ಸಾಮಾಜಿಕ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಪತ್ರಕರ್ತರಿಗೆ ಶಾಸಕ ಕೃಷ್ಣನಾಯಕ್ ಕರೆ

ಸಾಮಾಜಿಕ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಪತ್ರಕರ್ತರಿಗೆ ಶಾಸಕ ಕೃಷ್ಣನಾಯಕ್ ಕರೆ  Act with social responsibility: MLA Krishna Nayak urges journalists

ಹೂವಿನಹಡಗಲಿ 21: ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು. ಯಾವುದೇ ಪಕ್ಷಪಾತವಿಲ್ಲದೆ ನೈಜತೆಯನ್ನು ಪರೀಶೀಲಿಸಿ ಸುದ್ದಿಗಳನ್ನು ಪ್ರಕಟಿಸಬೇಕು ಎಂದು ಶಾಸಕ ಕೃಷ್ಣನಾಯಕ್ ಹೇಳಿದರು.  

ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.  

ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸತ್ಯ, ನಿಷ್ಪಕ್ಷಪಾತತೆ ಮತ್ತು ಜನಪರ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  

ಈ ವೇಳೆ ಪಟ್ಟಣದಲ್ಲಿ ಪತ್ರಿಕಾ ಭವನ ನಿರ್ಮಾಣ ಮತ್ತು ನವೀಕರಣಕ್ಕಾಗಿ ?5 ಲಕ್ಷ ಅನುದಾನವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.  ಗವಿಮಠದ ಡಾ. ಹಿರಿಶಾಂತವೀರ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಓದು ಯಶಸ್ಸಿನ ಹಾದಿಯನ್ನು ಸುಗಮಗೊಳಿಸುತ್ತದೆ ಎಂದು ಹೇಳಿದರು.  

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಗೋಳ ಚಿದಾನಂದ, ಪುರಸಭೆ ಮಾಜಿ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್, ಜಿಬಿಆರ್ ಕಾಲೇಜಿನ ಪ್ರಾಂಶುಪಾಲ ಎಸ್‌.ಎಸ್‌. ಪಾಟೀಲ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ. ಸತ್ಯನಾರಾಯಣ ಸೇರಿದಂತೆ ಹಲವರು ಮಾತನಾಡಿದರು.  

ಸನ್ಮಾನ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ನಿವೃತ್ತ ವೈದ್ಯಾಧಿಕಾರಿ ಡಾ. ಸುಭಾಷ್ ಚಂದ್ರ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಆನಂದ್ ಡೊಳ್ಳಿನ್, ಪರಿಸರ ಸಂರಕ್ಷಕ ಬೀರ​‍್ಪ, ಪ್ರಗತಿಪರ ಕೃಷಿಕ ಸಜ್ಜಿ ಶರಣಪ್ಪ ಹಾಗೂ ಸಂಗೀತ ಶಿಕ್ಷಕ ಮೌಲಾಸಾಬ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.  ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್, ತಾಪಂ ಇಒ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪತ್ರಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.