸೆ ಪಡೆಯುವ ಹಕ್ಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಹೇಳಿದರು. 

ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಅರಕ್ಷಕ, ಶಿಕ್ಷಣ, ಕಾರಾಗೃಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಕಾರವಾರ ಇವರ ಆಶ್ರಯದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. 

ಆರೋಗ್ಯ ವಿಚಾರದಲ್ಲಿ ಮೆಂಟಲ್ ಹೆಲ್ತ್‌ ಕೇರ್ ಕಾಯ್ದೆಯು ಅತ್ಯಂತ ಪ್ರಮುಖವಾದ ಕಾನೂನಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಜನರಲ್ಲಿ ಕಾನೂನುಗಳ ಬಗ್ಗೆ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೂ ಜೀವಿಸುವ ಹಕ್ಕು ಇರುವಂತೆ  ಮೆಂಟಲ್ ಹೆಲ್ತ್‌ ಕೇರ್ ಕಾಯ್ದೆಯನ್ವಯ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯದ ಹಕ್ಕಿದೆ ಎಂದರು. 

ಪ್ರತಿಯೊಂದು ಜಿಲ್ಲೆಯಲ್ಲೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಯಾವುದೇ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೆ ಕುಂದು ಕೊರತೆಗಳು ಉಂಟಾದಲ್ಲಿ  ಮೆಂಟಲ್ ಹೆಲ್ತ್‌ ರಿವ್ಯೂ ಬೋರ್ಡನಲ್ಲಿ ದೂರನ್ನು ಸಲ್ಲಿಸಬಹುದು. ದೈಹಿಕ ಆರೋಗ್ಯಕ್ಕೆ ಎಷ್ಟು ಪ್ರಾಮುಖ್ಯತೆಯನ್ನು ನೀಡುತ್ತೇವೆಯೋ ಮಾನಸಿಕ ಆರೋಗ್ಯಕ್ಕೂ ಕೂಡ ಅಷ್ಟೇ ಪ್ರಾಮುಖ್ಯತೆಯನ್ನು ನೀಡಬೇಕು ಎಂದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನೀರಜ್ ಬಿ.ವಿ ಮಾತನಾಡಿ, ಇತ್ತಿಚೀನ ದಿನಗಳಲ್ಲಿ ಮಾನಸಿಕ ರೋಗಿಗಳು ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮಾನಸಿಕ ಆರೋಗ್ಯದ ಕುರಿತು ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ದೈಹಿಕ ಕಾಯಿಲೆಗಳನ್ನು ಗುಣಪಡಿಸುವುದರ ಜೊತೆಯಲ್ಲಿ ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬಂದಿಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಮಾನಸಿಕ ಕಾಯಿಲೆಗಳಿಗೆ ನಿರಂತರವಾಗಿ ಸಮಾಲೋಚನೆ ಮತ್ತು ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಬಹುದು ಎಂದರು. 

ಮನೋವೈದ್ಯ ಡಾ. ಸುಹಾಸ್ ಮಾನಸಿಕ ಆರೋಗ್ಯದ ಉದ್ದೇಶ ಗುರಿ ಮತ್ತು ಪರಿಹಾರದ ಕುರಿತು ಉಪನ್ಯಾಸ ನೀಡಿ, ವೈದ್ಯರಿಂದ ಮಾತ್ರವಲ್ಲದೇ, ಪ್ರತಿಯೊಬ್ಬರು ಮಾನಸಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸಿ ಅವರಿಗೆ ಆತ್ಮಸ್ಥೈರ್ಯ, ಸಹಾಯ, ಜಾಗೃತಿ ಅರಿವು ಮೂಡಿಸುವುದರಿಂದ ಜೀವನ ಪರ್ಯಾಂತ ಮಾನಸಿಕ ಕಾಯಿಲೆಯಿಂದ ಬಳಲುವುದನ್ನು ಕಡಿಮೆ ಮಾಡಬಹದು. ಎಲ್ಲಾ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಸಮುದಾಯ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಮಾತ್ರೆಗಳು ಉಚಿತವಾಗಿ ಲಭ್ಯ ಇವೆ. ಸರ್ಕಾರದ ವತಿಯಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಹಾಗೂ ಟೆಲಿ ಮನಸ್ ಸಹಾಯವಾಣಿ 14416 ನಂಬರ್ ಗೆ 24*7 ಕರೆ ಮಾಡುವ ಮೂಲಕ ಹಾಗೂ ಟೆಲಿ ಮಾನಸ್ ಆ್ಯಫ್ ಮೂಲಕ ಸುಮಾರು 20 ಭಾಷೆಗಳಲ್ಲಿ ವಿಡಿಯೋ ಸಮಾಲೋಚನೆ, ಚಿಕಿತ್ಸೆ ನೀಡಲಾಗುತ್ತಿದೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಶಂಕರ್ ರಾವ್ ಮಾತನಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಬಸವರಾಜ್ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎಸ್ ಕನ್ನಕ್ಕನವರು ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ಜಾಥಾ ಕಾರ್ಯಕ್ರಮ ನಡೆಯಿತು.