ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅಭಿಪ್ರಾಯ ನಿಯಮಿತ ತಪಾಸಣೆ ಮತ್ತು ಆರಂಭಿಕ ಚಿಕಿತ್ಸೆಯಿಂದ ಸ್ತನ ಕ್ಯಾನ್ಸರ್ ತಡೆಗಟ್ಟಬಹುದು
Member Dr. Syed Nasir Hussain's opinion: Breast cancer can be prevented through regular screening a
ಬಳ್ಳಾರಿ 20: ನಿಯಮಿತ ತಪಾಸಣೆ ಮತ್ತು ಆರಂಭಿಕ ಚಿಕಿತ್ಸೆಯಿಂದ ಸ್ತನ ಕ್ಯಾನ್ಸರ್ ಅನ್ನು ತಡೆಗಟ್ಟಬಹುದಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರು ಹೇಳಿದರು. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ಏರಿ್ಡಸಿದ್ದ ‘ಸ್ವಸ್ಥ ಸೇತು’ ಆರೋಗ್ಯ ಸೇತುವೆ ಯೋಜನೆಯಡಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆಯ 2025-26 ನೇ ಸಾಲಿನ ವಾರ್ಷಿಕ ಮೌಲ್ಯಮಾಪನ ವರದಿಯ ಯೋಜನೆಯ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಗ್ರಾಮೀಣ ಮತ್ತು ನಗರ ಸಮುದಾಯಗಳಲ್ಲಿನ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ನ್ನು ತಡವಾಗಿ ಪತ್ತೆಹಚ್ಚುವಿಕೆ ಹಾಗೂ ಇದರಿಂದಾಗುವ ಹಾನಿಯನ್ನು ತಡೆಗಟ್ಟಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಜಾಗೃತಿ ಹಾಗೂ ಆರಂಭಿಕ ತಪಾಸಣೆಗಾಗಿ ಹುಮನ ಪೀಪಲ್ ಟು ಪೀಪಲ್ ಇಂಡಿಯಾ ಸಂಸ್ಥೆ ಮತ್ತು ಇಂಡಸ್ ಸೇತು ಸಂಸ್ಥೆ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ 2025ರ ಫೆಬ್ರವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ‘ಸ್ವಸ್ಥ ಸೇತು - ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಯೋಜನೆಯನ್ನು ಜಾರಿಗೆ ತರಲಾಯಿತು ಎಂದು ಅವರು ತಿಳಿಸಿದರು.
ಈ ಯೋಜನೆಯಡಿ ಜಿಲ್ಲೆಯಲ್ಲಿ ಸುಮಾರು 537 ಆಶಾ ಕಾರ್ಯಕರ್ತೆಯರಿಗೆ ಸಮುದಾಯಗಳಲ್ಲಿ ತಪಾಸಣೆ ಕೈಗೊಳ್ಳುವ ಕುರಿತು ತರಬೇತಿ ನೀಡಲಾಗಿತ್ತು. ಅವರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸುಮಾರು 1,50,000 ಮಹಿಳೆಯರನ್ನು ತಪಾಸಣೆಗೆ ಒಳಪಡಿಸಿದ್ದರು. ಅದರಲ್ಲಿ 1,20,204 ಮಹಿಳೆಯರು ಸ್ವಯಂ ಪರೀಕ್ಷೆ ಕೈಗೊಂಡಿದ್ದರು. 42 ಮಹಿಳೆಯರು ಅನುಮಾನಾಸ್ಪದ ಲಕ್ಷಣಗಳೊಂದಿಗೆ ಗುರುತಿಸಲಾಗಿದೆ. ಇವರಲ್ಲಿ 35 ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಅದರಲ್ಲಿ 15 ಜನ ಮಹಿಳೆಯರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 20 ಜನ ಮಹಿಳೆಯರಿಗೂ ಚಿಕಿತ್ಸೆ ನೀಡಲಾಗುವುದು ಎಂದರು.
ದೃಢಪಟ್ಟ ಮಹಿಳೆಯರಿಗೆ ಆರಂಭಿಕವಾಗಿ ಜಿಲ್ಲಾ ಆಸ್ಪತ್ರೆ, ಬಿಎಂಸಿಆರ್ ಸಿ ಆಸ್ಪತ್ರೆಗಳಲ್ಲಿ ಆರಂಭಿಕ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು ಮತ್ತು ಜಿಲ್ಲೆಗೆ ಹತ್ತಿರವಾಗುವ ಅಂತರ್ ರಾಜ್ಯದ ಹೈದ್ರಬಾದ್ ನಲ್ಲಿರುವ ಆಸ್ಪತ್ರೆಗೂ ಸಹ ಚಿಕಿತ್ಸೆಗೆ ಅನುಗುಣವಾಗಿ ಕಳುಹಿಕೊಡಲು ತೆಲಂಗಾಣದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು ಎಂದರು.
ಹಾಗಾಗಿ ಆಶಾಕಾರ್ಯಕರ್ತೆಯರು ಹೆಚ್ಚು-ಹೆಚ್ಚು ತಪಾಸಣೆ ಕಾರ್ಯ ಕೈಗೊಳ್ಳಬೇಕು. ರೋಗಿಗಳ ಚಿಕಿತ್ಸಾ ಖರ್ಚು-ವೆಚ್ಚುಗಳಿಗೆ ಸಂಬಂಧಿಸಿದಂತೆ ಅಗತ್ಯ ಸಹಕಾರ ನೀಡಲಾಗುವುದು. ಬಳ್ಳಾರಿ ಜಿಲ್ಲೆ ಮಾದರಿಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯವನ್ನು ಎಲ್ಲಾ ಜಿಲ್ಲೆಗಳಿಗೆ ಮತ್ತು ತಾಲ್ಲೂಕುಗಳಿಗೆ ವಿಸ್ತರಣೆಯ ಕುರಿತು ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರೊಂದಿಗೆ ಚರ್ಚಿಸಲಾಗುವುದು ಎಂದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ, ಹೆಣ್ಣಿನಿಂದಲೇ ಒಂದು ಕುಟುಂಬ ನಿರ್ವಹಣೆ ಸಾಧ್ಯ. ಹೆಣ್ಣಿನ ಆರೋಗ್ಯ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಯಾನ್ಸರ್ ತಡೆ ಹಾಗೂ ಆರಂಭದ ಹಂತದಲ್ಲೇ ಕಾಯಿಲೆ ಪತ್ತೆ ಹಚ್ಚುವಿಕೆ ಕುರಿತಂತೆ ಅರಿವು ಹೆಚ್ಚಿಸುವುದು ಮುಖ್ಯವಾಗಿದ್ದು, ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚುವ ವಿಧಾನಗಳ ಬಗ್ಗೆ ಅರಿವು ಮೂಡಿಸುವುದು ತುರ್ತು ಅಗತ್ಯವಾಗಿದೆ ಎಂದರು.
ವಾರ್ಷಿಕವಾರು ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯವು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸುದೈವದ ಸಂಗತಿಯಾಗಿದ್ದು, ಈ ಯೋಜನೆಗೆ ಮಾತೃ ದೇವೋ ಭವ ಎಂದು ನಾಮಕರಣ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯವು ಜಿಲ್ಲೆಯ ಎರಡು ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಿದ್ದು, ಅದರಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರ, 3 ಸಮುದಾಯ ಆರೋಗ್ಯ ಮತ್ತು 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿದೆ. ಮುಂಬರುವ ದಿನಗಳಲ್ಲಿ ತಪಾಸಣಾ ಕಾರ್ಯವನ್ನು ಎಲ್ಲಾ ತಾಲ್ಲೂಕು ಮತ್ತು ಗ್ರಾಮಗಳಿಗೂ ವಿಸ್ತರಿಸಲಾಗುವುದು. ಮುಖ್ಯವಾಗಿ ತಪಾಸಣಾ ಕಾರ್ಯ ನಿರಂತರವಾಗಿರಬೇಕು. ಇದಕ್ಕೆ ಆಶಾಕಾರ್ಯಕರ್ತೆಯರು ಕೈಜೋಡಿಸಬೇಕು ಎಂದರು.
ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ವೈದ್ಯರು ಮತ್ತು ಆಶಾಕಾರ್ಯಕರ್ತೆಯರಿಗೆ ಕಾರ್ಯಕ್ರಮದಲ್ಲಿ ಅಭಿನಂದನಾ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಬಿಎಂಸಿಆರ್ಸಿ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ನವದೆಹಲಿಯ ಎಚ್ಪಿಪಿಐ ಆರೋಗ್ಯ ಕಾರ್ಯಕ್ರಮಗಳ ಸಂಯೋಜಕ ಸುಬ್ರತ್ ಮೊಹಂತಿ, ನ್ಯಾಷನಲ್ ಪೋಗ್ರಾಂ ಮ್ಯಾನೇಜರ್ ನತ್ತು ಸಿಂಗ್, ಏರೋಇನ್ಫ್ರಾಸ್ಟ್ರಾಟ್ಜಿಕ್ಸ್ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕ ಪಾಲುದಾರರಾದ ಮೆಹನಾಜ್ ಅನ್ಸಾರಿ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಆಶಾಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 