ಸ್ವ-ಸಹಾಯ ಗುಂಪುಗಳ ಉತ್ಪನ್ನ ಮಾರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಉತ್ತೇಜನ: ಸಿ.ಎಂ ಸಿದ್ದರಾಮಯ್ಯ
Promotion of self-help groups' product sales at the national level: CM Siddaramaiah
ಬೆಳಗಾವಿ, ಡಿ.12 : ರಾಜ್ಯದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸುವ ಉತ್ಪನ್ನಗಳ ಮಾರಾಟಕ್ಕೆ ಹಳ್ಳಿಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕಸಂತೆ, ಜಿಲ್ಲಾ ವಸ್ತುಪ್ರದರ್ಶನ ಮಾರಾಟಮೇಳ ಏರಿ್ಡಸುವುದಷ್ಟೆ ಅಲ್ಲದೆ ಇತರೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ರಾಷ್ಟ್ರೀಯ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾಡಳಿತ, ಜಿಲ್ಲಾಪಂಚಾಯತ ಮತ್ತು ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಸರದಾರ ಮೈದಾನದಲ್ಲಿ ಶುಕ್ರವಾರ (ಡಿ.12) ಜರುಗಿದ ಸರಸ್ ಮೇಳ-2025ನ್ನು ಉದ್ಘಾಟಿಸಿ ಮಾತನಾಡಿದರು. ಸ್ವ- ಸಹಾಯ ಗುಂಪಿನ ಮಹಿಳೆಯರು ಜೀವನೋಪಾಯದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ಅವಶ್ಯಕ ಸಾಮರ್ಥ್ಯಾಭಿವೃದ್ಧಿ ಕೌಶಲ್ಯ ತರಬೇತಿಗಳು ಉತ್ಪನ್ನಗಳ ಬ್ರಾಂಡಿಂಗ್ ಪ್ಯಾಕಿಂಗ್ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ನಿರಂತರ ಬೆಂಬಲಿಸಲಾಗುತ್ತಿದೆ ಎಂದರು.
ಅಭಿಯಾನದಡಿ ಪ್ರಮುಖವಾಗಿ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಕೇವಲ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ಬೆಂಬಲಿಸುವುದು ಅಷ್ಟೇ ಅಲ್ಲದೇ, ಅವರ ಹಾಗೂ ಅವರ ಕುಟುಂಬದ ಸಮಗ್ರ ಅಭಿವೃದ್ಧಿಗಾಗಿ ಲಿಂಗತ್ಯ ಸಮಾನತೆ, ಆಹಾರ, ಪೌಷ್ಟಿಕತೆ, ಆರೋಗ್ಯ ಮತ್ತು ನೈರ್ಮಲ್ಯ ಕ್ಷೇತ್ರಗಳಲ್ಲಿ ಅಜ್ಞಾನ ಮತ್ತು ಮೂಢ ನಂಬಿಕೆಗಳ ವಿರುದ್ಧ ಜಾಗೃತಿ, ಶಿಕ್ಷಣ ಮತ್ತು ಅವಶ್ಯಕ ಜ್ಞಾನ ಒದಗಿಸುವ ಹಲವಾರು ಚಟುವಟಿಕೆಗಳನ್ನು ಗ್ರಾಮ ಮಟ್ಟದಲ್ಲಿ ಸಂಘಟಿಸುವ ಮೂಲಕ ಮಹಿಳೆಯರು ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಸಬಲರಾಗಲು ಪೂರಕ ವೇದಿಕೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಶರಣ ಪ್ರಕಾಶ ಪಾಟೀಲ ಮಾತನಾಡಿ ಪ್ರತಿ ಅಧಿವೇಶನದ ಸಂದರ್ಭದಲ್ಲಿ ಸರಸ್ ಮೇಳ ಆಯೋಜಿಸಲಾಗುತ್ತಿದೆ. ರಾಜ್ಯ ಸರಕಾರ ಮಹಿಳೆಯರ ಮೇಲೆ ವಿಶ್ವಾಸ ಹಾಗೂ ಅಪಾರ ನಂಬಿಕೆಯಿದ್ದು ಇವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು. ರಾಜ್ಯ ಸರಕಾರದ ಮಹತ್ವಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಕೇಂದ್ರಿಕೃತವಾಗಿಟ್ಟುಕೊಂಡು ಜಾರಿಗೊಳಿಸಲಾಗಿದೆ. ಮಹಿಳೆಯರ ಕೈಯಲ್ಲಿ ನೀಡುವ ಪ್ರತಿ ರೂಪಾಯಿ ಕೂಡ ಅವರ ಕುಟುಂಬ ನಿರ್ವಹಣೆಗೆ ಸರಿಯಾಗಿ ಬಳಕೆ ಆಗುವದರ ಜೊತೆಗೆ ಆರ್ಥಿಕ ಸ್ವಾವಲಂಭನೆಗೆ ಅನುಕೂಲವಾಗಿದೆ.
ರಾಜ್ಯದ ಮೂರು ಲಕ್ಷ ಸ್ವ ಸಹಾಯ ಗುಂಪುಗಳಡಿ 32 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 39 ಸಾವಿರ ಸ್ವ-ಸಹಾಯ ಗುಂಪುಗಳಡಿ 3.90 ಲಕ್ಷ ಕುಟುಂಬಗಳನ್ನು ನಗರ ಅಭಿಯಾನದಡಿ ಸಂಘಟಿಸಲಾಗಿರುತ್ತದೆ ಎಂದರು. ಸ್ವ ಸಹಾಯ ಗುಂಪುಗಳಿಗೆ ಇಲ್ಲಿಯವರೆಗೆ ಒಂದು ಕೋಟಿ ರೂ. ಅಧಿಕ ಮೊತ್ತದ ಬಂಡವಾಳವನ್ನು ಹೂಡಿಕೆ ಮಾಡುವದರ ಜೊತೆಗೆ ಹೊಸ ಸ್ವಸಹಾಯ ಗುಂಪುಗಳಿಗೆ ಸುತ್ತು ನಿಧಿಯನ್ನು ಸಹ ನೀಡಲಾಗುತ್ತಿದೆ.
ಸ್ವ ಸಹಾಯ ಗುಂಪುಗಳಿಗೆ ಉತ್ತೇಜನ ನೀಡುವ ಸಲುವಾಗಿ ಅಕ್ಕ ಕ್ರೆಡಿಟ್ ಸೊಸೈಟಿಗಳನ್ನು ಪ್ರಾರಂಭಿಸಲಾಗುತ್ತಿದೆ. ಮಹಿಳೆಯರಿಗಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸ್ವಾವಲಂಭಿಗಳಾಗಲು ಸಚಿವರಾದ ಶರಣ ಪ್ರಕಾಶ ಪಾಟೀಲ ಅವರು ಕರೆ ನೀಡಿದರು. ಶಾಸಕರಾದ ರಾಜು (ಆಸೀಫ್) ಸೇಠ ಅವರು ಮಾತನಾಡಿ ಕಳೆದ ಬಾರಿ ಆಯೋಜಿಸಲಾದ ಸರಸ್ ಮೇಳ ಯಶಸ್ವಿಯಾಗಿದೆ.ಮಹಿಳೆಯರಿಂದ ನಡೆಸಲಾಗುವ ಸ್ವ-ಸಹಾಯ ಗುಂಪುಗಳಿಂದ ಉತ್ಪಾದಿಸುವ ಸಾಮಗ್ರಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಸರಸ್ ಮೇಳ ಒಂದು ಉತ್ತಮ ವೇದಿಕೆಯಾಗಿದೆ ಇದರ ಸದಬಳಕೆ ಮಾಡಿಕೊಳ್ಳಹವಂತೆ ತಿಳಿಸಿದರು.
ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲನಿ ರಜನೀಶ ಅವರು ಮಾತನಾಡಿ ರಾಜ್ಯ ಸರಕಾರದಿಂದ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಧೃಡರ ಹಾಗೂ ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಸಾಲ ಮಂಜೂರಾತಿ ಪತ್ರ ವಿತರಣೆ: ಇದೇ ಸಂದರ್ಭದಲ್ಲಿ ವಿವಿಧ ಜಿಲ್ಲೆಯ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಹಾನಗರ ಪಾಲಿಕೆ ಉಪ ಮಹಾಪೌರರಾದ ವಾಣಿ ವಿಲಾಸ ಜೋಶಿ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಭರಮಣ್ಣ ಉಪ್ಪಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯದರ್ಶಿಗಳಾದ ಮನೋಜಕುಮಾರ ಮೀನಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಂ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೆಶಕರಾದ ಸ್ನೇಹಲ್ ಆರ್ ಅವರು ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 