ಜನರ ಬಳಿಗೆ ಆಡಳಿತ ಕೊಂಡೊಯ್ಯಲು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿರುವುದಾಗಿದೆ: ಶಾಸಕ ಮಾನೆ

ಜನರ ಬಳಿಗೆ ಆಡಳಿತ ಕೊಂಡೊಯ್ಯಲು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿರುವುದಾಗಿದೆ:  ಶಾಸಕ ಮಾನೆ We are working with commitment to take governance to the people: MLA Mane


ಹಾನಗಲ್ 27: ಸರ್ಕಾರದ ಕಾರ್ಯಕ್ರಮ, ಯೋಜನೆಗಳ ಫಲ ಕಟ್ಟ ಕಡೆಯ ವ್ಯಕ್ತಿಗೂ ಸಹ ತಲುಪಬೇಕು. ಈ ನಿಟ್ಟಿನಲ್ಲಿ ಜನರ ಬಳಿಗೆ ಆಡಳಿತ      ಕೊಂಡೊಯ್ಯಲು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿರುವುದಾಗಿ ಶಾಸಕ ಶ್ರೀನಿವಾಸ ಮಾನೆ ಹೇಳಿದರು. 

  ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಆಯೋಜಿಸಿದ್ದ 77 ನೇ ಗಣರಾಜ್ಯೋತ್ಸವದ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ತಾಲೂಕಿನಲ್ಲಿ ಶಿಕ್ಷಯ ವ್ಯವಸ್ಥೆ ಸದೃಢಗೊಳಿಸಲಾಗುತ್ತಿದ್ದು 50 ಕ್ಕೂ ಹೆಚ್ಚು ಶಾಲೆಗಳಲ್ಲಿ ಎಲ್‌.ಕೆ.ಜಿ. ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 10 ಶಾಲೆಗಳು ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿದ್ದು ಎಲ್‌.ಕೆ.ಜಿ.ಯಿಂದ ಹಿಡಿದು ದ್ವಿತೀಯ ಪಿಯಸಿವರೆಗೆ ಕನ್ನಡ, ಉರ್ದು ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಸಿಗಲಿದೆ. 30-40 ವರ್ಷಗಳಿಂದ ದಾಖಲೆ ರಹಿತವಾಗಿ ಅತಂತ್ರ ಸ್ಥಿತಿಯಲ್ಲಿದ್ದ ತಾಲೂಕಿನ 13 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ಸ್ವತಂತ್ರಗೊಳಿಸಲಾಗುತ್ತಿದೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ? 80 ಲಕ್ಷದಿಂದ ಒಂದು ಕೋಟಿವರೆಗೆ ಅನುದಾನ ಬಿಡುಗಡೆಗೊಳಿಸಿ ಸಾರ್ವಜನಿಕ ಸೌಕರ್ಯ ಒದಗಿಸಲಾಗುತ್ತಿದೆ. ನೀರಾವರಿ ಯೋಜನೆ, ಕೆರೆ, ಕಾಲುವೆಗಳ ಸುಧಾರಣೆಗು ಗಮನ ನೀಡಲಾಗಿದೆ ಎಂದರು. 

  ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ರೇಣುಕಾ ಎಸ್‌. ಮಾತನಾಡಿ, ನಮ್ಮ ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶ ಎನ್ನುವುದು ಹೆಮ್ಮೆಯ ಸಂಗತಿ. ಸಂವಿಧಾನವೇ ಭಾರತದ ಆತ್ಮ. ಸಂವಿಧಾನ ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ತಿಳಿಸುತ್ತದೆ. ಈ ನೆಲದ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ ಸ್ವಾರ್ಥವಿಲ್ಲದೇ ದೇಶಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ನೆನಪಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದರು. 

  ಪುರಸಭೆ ಮಾಜಿ ಅಧ್ಯಕ್ಷರಾದ ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಖುರ್ಷಿದ್ ಹುಲ್ಲತ್ತಿ, ಕರ್ನಾಟಕ ಹಾಲು ಉತ್ಪಾದಕ ಮಹಾಮಂಡಳದ ನಿರ್ದೇಶಕ ಚಂದ್ರ​‍್ಪ ಜಾಲಗಾರ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಗುರುನಾಥ ಗವಾಣಿಕರ, ಮುಖಂಡರಾದ ಟಾಕನಗೌಡ ಪಾಟೀಲ, ಮಂಜು ಗೊರಣ್ಣನವರ, ಗುರುರಾಜ್ ನಿಂಗೋಜಿ, ಶಂಶಿಯಾ ಬಾಳೂರ, ತಾಪಂ ಇಒ ಪರಶುರಾಮ ಪೂಜಾರ, ಬಿಇಒ ಆರ್‌.ವಿ.ಚಿನ್ನಿಕಟ್ಟಿ ಸೇರಿದಂತೆ ಅನೇಕರಿದ್ದರು.