ಹಾಸಗಲ್ ಪ್ರಾಥಮಿಕ ಶಾಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ

ಹಾಸಗಲ್ ಪ್ರಾಥಮಿಕ ಶಾಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ Tobacco-free youth campaign at Hasagal Primary School

           ಕೊಪ್ಪಳ  14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೊಮ್ಮನಾಳ ಇವರ ಸಂಯುಕ್ತಾಶ್ರಯದಲ್ಲಿ ನ.13 ರಂದು ಹಾಸಗಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

              ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ, ತಂಬಾಕು ಮುಕ್ತ ಯುವ ಅಭಿಯಾನವು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವಕರಿಗೆ ಅರಿವು ಮೂಡಿಸುವುದಾಗಿದೆ. ಜನಸಾಮಾನ್ಯರನ್ನು ತಂಬಾಕಿನ ದುಷ್ಟರಿಣಾಗಳಿಂದ ರಕ್ಷಿಸಲು ಭಾರತ ಸರ್ಕಾರವು ಒಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ 2003ರಲ್ಲಿ ಕೋಟ್ಪಾ ಕಾಯ್ದೆಯನ್ನು ಜಾರಿಗೊಳಿಸಿದೆ. ಸೆಕ್ಷನ್‌-4 ಪ್ರಕಾರ ಸಾರ್ವಜನಿಕ ಸ್ಥಗಳಲ್ಲಿ ಧೂಮಪಾನ ಮಾಡುವುದು ನಿಷೇಧ. ಸೆಕ್ಷನ್‌-5ರ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ತೇಜನ ಪ್ರಯೋಜಕತೆ ನಿಷೇಧ. ಸೆಕ್ಷನ್‌-6(ಅ) ತಂಬಾಕು ಉತ್ಪನ್ನಗಳು ಅಪ್ರಾಪ್ತ ವಯಸ್ಕರಿಗೆ (18 ವರ್ಷದೊಳಗಿನ ಮಕ್ಕಳು) ಸಿಗದಂತೆ ನಿಯಂತ್ರಣ ಮಾಡುವುದು, ಸೆಕ್ಷನ್‌-6(ಆ) ಪ್ರಕಾರ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್‌-6 ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಅಂತರ ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ.

      ಸೆಕ್ಷನ್‌-7, 8 ಮತ್ತು 9 ಪ್ರಕಾರ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕೊಟ್ಟಾ ಕಾಯ್ದೆ-2003 ಕಲಂ 20ರ ಅಡಿಯಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು. ತಂಬಾಕು ಸೇವನೆ ಬಿಟ್ಟು ಬದುಕನ್ನು ಆಯ್ದುಕೊಳ್ಳಿ ಈ ವಿಷಯವನ್ನು ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ, ಸುತ್ತ-ಮುತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸಿ, ತಂಬಾಕು ಮುಕ್ತ ಪರಿಸರ ನಿರ್ಮಿಸಲು ಕರೆ ನೀಡಿ, ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸುತ್ತದೆ. ಆದ್ದರಿಂದ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.  

          ಎನ್‌.ಸಿ.ಟಿ.ಪಿ ಸಮಾಜ ಕಾರ್ಯಕರ್ತೆ ಸರಸ್ವತಿ ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಪ್ರತಿ ವರ್ಷ ಮೇ-31 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಿಗರೇಟ್, ಬೀಡಿ, ಸಿಗಾರ್, ಹುಕ್ಕಾ ತಂಬಾಕು ವಿಧಗಳಾಗಿವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ತಂಬಾಕಿನಲ್ಲಿ ನಿಕೋಟಿನ್ ಎಂಬ ವಿಷಕಾರಕ ಪದಾರ್ಥ ಇರುತ್ತದೆ. ಇದರಲ್ಲಿ 3000 ದಿಂದ 4000 ಅಪಾಯಕಾರಿ ರಾಸಾಯನಿಕ ವಿಷಾನಿಲಗಳು ಇರುತ್ತವೆ. ಮಹಿಳೆಯರಲ್ಲೂ ತಂಬಾಕು ಸೇವನೆಯಿಂದ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್, ಕಡಿಮೆ ತೂಕವಿರುವ ಮಗುವಿನ ಜನನ ಹಾಗೂ ಶಿಶುಮರಣ ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ. ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ.

           ಇಂದಿನ ಯುವ ಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.ಎನ್‌.ಟಿ.ಸಿ.ಪಿ, ಜಿಲ್ಲಾ ಸಲಹೆಗಾರರಾ ಸಂಗಮೇಶ ಇವರು ಮಾತನಾಡಿ, ತಂಬಾಕು ತ್ಯಜಿಸುವುದರಿಂದ ಮತ್ತು ವ್ಯಸನಿಗಳು ನಿಲ್ಲಿಸಿದ ಕ್ಷಣದಿಂದ ಶ್ವಾಸಕೋಶ ಮತ್ತು ಹೃದಯ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ವಿವರವಾಗಿ ಮಾತನಾಡಿದರು. ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಉತ್ತಮವಾಗಿ ಮಾತನಾಡಿದ ವಿದ್ಯಾರ್ಥಿಗಳಿಗೆ ಬಹುಮಾನ, ನೆನಪಿನ ಕಾಣಿಕೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶಶಿರೇಖಾ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ವಿಜಯವಿಠ್ಠಲ್, ಆಶಾ ಕಾರ್ಯಕರ್ತೆಯರಾದ ಗವಿಸಿದ್ದಮ್ಮ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.