ಎಸ್‌ಎಸ್‌ಎಲ್‌ಸಿ ಪರೀಕ್ಷೆ ; ಜಿಲ್ಲೆಗೆ ಪ್ರಥಮ ಸ್ಥಾನದ ಗುರಿ ಹೊಂದಿದ್ದೇವೆ: ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮಧಬಾವಿ..!

ಎಸ್‌ಎಸ್‌ಎಲ್‌ಸಿ ಪರೀಕ್ಷೆ ; ಜಿಲ್ಲೆಗೆ ಪ್ರಥಮ ಸ್ಥಾನದ ಗುರಿ ಹೊಂದಿದ್ದೇವೆ: ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮಧಬಾವಿ..! SSLC Exam; We are aiming for the first place in the district: Field Education Officer Panduranga Ma


ಕಾಗವಾಡ 11 :  ತಾಲೂಕಿನಲ್ಲಿ ಸನ್ 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. 18 ರಿಂದ ಎ. 02 ರ ವರೆಗೆ ನಡೆಯಲಿದ್ದು, ಈ ವರ್ಷ ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಳ್ಳುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ಪ್ರೌಢಶಾಲೆಯ ಶಿಕ್ಷಕರು ಬಹಳ ಶ್ರಮಿಸುತ್ತಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮಧಬಾವಿ ತಿಳಿಸಿದ್ದಾರೆ. ಅವರು, ಬುಧವಾರ ದಿ. 11 ರಂದು ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಿಭಾವಿ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ವರ್ಷ ತಾಲೂಕಿನಲ್ಲಿ 1269 ಗಂಡು, 1242 ಹೆಣ್ಣು ಹೀಗೆ ಒಟ್ಟು 2511 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ತಾಲೂಕಿನ ಕಾಗವಾಡ, ಶಿರಗುಪ್ಪಿ, ಶೇಡಬಾಳ, ಉಗಾರ ಖುರ್ದ, ಐನಾಪೂರ, ಮೋಳೆ, ಹೀಗೆ ಒಟ್ಟು 06 ಪರೀಕ್ಷಾ ಕೇಂದ್ರಗಳಿದ್ದು, ಸುಮಾರು 105 ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ 06 ಮುಖ್ಯ ಅಧೀಕ್ಷಕರು, 06 ಉಪ ಅಧೀಕ್ಷಕರು, 05 ಕಸ್ಟಡಿಯನ್, 06 ಮೊಬೈಲ್ ಸ್ವಾಧೀನಾಧಿಕಾರಿಗಳು, 06 ಸ್ಥಾನಿಕ ಜಾಗೃತ ದಳದವರು, 03 ಫ್ಲೈಯಿಂಗ್ ಸ್ಕಾ-್ವಡ್ ಹೀಗೇ ಒಟ್ಟು 41 ಸಿಬ್ಬಂದಿಗಳನ್ನು ನೇಮಿಸಲಾಗಿದೆ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲಿನ ಜೊತೆಗೆ ವೆಬ್ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ಮಕ್ಕಳಿಗೂ ಪರೀಕ್ಷೆಯನ್ನು ಬರೆಯಲು ಅನುಕೂಲವಾಗುವಂತೆ ಆಸನಗಳ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಶೌಚಾಲಯ ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಕೊಳ್ಳಲಾಗಿದೆ ಎಂದರು.  

ತಹಶೀಲ್ದಾರ ರವೀಂದ್ರ ಹಾದಿಮನಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಪ್ರತಿಯೊಬ್ಬರು ಪರೀಕ್ಷೆಗಳು ಪಾರದರ್ಶಕವಾಗಿ, ನಡೆಸಲು ಶ್ರಮಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗಳು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಸಹಕಾರ ನೀಡುವದಾಗಿ ತಿಳಿಸಿದ ಅವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಒಬ್ಬರು ಸಿಎಚ್‌ಓ ಹಾಗೂ ಇಬ್ಬರೂ ಆಶಾಕರ್ತೆಯರನ್ನು ನೇಮಿಸಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಕೊಳ್ಳಲು ತುರ್ತು ಸೇವೆಗಾಗಿ ಆಯಾ ವ್ಯಾಪ್ತಿಗೆ ಸಂಭಂಧಿಸಿದಂತೆ ಅಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.  

ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣಾ ವಾಲಿ ಮಾತನಾಡಿ, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನಲ್ಲಿ 200 ಮೀಟರದಲ್ಲಿ ಪ್ರದೇಶದಲ್ಲಿ ಸಾರ್ವಜನಿಕರು ಹಾಗೂ ಯಾರೂ ಅನಧಿಕೃತವಾಗಿ ಪ್ರವೇಶವನ್ನು ಮಾಡದಂತೆ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿಗೊಳಿಸಿದ್ದಾರೆ. ಆದ್ದರಿಂದ ಪರೀಕ್ಷಾ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.  ಈ ಸಂದರ್ಭದಲ್ಲಿ ಪಿಎಸ್‌ಐ ರಾಘವೇಂದ್ರ ಖೋತ, ಸಿಡಿಪಿಓ ರವಿಂದ್ರ ಗುದಗೆನ್ನವರ, ವೈದ್ಯಾಧಿಕಾರಿ ಡಾ. ಪುಷ್ಪಲತಾ ಸುಣ್ಣದಕಲ್ಲ, ದೈಹಿಕ ಪರೀವೀಕ್ಷಕ ಎಂ.ವೈ. ಪೂಜೇರಿ, ಶಿಕ್ಷಣ ಸಂಯೋಜಕ ಭರತ ಭಿಲವಡೆ, ಬಿಆರ್‌ಪಿಗಳಾದ ಬಿ.ಬಿ. ಟೊನಗೆ, ರವೀಂದ್ರ ನಾಂದಣಿ, ನೂಡಲ್ ಅಧಿಕಾರಿ ಎಸ್‌.ಆರ್‌. ಮಾಳಿ ಸೇರಿದಂತೆ ತಾಲೂಕಿನ ಎಲ್ಲ ಪ್ರೌಢ ಶಾಲೆಯ ಶಿಕ್ಷಕರು, ಪರೀಕ್ಷಾ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ವಾಧಿನಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.