ಸದೃಢ ರಾಷ್ಟ್ರಕ್ಕೆ ವಿದ್ಯಾರ್ಥಿಗಳ ಪಾತ್ರ ಮುಖ್ಯ; ಜಿಲ್ಲಾಧಿಕಾರಿ
ಬಳ್ಳಾರಿ 06 : ಸ್ಪರ್ಧಾತ್ಮಕ ಯುಗದಲ್ಲಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ಬಳ್ಳಾರಿ ಜಿಲ್ಲಾಧಿಕಾರಿಗಳಾದ ಪ್ರಶಾಂತ ಕುಮಾರ್ ಮಿಶ್ರಾ ಹೇಳಿದರು.
ಇಲ್ಲಿಯ ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಳ್ಳಾರಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಬಳ್ಳಾರಿ, ಉನ್ನತಿ ಫೌಂಡೇಶನ್ ಬೆಂಗಳೂರು, ಉದ್ಯೋಗ, ಕೌಶಲ್ಯ ಅಭಿವೃದ್ದಿ ಘಟಕ ಸಿಡಾಕ್ ಧಾರವಾಡ ಇದರ ಜಂಟಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿಗಳ ಶ್ರೇಯಸ್ಸಿಗಾಗಿ ಮುಂಜಾನೆಯ ಹಾಗೂ ಮುಸ್ಸಂಜೆಯ ಮಾತು ಮತ್ತು ಮಂಥನ’ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿದೆ. ಸತತ ಪ್ರಯತ್ನ ಮತ್ತು ಗುಣಮಟ್ಟದ ವಿದ್ಯಾಭ್ಯಾಸದಿಂದ ವಿದ್ಯಾರ್ಥಿಗಳು ಯಶಸ್ಸು ಕಾಣಬಹುದು. ಉನ್ನತ ಸ್ಥಾನಮಾನದ ಉದ್ಯೋಗದ ಕನಸು ಹೊಂದಿರುವವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಮುಖ್ಯವಾಗಿದೆ. ಋಖ, ಋಖ ಗಳಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನ ಎಂದು ಮೂರು ಹಂತಗಳು ಇರುತ್ತವೆ. ವಿದ್ಯಾರ್ಥಿಗಳು ಸ್ವಯಂ ಪ್ರೇರಣೆ, ಸಾಫ್ಟ್ ಸ್ಕಿಲ್ ಕೌಶಲ್ಯಗಳನ್ನು ಅಳವಡಿಸಿಕೊಂಡು ಯಶಸ್ಸು ಕಾಣಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಮಯ ನಿರ್ವಹಣೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅಭಿವೃದ್ದಿಪಡಿಸುವುದು ನಮ್ಮ ಗುರಿ. ಸ್ಪರ್ಧಾತ್ಮಕ ಪರೀಕ್ಷೆಗೆ ಪಠ್ಯಕ್ರಮ ಅಧ್ಯಯನದ ಜೊತೆಗೆ ಪತ್ರಿಕೆಗಳನ್ನು ಓದುವ ಹವ್ಯಾಸ ವೃದ್ಧಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಪದವಿ ಹಂತದಲ್ಲಿ ಅನೇಕ ಹೊಸ ಕೋರ್ಸ್ಗಳನ್ನು ಆರಂಭಿಸಲು ವಿಶ್ವವಿದ್ಯಾಲಯವು ಮುನ್ನುಡಿ ಬರೆದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ ಎಸ್.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 300 ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾಧಿಕಾರಿಗಳೊಂದಿಗೆ ಪ್ರಶ್ನೋತ್ತರ ನಡೆಸಿದರು. ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಾಣೇಶ್ ಎಸ್., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸೋಮಶೇಖರ್ ವೇದಿಕೆಯಲ್ಲಿದ್ದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.