ಬಳ್ಳಾರಿಯಲ್ಲಿ ಸಂಭ್ರಮದ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ
Shivayogi Siddarameshwara Jayanti celebrated in Bellary
ಬಳ್ಳಾರಿ 14: ರಾಜ್ಯದ ಪ್ರತಿ ಸಮಾಜ, ಸಮುದಾಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರರ 854ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿನ ಎಲ್ಲಾ ಹಿಂದುಳಿದ ವರ್ಗಗಳು, ಬಡವರು ಅಭಿವೃದ್ಧಿ ಹೊಂದಬೇಕು ಎಂಬುದೇ ನಮ್ಮ ಸರ್ಕಾರದ ಮುಖ್ಯ ಆಶಯವಾಗಿದೆ ಎಂದು ಪ್ರತಿಪಾದಿಸಿದ ಸಚಿವರು, ಸಿದ್ದರಾಮೇಶ್ವರರು ಭಕ್ತಿ, ಯೋಗ ಮತ್ತು ಸೇವೆಗಳ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲ್ಲು ಹೊಡೆಯುವ ವೃತ್ತಿಯಿಂದಲೇ ತಮ್ಮ ಬದುಕು ಕಟ್ಟಿಕೊಂಡವರು ಭೋವಿ ಸಮಾಜದವರು. ಸಮಾಜದ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದು, ನಗರದಲ್ಲಿ ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಸುವರ್ಣ ಬಳ್ಳಾರಿ ನಗರ ಕಟ್ಟಲು ಶ್ರಮಿಸುವೆ ಎಂದು ಭರವಸೆ ನೀಡಿದರು.
ಸಂಸದ ಈ.ತುಕಾರಾಮ್ ಅವರು ಮಾತನಾಡಿ, ಶಿವಶರಣರ ಜೀವನ ಚರಿತ್ರೆ, ಆಚಾರ-ವಿಚಾರಗಳನ್ನು ಈಗಿನ ಪೀಳಿಗೆಗೆ ಮನದಟ್ಟು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ. ಒಬ್ಬ ಮನುಷ್ಯ ನಿರ್ದಿಷ್ಟ ಗುರಿ ಇಟ್ಟುಕೊಂಡು ಸತ್ಯ, ನ್ಯಾಯ ಪಾಲಿಸಿಕೊಂಡು ವಿಜಯೋತ್ಸವದೆಡೆಗೆ ಸಾಗಬೇಕು ಎಂಬುದನ್ನು ಬಿಂಬಿಸುವುದೇ ಜಯಂತಿ ಕಾರ್ಯಕ್ರಮಗಳ ಆಚರಣೆಯ ಮುಖ್ಯ ಉದ್ದೇಶವಾಗಿವೆ ಎಂದು ಹೇಳಿದರು.
ಸಾರ್ವಜನಿಕರು ಪ್ರಜ್ಞಾವಂತರಾಗಿ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಸಾಮಾಜಿಕ, ಆರ್ಥಿಕವಾಗಿ ಸಬಲರಾಗಬೇಕು. ಭೋವಿ ಸಮಾಜದವರು ಕಾಯಕಯೋಗಿಗಳು. ಮನೆ ಕಟ್ಟುವವರಾದರೂ ಆರೋಗ್ಯವಂತ ಸಮಾಜ ಕಟ್ಟಲು ಸಹ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಸಹ ಅನುಷ್ಠಾನಗೊಳಿಸುತ್ತಿದೆ. ಹೊಸ ವರ್ಷದ ಮಕರ ಸಂಕ್ರಾಂತಿ ಹಬ್ಬದೊಂದಿಗೆ ಹೊಸ ಹುರುಪಿನೊಂದಿಗೆ ಸಾಗೋಣ ಎಂದು ಆಶಯ ವ್ಯಕ್ತಪಡಿಸಿದರು.
ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಶಿವಯೋಗಿ ಸಿದ್ಧರಾಮೇಶ್ವರರು ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವಗುರು ಬಸವಣ್ಣನವರ ಕಾಲಘಟ್ಟದ ಅನುಭವ ಮಂಟಪದಲ್ಲಿ ಅಭಿವೃದ್ಧಿ ಕೆಲಸದಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಭೋವಿ ಸಮಾಜವು ಹಿಂದುಳಿದ ಸಮಾಜವಾಗಿದ್ದು, ರಾಜಕೀಯ, ಆರ್ಥಿಕವಾಗಿ ಅವರನ್ನು ಮುನ್ನೆಲೆಗೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದರು.
ಶಿಕ್ಷಣವೇ ಆಯುಧ. ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ಮುಖ್ಯ ಗುರಿಯಾಗಿಸಬೇಕು. ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡಬೇಕು ಎಂದು ಹೇಳಿದ ಅವರು, ಕಂಪ್ಲಿ ಕ್ಷೇತ್ರದ ಕುರುಗೋಡು ಪಟ್ಟಣದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಭೋವಿ ಸಮಾಜದ ಸಮುದಾಯ ಭವನ ನಿರ್ಮಿಸಲಾಗುತ್ತಿದ್ದು, ಈಗಾಗಲೇ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಬಳ್ಳಾರಿಯ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಆಲಂ ಭಾಷಾ ಅವರು ವಿಶೇಷ ಉಪನ್ಯಾಸ ನೀಡಿ, ಅನೇಕ ಶರಣರ ವಚನ ಸಾಹಿತ್ಯದಿಂದ ಜೀವನ ಶೈಲಿಯೇ ಬದಲಾಯಿಸಿದ 12 ನೇ ಶತಮಾನದ ಅದ್ವೀತಿಯ ಕಾಲದಲ್ಲಿದ್ದವರು ಶಿವಯೋಗಿ ಸಿದ್ಧರಾಮೇಶ್ವರರು. ನಮ್ಮನ್ನು ನಾವು ಅರಿತುಕೊಂಡಾಗ ಮಾತ್ರ ಶರಣರನ್ನು ಅರಿಯಲು ಸಾಧ್ಯವಾಗಲಿದೆ ಎಂದು ಹೇಳಿದರು.
ಶಿವಯೋಗಿ ಸಿದ್ಧರಾಮೇಶ್ವರರು ಒಬ್ಬ ಮಹಾನ್ ವಚನಕಾರ ಮತ್ತು ಕರ್ಮಯೋಗಿ. ಇವರು ಮಹಾರಾಷ್ಟ್ರದ ಸೊಲ್ಲಾಪರ (ಸೊನ್ನಲಗಿ) ಜಿಲ್ಲೆಯ ಮುಧಗಿ ಎಂಬಲ್ಲಿ ಜನಿಸಿದರು. ಬಾಲ್ಯದಿಂದಲೇ ಭಕ್ತಿ, ಕಾಯಕ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು, ಕೆರೆಗಳ ನಿರ್ಮಾಣ, ಲಿಂಗ ಪ್ರತಿಷ್ಠಾಪನೆ ಮತ್ತು ಅನುಭವ ಮಂಟಪದಲ್ಲಿ ಪಾಲ್ಗೊಂಡು ಶಿವಯೋಗ ಸಾಧಿಸಿ, ಸಾರ್ವಜನಿಕ ಸೇವೆಗಾಗಿ ತಮ್ಮನ್ನು ತಾವು ಅರ್ಿಸಿದ ಮಹಾತ್ಮರಾಗಿದ್ದವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಂದ್ಯಾಳಿನ ಜಿ.ಪಿ.ಸಾಯಿಶೃತಿ ಅವರು ಭಕ್ತಿ ಸಂಗೀತ ಪ್ರಸ್ತುತಪಡಿಸಿದರು.
*ಅದ್ದೂರಿ ಮೆರವಣಿಗೆ:*
ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು. ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಪುಷ್ಪಾರ್ಚನೆಗೈಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾದ ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರ ಒಳಗೊಂಡ ಬೆಳ್ಳಿರಥದ ಮೆರವಣಿಗೆಯು ನಗರದ ಗಡಿಗಿ ಚೆನ್ನಪ್ಪ ವೃತ್ತ- ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ-ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಾಗಿಬಂದು ಸಂಪನ್ನಗೊಂಡಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಭೋವಿ (ವಡ್ಡರ) ಸಂಘದ ಅಧ್ಯಕ್ಷ ವಿ.ರಾಮಾಂಜನೇಯ, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಸಮಾಜದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 