ಸಚಿವ ಎಚ್‌.ಕೆ. ಪಾಟೀಲರಿಂದ ಗದಗ ತಾಲ್ಲೂಕು ಪ್ರಜಾಸೌಧ ಕಟ್ಟಡಕ್ಕೆ ಶಿಲಾನ್ಯಾಸಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಆತ್ಮಾವಲೋಕನ ಅಗತ್ಯ

ಸಚಿವ ಎಚ್‌.ಕೆ. ಪಾಟೀಲರಿಂದ ಗದಗ ತಾಲ್ಲೂಕು ಪ್ರಜಾಸೌಧ ಕಟ್ಟಡಕ್ಕೆ ಶಿಲಾನ್ಯಾಸಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಆತ್ಮಾವಲೋಕನ ಅಗತ್ಯ Minister H.K. Patil lays foundation stone for Gadag Taluk Praja Soudha building, Revenue Department

           ಗದಗ  19: ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಆತ್ಮಾವಲೋಕನ ಅತ್ಯಗತ್ಯವಾಗಿದೆ. ಕಚೇರಿಗೆ ಆಗಮಿಸುವ ನಾಗರಿಕರ ಗೌರವಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಅಧಿಕಾರಿಗಳ ನಡೆ ಮತ್ತು ವರ್ತನೆ ಇರಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರೂ ಆಗಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಕೆ. ಪಾಟೀಲರು ಹೇಳಿದರು.ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ಗದಗ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಗದಗ ತಾಲ್ಲೂಕು ಪ್ರಜಾಸೌಧ ಕಟ್ಟಡದ ಶಿಲಾನ್ಯಾಸ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗದಗ ತಾಲ್ಲೂಕು ಉತ್ತಮ ಶಿಸ್ತು ಮತ್ತು ಆಡಳಿತ ಕ್ರಮಗಳಿಂದ ಹೆಸರು ಪಡೆದಿದೆ. ನಿರ್ಮಾಣವಾಗುತ್ತಿರುವ ಹೊಸ ಪ್ರಜಾಸೌಧ ಕಟ್ಟಡವು ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಗೌರವ ತರುವ ಕಟ್ಟಡವಾಗಲಿದೆ. ಮುಂದಿನ ದಿನಗಳಲ್ಲಿ ಇದು ಸಾರ್ವಜನಿಕರಿಗೆ ನೆಮ್ಮದಿಯ ಹಾಗೂ ಸುಗಮ ಸೇವೆ ಒದಗಿಸುವ ಕೇಂದ್ರವಾಗಲಿದೆ ಎಂದು ಸಚಿವರು ಹೇಳಿದರು.ಇತ್ತೀಚೆಗೆ ಸಾರ್ವಜನಿಕರ ಬೇಟಿ ಕಾರ್ಯಕ್ರಮದಲ್ಲಿ ಅನೇಕ ನಾಗರಿಕರು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳೊಂದಿಗೆ ದಾಖಲೆಗಳನ್ನೂ ತೆಗೆದುಕೊಂಡು ನ್ಯಾಯಕ್ಕಾಗಿ ಆಗಮಿಸಿದ್ದರು. ಸರ್ಕಾರದ ಕೆಲಸಗಳು ವಿಳಂಬವಾಗುತ್ತಿದ್ದರೆ ಅಥವಾ ಇತ್ಯರ್ಥವಾಗದೆ ಉಳಿಯುತ್ತಿದ್ದರೆ, ನಮ್ಮ ಆಡಳಿತ ವ್ಯವಸ್ಥೆಯಲ್ಲಿಯೇ ಲೋಪದೋಷಗಳಿವೆ ಎಂಬುದನ್ನು ಒಪ್ಪಿಕೊಳ್ಳಬೇಕು. ಅವುಗಳನ್ನು ಗುರುತಿಸಿ ಸರಿಪಡಿಸಲು ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಉತ್ತಮ ಆಡಳಿತ ಸಾಧ್ಯವಾಗಬೇಕು ಎಂಬುದು ಸರ್ಕಾರದ ಇಚ್ಛಾಶಕ್ತಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.ತಹಶಿಲ್ದಾರರ ಕಚೇರಿಗಳಲ್ಲಿನ ಬಾಕಿ ಪೈಲ್‌ಗಳ ಕುರಿತು ಜಿಲ್ಲಾಧಿಕಾರಿಗಳು ಪರೀಶೀಲನೆ ನಡೆಸಬೇಕು. ಕಚೇರಿ ಸ್ಥಳಾಂತರಗೊಳ್ಳುವ ಮುನ್ನ ಎಲ್ಲಾ ಬಾಕಿ ಕಡತಗಳನ್ನು ಇತ್ಯರ್ಥಪಡಿಸಿ, ಹೊಸ ಕಚೇರಿಗೆ ಪ್ರವೇಶಿಸಬೇಕು. ಹೊಸ ಪ್ರಜಾಸೌಧದಲ್ಲಿ ಅಧಿಕಾರಿಗಳಿಂದ ಹೆಚ್ಚಿನ ಜವಾಬ್ದಾರಿ ಮತ್ತು ಜನಪರ ಕಾರ್ಯಕ್ಷಮತೆ ನೀರೀಕ್ಷಿಸಲಾಗಿದೆ ಎಂದು ಸಚಿವರು ಹೇಳಿದರು. 

           ಕಂದಾಯ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಅಧಿಕಾರಿಗಳ ಬಗ್ಗೆ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಬಾರದು. ಎಜೆಂಟರ ಹಾವಳಿ ಸಂಪೂರ್ಣವಾಗಿ ನಿಲ್ಲಿಸಬೇಕು. ತಾತ್ಕಾಲಿಕ ಕಚೇರಿಗಳಲ್ಲೂ ಎಜೆಂಟರ ಪ್ರವೇಶ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲು ಸೂಚಿಸಿದರು.ಆಡಳಿತ ಸುಧಾರಣೆ ಒಬ್ಬರಿಂದ ಸಾಧ್ಯವಿಲ್ಲ, ಜವಾಬ್ದಾರಿ ಹೊತ್ತಿರುವ ಎಲ್ಲ ಅಧಿಕಾರಿಗಳಿಂದ ಮಾತ್ರ ಸಾಧ್ಯ. ಅಧಿಕಾರಿಗಳಲ್ಲಿ ಸೌಜನ್ಯಪೂರ್ಣ ವರ್ತನೆ ಕಾಣಿಸಬೇಕು. ನಾಗರಿಕರು ಕಚೇರಿಗೆ ಗೌರವಯುತವಾಗಿ ಬಂದು ತಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿಕೊಂಡು ಹೋಗುವಂತಾಗಬೇಕು. ಸಾರ್ವಜನಿಕರನ್ನು ಕಚೇರಿಯಲ್ಲಿ ನಿಲ್ಲಿಸಿ ಮಾತನಾಡಿಸುವ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಎಚ್ಚರಿಸಿದರು.ಸರ್ಕಾರದ ಗ್ಯಾರಂಟಿ ಯೋಜನೆಗಳು, ವಿಮಾ ಮೊತ್ತ ಸೇರಿದಂತೆ ಹಲವು ಸೌಲಭ್ಯಗಳು ಈಗ ನೇರವಾಗಿ ಹಾಗೂ ಸರಳವಾಗಿ ಜನರಿಗೆ ಲಭ್ಯವಾಗುತ್ತಿವೆ. ಇದೇ ರೀತಿಯಲ್ಲಿ ಆಡಳಿತ ವ್ಯವಸ್ಥೆ ಇನ್ನಷ್ಟು ಸುಧಾರಿಸಬೇಕು. ಸರ್ಕಾರದ ಸೌಲಭ್ಯಗಳನ್ನು ನಾಗರಿಕರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.ಗದಗ ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ಸ್ಮಶಾನ ವ್ಯವಸ್ಥೆ ಕಲ್ಪಿಸಲು ಸ್ವಾತಂತ್ರ್ಯ ನಂತರ 80 ವರ್ಷ ಬೇಕಾಯಿತು. ದಾಖಲೆಗಳು ಸರಿಯಾಗಿದ್ದರೂ ನಾಗರಿಕರು ಗುಲಾಮಗಿರಿ ಮನೋಭಾವದಿಂದ ಹೊರಬಂದು ತಮ್ಮ ಹಕ್ಕುಗಳನ್ನು ತಾವೇ ಪಡೆದುಕೊಳ್ಳಬೇಕು. ಇಂದಿನ ತಂತ್ರಜ್ಞಾನ ಮತ್ತು ಕಾನೂನು ವ್ಯವಸ್ಥೆ ಎಲ್ಲವೂ ಬೆರಳ ತುದಿಯಲ್ಲಿ ಲಭ್ಯವಿದೆ. ಬಡತನ ಅಥವಾ ಅಜ್ಞಾನ ಇರಬಹುದು, ಆದರೆ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತಂದುಕೊಳ್ಳಬಾರದು ಎಂದು ಸಚಿವರು ಕರೆ ನೀಡಿದರು.ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ ಕೂಡಲೇ ನಾಗರಿಕರಿಗೆ ಸ್ವೀಕೃತಿ ನೀಡುವ ವ್ಯವಸ್ಥೆ ಕಡ್ಡಾಯವಾಗಬೇಕು.  

         2027ರ ಜನವರಿ 26ರೊಳಗೆ ಪ್ರಜಾಸೌಧ ಕಟ್ಟಡ ಲೋಪಾರೆ​‍್ಣ ಆಗಬೇಕು. ಕಟ್ಟಡವು ಉತ್ತಮ ಗುಣಮಟ್ಟದಿಂದ ನಿರ್ಮಾಣವಾಗಬೇಕು. ಗುತ್ತಿಗೆದಾರರು ಯಾರಿಗೂ ಲಂಚ ನೀಡಬಾರದು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಎನ್‌. ಶ್ರೀಧರ್ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ರಿಟಿಷ್ ಆಡಳಿತ ಕಾಲದಲ್ಲಿ ತಾಲ್ಲೂಕು ಕಚೇರಿಯಿಂದಲೇ ಭೂಮಿಗೆ ಸಂಬಂಧಿಸಿದ ಹಾಗೂ ಇತರೆ ಆಡಳಿತ ಕಾರ್ಯಗಳು ನಡೆಯುತ್ತಿದ್ದು, ನಂತರ ವಿಕೇಂದ್ರೀಕರಣದೊಂದಿಗೆ ವಿವಿಧ ಇಲಾಖೆಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಲಾಗಿದೆ ಎಂದು ವಿವರಿಸಿದರು.ಪ್ರಜಾಸೌಧ ಕಟ್ಟಡವನ್ನು ಸುಮಾರು 16 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಗುತ್ತಿಗೆದಾರರು 11 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಇಲ್ಲಿ ಭೂಮಿಗೆ ಸಂಬಂಧಿಸಿದ ಎಲ್ಲಾ ಸೇವೆಗಳು ಒಂದೇ ಕಟ್ಟಡದಲ್ಲಿ ಲಭ್ಯವಾಗಲಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಷುಷಹಿ್ಪೈಳಿಷ್ಫ್ಘ್ತ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಮಟ್ಟದ ಅಧ್ಯಕ್ಷ ಅಶೋಕ ಮಂದಾಲಿ, ಜಿಪಂ ಮಾಜಿ ಅಧ್ಯಕ್ಷರಾದ ಸಿದ್ದು ಪಾಟೀಲ ಹಾಗೂ ವಾಸಣ್ಣ ಕುರಡಗಿ, ಎಸ್‌.ಎನ್‌. ಬಳ್ಳಾರಿ, ಬಸವರಾಜ ಕಡೇಮನಿ, ಫಾರುಕ್ ಹುಬ್ಬಳ್ಳಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್‌., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶಿಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ರಾಜಾರಾಮ್ ಪವಾರ, ಮಲ್ಲಯ್ಯ ಕೆ. ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.