ಶಿಥಿಲಗೊಂಡ ಶಾಲಾ ಕೊಠಡಿ ಮರು ಪರೀಶೀಲನೆಗೆ 15 ದಿನಗಳ ಗಡುವು
15-day deadline for re-inspection of dilapidated school classrooms
ತಪ್ಪು ವರದಿ ನೀಡಿದ ಇಬ್ಬರು ಅಧಿಕಾರಿಗಳ ಮೇಲೆ ಶಿಸ್ತು ಕ್ರಮ
ಬಾಗಲಕೋಟೆ 03: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಪರೀಶೀಲನೆ ನಡೆಸಲಾಗಿದ್ದರೂ ಮುಗುಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದಿರುವುದು ಗಂಭೀರ ವಿಚಾರವಾಗಿದೆ. ಶಾಲೆಗಳಿಗೆ ತೆರಳಿ ಖುದ್ದಾಗಿ ಪರೀಶೀಲನೆ ನಡೆಸದೆ, ವರದಿ ನೀಡಿರುವ ಪಂಚಾಯತ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಜಿ.ಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಗಜಾನನ ಬಾಲೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಗುರುವಾರ ಮುಗುಳೊಳ್ಳಿ ತಾಂಡಾ ಸರಕಾರಿ ಶಾಲೆಯ ಮೇಲ್ಚಾವಣಿ ಕುಸಿದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ ರಾಜ್, ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಧಿಕಾರಿಗಳೊಂದಿಗೆ ಜರುಗಿದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಗುಳೊಳ್ಳಿ ಶಾಲೆಯ ಕೊಠಡಿಗಳು ಸುಸ್ಥಿತಿಯಲ್ಲಿವೆ ಎಂದು ವರದಿ ನೀಡಲಾಗಿದ್ದು, ಮಳೆ ಬಂದಾಗ ಎರಡು ಕೊಠಡಿಗಳು ಮಾತ್ರ ಸೋರುತ್ತವೆ ಎಂದು ನಮೂದಿಸಲಾಗಿತ್ತು. ಆದರೆ ಇದೇ ಶಾಲೆಯ ಕೊಠಡಿಯ ಮೇಲ್ಚಾವಣಿ ಕುಸಿದು ಘಟನೆ ಸಂಭವಿಸಿರುವುದರಿಂದ ಪರೀಶೀಲನಾ ವರದಿಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡಿತು. ಈ ಹಿನ್ನೆಲೆಯಲ್ಲಿ ಸುಸ್ಥಿತಿ ಇದೆ ಎಂದು ವರದಿ ನೀಡಿದ ಇಬ್ಬರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದರು.
ಜಿಲ್ಲೆಯ 1,424 ಶಾಲೆಗಳ 9,449 ಕೊಠಡಿಗಳ ಪೈಕಿ 6,961 ಕೊಠಡಿಗಳು ಸುಸ್ಥಿತಿಯಲ್ಲಿದ್ದು, 1,232 ಕೊಠಡಿಗಳು ಸಣ್ಣ ಹಾಗೂ 1,535 ಕೊಠಡಿಗಳು ದೊಡ್ಡ ದುರಸ್ತಿಗೆ ಒಳಪಟ್ಟಿವೆ. ಪ್ರಸ್ತುತ 8,367 ಕೊಠಡಿಗಳು ತರಗತಿ ನಡೆಸಲು ಯೋಗ್ಯವಾಗಿದ್ದು, 628 ಕೊಠಡಿಗಳು ಬೋಧನೆಗೆ ಯೋಗ್ಯವಲ್ಲ ಎಂದು ವರದಿ ನೀಡಲಾಗಿದೆ. ಮುಗುಳೊಳ್ಳಿ ಶಾಲೆಯ ಘಟನೆ ಹಿನ್ನಲೆಯಲ್ಲಿ ಬೋಧನೆಗೆ ಯೋಗ್ಯವಲ್ಲದ 628 ಶಾಲಾ ಕೊಠಡಿಗಳ ಮರು ಪರೀಶೀಲನೆಗೆ 15 ದಿನಗಳ ಕಾಲಾವಕಾಶ ನೀಡುವ ಮೂಲಕ ಜಿಓ ಟ್ಯಾಗ್ ಛಾಯಾಚಿತ್ರ ಒಳಗೊಂಡಂತೆ ಸಮಪರ್ಕ ವರದಿ ಸಲ್ಲಿಸಲು ಸೂಚನೆ ನೀಡಿದರು.
ಶಾಲೆಗಳಿಗೆ ಕೇವಲ ನೀರು ಪೂರೈಕೆ ಮಾಡಿದರೆ ಸಾಲದು, ಪೂರೈಕೆಯಾಗುವ ನೀರಿನ ಗುಣಮಟ್ಟ ಹಾಗೂ ಸಂಗ್ರಹಿಸುವ ಟ್ಯಾಂಕ್ಗಳ ಸ್ವಚ್ಛತೆಯನ್ನೂ ನಿಯಮಿತವಾಗಿ ಪರೀಶೀಲಿಸಬೇಕು. ಟ್ಯಾಂಕರ್ಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಬೇಕು. ಹುನಗುಂದ ತಾಲೂಕಿನಲ್ಲಿ ಶಾಲೆಯೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀರಿನ ಟ್ಯಾಂಕ್ ಸ್ವಚ್ಛವಾಗಿರದಿರುವುದು ಗಮನಕ್ಕೆ ಬಂದಿದ್ದು, ಸಂಬಂಧಿಸಿದ ಶಾಲೆಯ ಮುಖ್ಯಶಿಕ್ಷಕರಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ಕಂಪೌಂಡ್, ಶಾಲಾ ಆವರಣ, ಕಟ್ಟಡ, ಮೇಲ್ಚಾವಣಿ, ಕುಡಿಯುವ ನೀರು ಹಾಗೂ ಇತರೆ ಸುರಕ್ಷತಾ ಅಂಶಗಳನ್ನು ಮುಂಜಾಗ್ರತಾ ಕ್ರಮಕ್ಕಾಗಿ ಅಭಿಯಾನದ ರೂಪದಲ್ಲಿ ಕೆಲಸ ನಿರ್ವಹಿಸಲು ಸೂಚನೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಹಂತದ ಶಾಲೆಯ ಮುಖ್ಯ ಗುರುಗಳಿಗೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಬೇಜವಾಬ್ದಾರಿತನ ತೋರುವವರ ಮೇಲೆ ನಿರ್ಧಾಕ್ಷಣ್ಯವಾಗಿ ಕ್ರಮಕೈಗೊಳ್ಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಾಲಾ ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಪ್ರಮೋದಿನಿ ಬಲೂಲವಾಡಿ ಸೇರಿದಂತೆ ಪಿಆರ್ಇಡಿ, ಲೋಕೋಪಯೋಗಿ ಇಲಾಖೆಯ ಅಭಿಯಂತರರು ಹಾಗೂ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 