ಬೀದಿ ನಾಯಿಗಳ ನಿಯಂತ್ರಣಕ್ಕೆ ಶಸ್ತ್ರಚಿಕಿತ್ಸೆ, ಲಸಿಕೆ ಸಭೆಯಲ್ಲಿ ತಿರ್ಮಾಣ
Meeting concludes with surgery, vaccination to control stray dogs
ಗದಗ 19: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕುರಿತು ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಭೆ ಜರುಗಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಬೀದಿ ನಾಯಿಗಳಿಂದ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಅವುಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಬೀದಿ ನಾಯಿಗಳ ನಿಯಂತ್ರಣ ಎಂದರೆ ಅವುಗಳನ್ನು ಕೊಲ್ಲುವುದು ಅಲ್ಲ, ಮಾನವೀಯ ಮತ್ತು ಕಾನೂನುಬದ್ಧ ರೀತಿಯಲ್ಲಿ ಜನರ ಜೀವ, ಆರೊಗ್ಯ, ಸುರಕ್ಷತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಜಿಲ್ಲೆಯಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಮನ್ವಯದೊಂದಿಗೆ ಬೀದಿನಾಯಿ ಜನನ ನಿಯಂತ್ರಣಕಾರ್ಯಕ್ರಮವನ್ನು ಹಂತ ಹಂತವಾಗಿ ಜಾರಿಗೆ ತರಲು ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಬೀದಿ ನಾಯಿಗಳಿಂದ ಮಕ್ಕಳಿಗೂ, ಮಹಿಳೆಯರಿಗೂ, ಹಿರಿಯ ನಾಗರಿಕರಿಗೂ ಅಪಾಯ ಉಂಟಾಗುತ್ತಿರುವ ಘಟನೆಗಳು ಕೆಲವೆಡೆ ವರದಿಯಾಗಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಗಂಭೀರವಾಗುವ ಮುನ್ನ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಸಿ ಎನ್ ಶ್ರೀಧರ ಸೂಚಿಸಿದರು.
ಬೀದಿ ನಾಯಿಗಳನ್ನು ಸುರಕ್ಷಿತವಾಗಿ ವಶಪಡಿಸಿಕೊಳ್ಳಲು ವಿಶೇಷ ತಂಡ ರಚನೆ, ಅವುಗಳಿಗೆ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ, ಆರೋಗ್ಯ ತಪಾಸಣೆ ನಡೆಸಿ, ಗುರುತು ಹಾಕಿ ಹಿಂದಿರುಗಿ ಬಿಡುವ ಬಗ್ಗೆ ಪ್ರಾಥಮಿಕ ತೀರ್ಮಾನ ಕೈಗೊಳ್ಳಲಾಯಿತು. ಜೊತೆಗೆ ಹುಚ್ಚುನಾಯಿ ಶಂಕೆ ಇರುವ ನಾಯಿಗಳನ್ನು ಪ್ರತ್ಯೇಕವಾಗಿ ವಶಕ್ಕೆ ಪಡೆದು ಅಗತ್ಯ ವೈದ್ಯಕೀಯ ಪರೀಕ್ಷೆ ನಡೆಸುವ ವಿಷಯದಲ್ಲೂ ನಿರ್ದೇಶನ ನೀಡಲಾಯಿತು.
ಜಿಲ್ಲೆಯಾದ್ಯಂತ ಕಸದ ಸಮರ್ಕ ನಿರ್ವಹಣೆ ಇಲ್ಲದಿರುವುದು ಬೀದಿ ನಾಯಿಗಳ ಹೆಚ್ಚುವಿಕೆಗಾಗಿ ಪ್ರಮುಖ ಕಾರಣವಾಗಿದ್ದು, ಮಾರುಕಟ್ಟೆ, ಹೋಟೆಲ್, ಮಾಂಸದಂಗಡಿಗಳು, ಸಾರ್ವಜನಿಕ ಸ್ಥಳಗಳ ತ್ಯಾಜ್ಯವನ್ನು ಮುಚ್ಚಿದ ಡಬ್ಬಿಗಳಲ್ಲಿ ಸಂಗ್ರಹಿಸುವ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಸಭೆ ತೀರ್ಮಾನಿಸಿತು. ನಿಯಮ ಉಲ್ಲಂಘಿಸುವ ವಾಣಿಜ್ಯ ಸಂಸ್ಥೆಗಳ ವಿರುದ್ಧ ದಂಡ ವಿಧಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಯಿತು. ಶಾಲೆಗಳು, ಆಂಗನವಾಡಿಗಳು, ಗ್ರಾಮ ಸಭೆಗಳು, ಮಹಿಳಾ ಸಂಘಗಳ ಮೂಲಕ ನಾಯಿ ಕಚ್ಚಿದರೆ ತಕ್ಷಣ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೇಬಿಸ್ ಲಸಿಕೆಯ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಸಮಗ್ರ ಕಾರ್ಯಯೋಜನೆ ತಯಾರಿಸಿ, ನಿಗದಿತ ಅವಧಿಯಲ್ಲಿ ವರದಿ ಸಲ್ಲಿಸಲು ಒಪ್ಪಿಕೊಂಡರು. ಜಿಲ್ಲೆಯ ಜನರಲ್ಲಿ ಭಯ, ಆತಂಕ ದೂರ ಮಾಡಿ, ಮಾನವೀಯ ರೀತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವುದು ನಮ್ಮ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಸಭೆಯ ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ನೀಲಗುಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಎಚ್ ಬಿ ಹುಲಗಣ್ಣವರ, ಜಿ.ಪಂ ಸಹಕಾರ್ಯದರ್ಶಿ ಶಿವಾನಂದ ಕಲ್ಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 