ಉತ್ತಮ ಜೀವನ ರೂಪಿಸಿಕೊಳ್ಳಲು ಗುಣಮಟ್ಟದ ಶಿಕ್ಷಣ ಅವಶ್ಯಕ: ಕೋರಿಶೆಟ್ಟಿ

ಉತ್ತಮ ಜೀವನ ರೂಪಿಸಿಕೊಳ್ಳಲು ಗುಣಮಟ್ಟದ ಶಿಕ್ಷಣ ಅವಶ್ಯಕ: ಕೋರಿಶೆಟ್ಟಿ Quality education is essential to build a better life: Korishetty


ಬೆಳಗಾವಿ 22: ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಮೊಬೈಲ್ ಗೀಳು ಬಿಟ್ಟು ಗುಣಮಟ್ಟದ ಶಿಕ್ಷಣ ಪಡೆದರೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಯೂ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಎಂ. ಎ. ಕೋರಿಶೆಟ್ಟಿ ಅಭಿಪ್ರಾಯಪಟ್ಟರು.  

ಅವರು ಇಂದು ಸಿದ್ಧರಾಮೇಶ್ವರ ಸಂಯುಕ್ತ ಪ.ಪೂ. ಕಾಲೇಜಿನ ಪ್ರೌಢಶಾಲೆಯಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವೀಜೇತರಿಗಾಗಿ ಆಯೋಜಿಸಿದ್ದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.  

ಗುಣಮಟ್ಟದ ಶಿಕ್ಷಣವೆಂದರೆ ಅದು ಕೇವಲ ಪಠ್ಯಪುಸ್ತಕದ ಜ್ಞಾನವಲ್ಲ ಬದಲಿಗೆ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುವ ಒಂದು ಪ್ರಕ್ರಿಯೆ. ಅದು ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ಒಳಗೊಂಡಿರುತ್ತದೆ.  ಇಂತಹ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿ ಪಡೆಯಬೇಕು ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಉಪ ಪ್ರಾಚಾರ್ಯೆ ಎಸ್‌.ಬಿ ಪೂಜಾರ ಮಾತನಾಡಿ ಭಾರತೀಯ ಸಂಸ್ಕೃತಿಯ ವಾರಸುದಾರರಾಗಿರುವ ಇಂದಿನ ವಿದ್ಯಾರ್ಥಿಗಳು ಬಾಲ್ಯದಿಂದಲೇ ದೇಶಿಯ ಕಲೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು. 

ವೇದಿಕೆಯ ಮೇಲೆ ಸಂಸ್ಕೃತ ಪಾಠಶಾಲೆಯ ಮುಖ್ಯೋಪಾಧ್ಯಾಯ ವಿ ಎಚ್ ಹಿರೇಮಠ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಶಿಕ್ಷಕಿ ಪಿ. ಬಿ. ಸಿದ್ರಾಮನಿ ಸ್ವಾಗತಿಸಿದರು.  ಎಂ.ಬಿ. ಉಳ್ಳೇಗಡ್ಡಿ ನಿರೂಪಿಸಿದರು ಕೊನೆಗೆ ಆರ್‌. ಎಲ್‌. ಸಜ್ಜನ್ ವಂದಿಸಿದರು.