ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ ಖಾಯಂ ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶ ಹರೀಶ ಕರೆ

ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ  ಖಾಯಂ ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶ ಹರೀಶ ಕರೆ Permanent People's Court special campaign launched Judge Harish calls for proper utilization of Per

ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ  ಖಾಯಂ ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶ ಹರೀಶ ಕರೆ 

ವಿಜಯಪುರ, ಆಗಸ್ಟ್‌ 28 : ಖಾಯಂ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಂಡು ನೆಮ್ಮದಿ ಜೀವನ ನಡೆಸುವಂತೆ  ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ.ಕರೆ ನೀಡಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಖಾಯಂ ಜನತಾ ನ್ಯಾಯಾಲಯ ಕಲ್ಬುರ್ಗಿ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ಖಾಯಂ ಜನತಾ ನ್ಯಾಯಾಲಯ ಮುಖ್ಯವಾಗಿ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ, ವಿವಾದಗಳನ್ನು ಹಾಗೂ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಖಾಯಂ ಜನತಾ ನ್ಯಾಯಾಲಯ ಪ್ರಮುಖ ಪಾತ್ರ ವಹಿಸುತ್ತದೆ.  ಪ್ರಯಾಣಿಕರನ್ನು ಅಥವಾ ಸರಕು ಸಾಗಾಣೆ ಮಾಡುವ ಭೂಸಾರಿಗೆ, ಜಲಸಾರಿಗೆ ಹಾಗೂ ವಾಯು ಸಾರಿಗೆ ಸೇವೆಗಳು, ಅಂಚೆ, ತಂತಿ ಹಾಗೂ ದೂರವಾಣಿ ಸೇವೆಗಳು, ವಿದ್ಯುತ್, ಬೆಳಕು, ನೀರು ಸರಬರಾಜು ಮಾಡುವ ಯಾವುದೇ ಸಂಸ್ಥೆಗಳ ಸೇವೆಗಳ, ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ, ಚರಂಡಿ ವ್ಯವಸ್ಥೆ ಕಾರ್ಯಗಳು ವಿಮಾ ಸೇವೆಗಳು, ಆಸ್ಪತ್ರೆ ಅಥವಾ ಓಷಧಾಲಯ ಸೇವೆಗಳು, ಬ್ಯಾಂಕ್ ಸೇರಿದಂತೆ ಹಣಕಾಸು ಸಂಸ್ಥೆಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಸೇವೆಗಳು, ಗೃಹ ಮತ್ತು ರಿಯಲ್ ಎಸ್ಟೇಟ್ ಸಂಬಂಧಪಟ್ಟ ಸೇವೆಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅರ್ಜಿಯನ್ನು ನೇರವಾಗಿ ಅಥವಾ ವಕೀಲರ ಮೂಲಕ ಖಾಯಂ ನ್ಯಾಯಾಲಯಕ್ಕೆ ಸಲ್ಲಿಸಿ ಯಾವುದೇ ಶುಲ್ಕವಿಲ್ಲದೇ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.  

ರಾಜ್ಯದಲ್ಲಿ ಒಟ್ಟು 6 ಖಾಯಂ ಜನತಾ ನ್ಯಾಯಾಲಯಗಳಿದ್ದು, ಜಿಲ್ಲೆಯು ಕಲ್ಬುರ್ಗಿಯ ಖಾಯಂ ಜನತಾ ನ್ಯಾಯಾಲಯಕ್ಕೆ ಒಳಪಡುತ್ತದೆ. ಕಲ್ಬುರ್ಗಿ ವ್ಯಾಪ್ತಿಯಲ್ಲಿ ಕಲ್ಬುರ್ಗಿ, ಬೀದರ, ರಾಯಚೂರು, ಯಾದಗಿರ ಹಾಗೂ ವಿಜಯಪುರ ಜಿಲ್ಲೆ ಒಳಪಡುತ್ತದೆ. ಜನತಾ ನ್ಯಾಯಾಲಯದಲ್ಲಿ  ಒಂದು ಕೋಟಿ ರೂ. ಒಳಗಿನ ವ್ಯಾಜ್ಯಗಳ ಪ್ರಕರಣಗಳನ್ನು ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ. ಪ್ರಕರಣಗಳನ್ನು ದಾಖಲು ಮಾಡುವ ಅರ್ಜಿದಾರರಿಗೆ ಯಾವುದೇ ಆದಾಯಮಿತಿ ಇರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ದಾಖಲಿಸುವ ಪ್ರಕರಣ ಬೇರೆ ಯಾವುದೇ ನ್ಯಾಯಾಲಯಗಳಲ್ಲಿ ದಾವೆ ಅಥವಾ ಪ್ರಕರಣ ಹೂಡಿರಬಾರದು. ಖಾಯಂ ಜನತಾ ನ್ಯಾಯಾಲಯ ನೀಡುವ ತೀರ​‍್ು ಯಾವುದೇ ಸಿವ್ಹಿಲ್ ಅಥವಾ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿರುವುದಿಲ್ಲ. ಆದ್ಯಾಗ್ಯೂ ಉಚ್ಛನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತೀರ​‍್ಪನನು ಪ್ರಶ್ನಿಸಬಹುದಾಗಿದೆ ಎಂದು ಅವರು ಹೇಳಿದರು.  

ಖಾಯಂ ಜನತಾ ನ್ಯಾಯಾಲಯದಲ್ಲಿ ಸಲ್ಲಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷಿದಾರರಿಗೆ ಮನವೊಲಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತದೆ. ಆದ್ಯಾಗ್ಯೂ ಉಭಯ ಪಕ್ಷಗಾರರು ಒಪ್ಪದೇ ಇದ್ದ ಸಂದರ್ಭದಲ್ಲಿ ಖಾಯಂ ಜನತಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಕಾನೂನಿನ್ವಯ ತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸಲು ಖಾಯಂ ಜನತಾ ನ್ಯಾಯಾಲಯದಿಂದ ತೀರ​‍್ು ನೀಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಈ ಖಾಯಂ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿ ಜೀವನಕ್ಕೆ ಮುಂದಾಗುವಂತೆ ಅವರು ಕರೆ ನೀಡಿದರು.  

ಜಿಲ್ಲೆಯ ವಕೀಲರ ಸತತ ಪರಿಶ್ರಮದಿಂದಾಗಿ ಜಿಲ್ಲೆಯಲ್ಲಿ ಖಾಯಂತ ಜನತಾ ನ್ಯಾಯಾಲಯ ನಿರ್ವಹಿಸಲಾಗುತ್ತಿದ್ದು, ರೈತರಿಗೆ, ಸಾಮಾನ್ಯ ಜನರಿಗೆ ಈ ಖಾಯಂ ಜನತಾ ನ್ಯಾಯಾಲಯ ಅತ್ಯುಪಯುಕ್ತವಾಗಿದೆ. ಅಧಿಕಾರಿಗಳು ತಮ್ಮ ಹಂತದ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರೆಪಣೆ ಹಾಗೂ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.  

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ಪ್ರಕರಣ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ಭಯವಿಲ್ಲದೇ ತಮ್ಮ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಖಾಯಂ ಜನತಾ ನ್ಯಾಯಾಲಯ ವೇದಿಕೆಯಾಗಿದೆ. ಜನರು ನೇರವಾಗಿ ಅಥವಾ ವಕೀಲರ ಮೂಲಕ ನ್ಯಾಯಾಲಯಕ್ಕೆ ಹೋಗಿ ತಮ್ಮ ಪ್ರಕರಣಗಳನ್ನು ದಾಖಲಿಸಿ ಪರಿಹರಿಸಿಕೊಳ್ಳಬಹುದಾಗಿದೆ. ಖಾಯಂ ಜನತಾ ನ್ಯಾಯಾಲಯದಿಂದ ಶೀಘ್ರವೇ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಈ ಕುರಿತು ಜಿಲ್ಲೆಯ ವಿವಿಧ ತಾಲೂಕಾ, ಗ್ರಾಮ ಪಂಚಾಯತ್ ಮಟ್ಟದಲ್ಲಿ  ನ್ಯಾಯಬೆಲೆ ಅಂಗಡಿಗಳಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯ ಜನರು ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು.  

ಕಲ್ಬುರ್ಗಿಯ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರೂ ಆದ ಜಿಲ್ಲಾ ನ್ಯಾಯಾಧೀಶ ಎಸ್‌.ಎಲ್‌. ಚವ್ಹಾಣ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಹಯೋಗದಲ್ಲಿ ಪ್ರತಿ ತಿಂಗಳೂ  ಜನತಾ ನ್ಯಾಯಾಲಯ ನಡೆಸಲಾಗುತ್ತದೆ. 1987ರ ಕಾನೂನು ಸೇವೆಗಳ ಪ್ರಾಧಿಕಾರದ ಕಾಯ್ದೆಯನ್ನು 2007ರಲ್ಲಿ ತಿದ್ದುಪಡಿ ಮಾಡಿದ ನಂತರ 2007ರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರ, ಬೆಳಗಾವಿ, ಧಾರವಾಡ, ಕಲ್ಬುರ್ಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ಖಾಯಂ ಜನತಾ ನ್ಯಾಯಾಲಯಗಳನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.  

ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ.ಬಿರಾದಾರ, ಕಲ್ಬುರ್ಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ  ವಿಜಯ ವಿಠ್ಠಲ, ಜಿ.ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಸಿದ್ಧಯ್ಯ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲಾ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.