ಯುವಕರು ಭವ್ಯ ಭಾರತದ ಪ್ರಜೆಗಳು- ನ್ಯಾ. ಕುಮಾರ ಡಿ.ಕೆ

Youth are citizens of great India- Ny. Kumar D.K

ಯುವಕರು  ಭವ್ಯ ಭಾರತದ ಪ್ರಜೆಗಳು- ನ್ಯಾ. ಕುಮಾರ ಡಿ.ಕೆ 

ಕೊಪ್ಪಳ  25:  ಯುವ ಮತದಾರರು ಭವ್ಯ ಭಾರತದ ಪ್ರಜೆಗಳಾಗಿದ್ದು ಚುನಾವಣೆಗಳ ಸಂದರ್ಭದಲ್ಲಿ ತಾವೆಲ್ಲರೂ ತಪ್ಪದೇ ಮತ ಚಲಾಯಿಸಬೇಕೆಂದು ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ್ ಡಿ.ಕೆ ಹೇಳಿದರು. 

ಅವರು ಶನಿವಾರ ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ. ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಕೊಪ್ಪಳ. ಹಾಗೂ ಜಿಲ್ಲಾ ಸ್ವೀಫ್ ಸಮಿತಿ ಕೊಪ್ಪಳ ಇವರ ಸಹಯೋಗದಲ್ಲಿ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಪ್ರಜಾಪ್ರಭುತ್ವದಲ್ಲಿ  ಪ್ರತಿ ಪ್ರಜೆ-ಪ್ರತಿನಿಧಿ, ತಮ್ಮ ನಾಯಕನನ್ನು ಆಯ್ಕೆ ಮಾಡುವ ಶಕ್ತಿ ತಮ್ಮ ಮತಕ್ಕಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಎಲ್ಲರೂ ಮತದಾನ ಮಾಡಬೇಕು ಎಂಬುದು ಭಾರತ ಚುನಾವಣಾ ಆಯೋಗದ ಧ್ಯೇಯೋದ್ದೇಶವಾಗಿದೆ. ಇಂದಿನ ವೈಜ್ಞಾನಿಕ ವಿಧ್ಯಮಾನಗಳಿಂದ ನಿಮ್ಮ ಕೈಯಲ್ಲಿ ಎಲ್ಲಾ ಮಾಹಿತಿ ಇದೆ. ಮೊಬೈಲ್ ಮೂಲಕ ಮಾಹಿತಿಯನ್ನು ಕುಳಿತಲ್ಲೆ ಪಡೆಯಬಹುದಾಗಿದೆ. ತಮಗೆಲ್ಲರಿಗೂ ರಾಷ್ಟ್ರೀಯ ಮತದಾರರ ದಿನಾಚರಣೆ ಶುಭಾಶಯಗಳು  ಎಂದು ಹೇಳಿದರು. 

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದಾಗಿದೆ. ಇದನ್ನು  ಮುಂದುವರಿಸಿಕೊಂಡು ಹೋಗಬೇಕಾದರೆ ಈ ದೇಶದ ಪ್ರಜೆಗಳ ಪಾತ್ರ ಬಹಳ ಮುಖ್ಯ ಇದೆ. ನಮ್ಮ ದೇಶದ ಪ್ರಗತಿ ನಮ್ಮ ನಾಯಕರು ನಿರ್ಧರಿಸಿದರೆ, ಅವರಿಗೆ ನಮ್ಮ ಮತ ನಿರ್ಧರಿಸುತ್ತದೆ ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದರು. 

ಜನರಿಗೆ ತಮ್ಮ ಮತದಾನದ ಮಹತ್ವ ತಿಳಿಸಲು ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ. ಸ್ವೀಫ್ ಸಮಿತಿ ಮೂಲಕವು ಹಲವಾರು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಚುನಾವಣೆ ಸಂದರ್ಭಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಇದರ ಉದ್ದೇಶ ಉತ್ತಮ ನಾಯಕನ ಆಯ್ಕೆ ಜನರು ಮಾಡಬೇಕು ಎಂಬುದಾಗಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಎಲ್ಲರೂ ನೊಂದಣಿ ಮಾಡಿಕೊಳ್ಳಬೇಕು ಎಂದರು.  

ನಮ್ಮ ಜಿಲ್ಲೆಯಲ್ಲಿ ಪುರುಷರಿಗಿಂತ ಮಹಿಳೆಯರೆ ಮತದಾರರ ಪಟ್ಟಿಯಲ್ಲಿ ಹೆಚ್ಚಿನ ನೊಂದಣಿ ಮಾಡಿಕೊಂಡಿದ್ದಾರೆ. 18 ವರ್ಷ ಮೇಲ್ಪಟ್ಟ ಯುವ ಮತದಾರರೆಲ್ಲರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ 17 ಸಾವಿರ ಜನ ದಿವ್ಯಾಂಗರು ಇದ್ದಾರೆ. ಇನ್ನೂ ಹೆಚ್ಚಿನ ಜನ ಇರಬಹುದು. ಹಿಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ 100 ವರ್ಷ ಮೇಲ್ಪಟ್ಟ 227 ಜನ ಮತದಾನ ಮಾಡಿದ್ದಾರೆ. ಈ ವರ್ಷದ ಚುನಾವಣಾ ಆಯೋಗದ ಧ್ಯೇಯವಾಕ್ಯ ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ ಎಂಬುದಾಗಿದೆ ಎಂದು ಹೇಳಿದರು. 

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು  ಹಾಗೂ ಜಿಲ್ಲಾ ಸ್ವೀಫ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೇಯ ಅವರು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.  

ಯುವ ಮತದಾರರಿಗೆ ಸಾಂಕೇತಿಕವಾಗಿ ಮತದಾರರ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಭೂತ ಮಟ್ಟದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿ.ಎಲ್‌.ಓ ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮತದಾರರ ದಿನಾಚರಣೆ ಅಂಗವಾಗಿ ವಿವಿಧ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಂಡಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು. ಅತ್ಯುತ್ತಮ ಎಲೆಕ್ಟ್ರೋ ಲಿಟರಸಿ ಕಾಲೇಜಿನ  ಮುಖ್ಯಸ್ಥರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್ ದರಗದ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಸಿದ್ರಾಮೇಶ್ವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ರೇಷ್ಮಾ ಹಾನಗಲ್, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿ.ಪಂ ಯೋಜನಾ ನಿರ್ದೆಶಕ  ಪ್ರಕಾಶ ವಿ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ್, ಶಾಲಾ-ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಶ್ರೀಶೈಲ ಬಿರಾದಾರ, ಕೊಪ್ಪಳ ತಹಶೀಲ್ದಾರ ವಿಠಲ ಚೌಗಲಾ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ರಾಜ್ಯಮಟ್ಟದ ಚುನಾವಣಾ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ಮುಖ್ಯ ಗುರುಗಳು, ಶಿಕ್ಷಕರು ಮತ್ತು ಮಕ್ಕಳು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು. 

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬೆಳಿಗ್ಗೆ ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಶಾಲಾ- ಕಾಲೇಜಿನ 3 ಸಾವಿರಕ್ಕಿಂತ ಹೆಚ್ಚಿನ ಮಕ್ಕಳು ಸೇರಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಅದರಲ್ಲಿ  ಭಾರತ ನಕ್ಷೆ, ವಾಯ್ಸ್‌ ಆಫ್ ಡೆಮಾಕ್ರಸಿ, ಸ್ವೀಫ್ ಕೊಪ್ಪಳ ನಿರ್ಮಿಸಿ ಗಮನ ಸೆಳೆದರು.