ಲಕ್ಷ್ಮೇಶ್ವರದಲ್ಲಿ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆಗೆ ಜನರ ಬೆಂಬಲ

ಲಕ್ಷ್ಮೇಶ್ವರದಲ್ಲಿ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆಗೆ ಜನರ ಬೆಂಬಲ  Public support for SIR voters' list revision in Lakshmeshwar

ಲಕ್ಷ್ಮೇಶ್ವರ 02: ಭಾರತ ಚುನಾವಣಾ ಆಯೋಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌-2026) ಅಭಿಯಾನಕ್ಕೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹ ಹಾಗೂ ಪರೀಶೀಲನೆ ಕಾರ್ಯ ನಡೆಸುತ್ತಿದ್ದಾರೆ.  

ಪಟ್ಟಣದ ವಾಚೀಶ್ವರ ದೇವಸ್ಥಾನದ ಸಮೀಪ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಪುರಸಭೆಯ ಮಾಜಿ ಸದಸ್ಯ ಮಹೇಶ್ ಹೋಗಿ ಸೊಪ್ಪಿನ ಹಾಗೂ ಹಿರಿಯ ಮುಖಂಡ ನೀಲಪ್ಪ ಕರ್ಜಕಣ್ಣವರ ಅವರು ಅಗತ್ಯ ನಮೂನೆಗಳಿಗೆ ಸಹಿ ಮಾಡಿ ಅಭಿಯಾನಕ್ಕೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಿ ಉತ್ತಮ ಬೆಂಬಲ ವ್ಯಕ್ತಪಡಿಸಿದರು.  

ಚುನಾವಣಾ ಆಯೋಗ ಈಗಾಗಲೇ ಸಮಗ್ರ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅದರಂತೆ ಗದಗ ಜಿಲ್ಲೆಯಾದ್ಯಂತ ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಸಮೀಕ್ಷೆ ಮತ್ತು ಪರೀಶೀಲನೆ ನಡೆಸಲಿದ್ದಾರೆ. ಇದೇ ಅವಧಿಯಲ್ಲಿ ಮತಗಟ್ಟೆಗಳ ಪುನರ್ವಿಂಗಡಣೆ ಕಾರ್ಯವೂ ಪೂರ್ಣಗೊಳ್ಳಲಿದೆ.  ಆಗಸ್ಟ್‌ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಬಳಿಕ ಆಗಸ್ಟ್‌ 5ರಿಂದ ಸೆಪ್ಟೆಂಬರ್ 4ರವರೆಗೆ ಮತದಾರರು ತಮ್ಮ ಹೆಸರು, ವಿಳಾಸ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  

ಸೆಪ್ಟೆಂಬರ್ ಅಂತ್ಯದೊಳಗೆ ಆಕ್ಷೇಪಣೆಗಳ ವಿಲೇವಾರಿ ಪೂರ್ಣಗೊಳಿಸಿ, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಎಲ್ಲ ಮತಗಟ್ಟೆಗಳಲ್ಲಿ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಸಂಗ್ರಹಿಸುವ ಮಾಹಿತಿಯನ್ನು ಚುನಾವಣಾ ಆಯೋಗದ ದಾಖಲೆಗಳಲ್ಲಿ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.