ನಕಲಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಪ್ರಕರಣ ದಾಖಲೆಗೆ ಸೂಚನೆ

Notice to file a case against those who obtained fake caste certificates

ನಕಲಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಪ್ರಕರಣ ದಾಖಲೆಗೆ ಸೂಚನೆ 

ಹಾವೇರಿ 26: ಇತರೆ ಸಮುದಾಯದವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣಪತ್ರ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಿಗೆ ಸಲಹೆ ನೀಡಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ  ಇರುವ ಸರ್ಕಾರದ ಸೌಲಭ್ಯಗಳ  ಕುರಿತು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನಿನಡಿ ಇರುವ ಸೌಲಭ್ಯಗಳ ಕುರಿತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು. ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ರಮೇಶ ಆನವಟ್ಟಿ, ಎನ್‌.ಎಂ.ಗಾಳೆಮ್ಮನವರ, ಮುತ್ತುರಾಜ ಮಾದರ ಅವರು ಮಾತನಾಡಿ, ಕಳ್ಳಿಹಾಳ ಗ್ರಾಮದ ಪರಿಶಿಷ್ಟ ಜಾತಿಯವರ ಸ್ಮಶಾನಕ್ಕೆ ದಾರಿ ಸೌಲಭ್ಯ,  ತುಂಗಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ ಪಡೆದುಕೊಂಡ ಹೆಚ್ಚುವರು  ಭೂಮಿ  ಮರಳಿ ರೈತರಿಗೆ ನೀಡುವಂತೆ,  ಸವಣೂರ ತಾಲೂಕು ಹಿರೇಮುಗದೂರ ಗ್ರಾಮದ  ಸರ್ಕಾರಿ ಪ್ರಾಥಮಿಕ ಶಾಲೆಗೆ ನಿಯಮಾನುಸಾರ ಪರಿಶಿಷ್ಟ ಜಾತಿಯವರನ್ನು ಅಡುಗೆ ಸಹಾಯಕ ಹುದ್ದೆಗೆ ನೇಮಕಕ್ಕೆ ಕ್ರಮವಹಿಸುವಂತೆ  ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಸದಸ್ಯರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕಳ್ಳಿಹಾಳ ಗ್ರಾಮದ ಸ್ಮಶಾನ ಭೂಮಿಗೆ ಕೂಡಲೇ ಕ್ರಿಯಾಯೋಜನೆ ತಯಾರಿಸುವಂತೆ ಪಂಚಾಯತ್  ರಾಜ್ ಇಲಾಖೆ ಅಧಿಕಾರಿಗಳಿಗೆ,  ಹಿರೇಮುಗದೂರ ಅಡುಗೆ ಸಹಾಯಕರ ಹುದ್ದೆಗೆ ಈ ಮೊದಲು ನಿಯಮಾನುಸಾರ ಆಯ್ಕೆ ಅಭ್ಯರ್ಥಿ ಪಟ್ಟಿ ರದ್ದು ಪಡಿಸಿ,  ಪುನಃ ಮರು ಅರ್ಜಿ ಕರೆದಿದ್ದು  ಸರಿಯಾದ ಕ್ರಮವಲ್ಲ.  ಈ ಕುರಿತು ತಾಲೂಕು ಪಂಚಾಯತ್  ಕಾರ್ಯನಿರ್ವಾಹಕ ಅಧಿಕಾರಿಗಳು ಕೂಲಕುಂಷವಾಗಿ ಪರೀಶೀಲಿಸಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಅವರು ಮಾತನಾಡಿ,  ಜನವರಿ-2025 ರಿಂದ ಈವರೆಗೆ ವಿವಿಧ ನಾಲ್ಕು ದೌರ್ಜನ್ಯ ಪ್ರಕರಣಗಳಲ್ಲಿ ರೂ. 77,329 ಮೊತ್ತ ಪರಿಹಾರ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಾಲ್,  ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಸರೋಜಾ ಕೂಡಲಗಿಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶ್ರೀಮತಿ ಮಮತಾ,  ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬರಗಿಮಠ, ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ಶ್ರೀಧರ ಆನವಟ್ಟಿ, ಕೃಷ್ಣಪ್ಪ ಚವ್ಹಾಣ ಹಾಗೂ  ಇತರೆ ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.