ಪತ್ರಿಕಾ ಸ್ವಾತಂತ್ರ್ಯ ಉಳಿಸಲು ನಿರ್ಭೀತ ಪತ್ರಿಕೋದ್ಯಮ ಅಗತ್ಯ

ಪತ್ರಿಕಾ ಸ್ವಾತಂತ್ರ್ಯ ಉಳಿಸಲು ನಿರ್ಭೀತ ಪತ್ರಿಕೋದ್ಯಮ ಅಗತ್ಯ  Fearless journalism is necessary to save press freedom

ಕೊಪ್ಪಳ 01:  ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯ ಅಪಾಯದ ಸ್ಥಿತಿಯಲ್ಲಿದ್ದು, ಅನೇಕ ಸಮಸ್ಯೆಗಳು ಮತ್ತು ಸವಾಲುಗಳ ನಡುವೆ ಕೆಲಸ ಮಾಡುವ ಅನಿವಾರ್ಯತೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೃಷ್ಟಿಯಾಗಿದೆ ಎಂದು ಹಿರಿಯ ಪತ್ರಕರ್ತ ಹೊನಕೆರೆ ನಂಜುಂಡೇಗೌಡ ಹೇಳಿದರು.  

ಕೊಪ್ಪಳ ಮೀಡಿಯಾ ಕ್ಲಬ್ನಿಂದ ನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ಪತ್ರಕರ್ತರು ನಿರ್ಭೀತಿಯಿಂದ ವರದಿ ಮಾಡುವ ವಾತಾವರಣ ಕಡಿಮೆಯಾಗುತ್ತಿದೆ. ಪ್ರಶ್ನೆ ಕೇಳುವ ಮನೋಭಾವವೂ ಕುಗ್ಗುತ್ತಿದೆ. ಯಾವುದೇ ಸವಾಲುಗಳಿದ್ದರೂ ವೃತ್ತಿ ಬದ್ಧತೆಯಿಂದ ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು.  

ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿರುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ತನಿಖಾ ಪತ್ರಿಕೋದ್ಯಮದ ಶಕ್ತಿ ಕುಂದುತ್ತಿದ್ದು, ಯುವ ಪೀಳಿಗೆ ಉತ್ತಮ ಪತ್ರಿಕೋದ್ಯಮದ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿ ಹೊಂದಬೇಕು ಎಂದು ಹೇಳಿದರು.  

ಪತ್ರಕರ್ತ ಆನಂದ್ ಬೈದನಮನೆ ಮಾತನಾಡಿ, ಪತ್ರಿಕೋದ್ಯಮದಲ್ಲಿ 25 ವರ್ಷಗಳ ಸಾರ್ಥಕ ಸೇವೆ ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ವೃತ್ತಿಯಲ್ಲಿನ ಸವಾಲುಗಳ ನಡುವೆಯೂ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು ಕೆಲಸ ಮಾಡಬೇಕಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿದ್ದು, ಹೊಸ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದರು.