ಕೆಪಿಎಸ್ಸಿ ಅಕ್ರಮ ತನಿಖೆಗೆ ಎಬಿವಿಪಿ ಆಗ್ರಹ

ಕೆಪಿಎಸ್ಸಿ ಅಕ್ರಮ ತನಿಖೆಗೆ ಎಬಿವಿಪಿ ಆಗ್ರಹ  ABVP demands probe into KPSC irregularities

ಹೂವಿನಹಡಗಲಿ, ಆ.5: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.  

ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ತಹಶೀಲ್ದಾರ್ ಮುಖಾಂತರ ಮನವಿ ಸಲ್ಲಿಸಿದ ಎಬಿವಿಪಿ ಕಾರ್ಯಕರ್ತರು, ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳಿಗೆ 2026ರ ಜನವರಿ 8 ಮತ್ತು 9ರಂದು ಪರೀಕ್ಷೆ ನಡೆದಿದ್ದು, ಜುಲೈ 17ರಂದು ಪ್ರಕಟವಾದ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ಅಭ್ಯರ್ಥಿಗಳು ಉನ್ನತ ಶ್ರೇಣಿಯಲ್ಲಿ ಆಯ್ಕೆಯಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ತಿಳಿಸಿದ್ದಾರೆ.  

ಆದ್ದರಿಂದ ಈ ನೇಮಕಾತಿ ಪ್ರಕ್ರಿಯೆಯ ಬಗ್ಗೆ ನ್ಯಾಯಸಮ್ಮತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜೊತೆಗೆ ಶಿಕ್ಷಣ ಇಲಾಖೆಯಲ್ಲಿರುವ ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿಯನ್ನು ಕೂಡ ತ್ವರಿತವಾಗಿ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.  

ಮನವಿ ಸಲ್ಲಿಸುವ ವೇಳೆ ಎಬಿವಿಪಿ ಜಿಲ್ಲಾ ಸಂಚಾಲಕ ಧನುಷ್ ಕುಮಾರ್, ನಗರ ಕಾರ್ಯದರ್ಶಿ ಕಿರಣ್ ಮುಂಡರಗಿ, ತಾಲೂಕು ಸಂಚಾಲಕ ಟಿ. ವಿನಾಯಕ, ಅಭಿಷೇಕ್, ಚೇತನ ಕುಮಾರ್, ಕೊಟ್ರಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.