ರೈತರ ಸಮಸ್ಯೆ ನಿರ್ಲಕ್ಷ್ಯ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಬಿ.ಸಿ. ಪಾಟೀಲ್ ಆಕ್ರೋಶ
Allegation of Neglecting Farmers' Issues: Former Minister B.C. Patil Lashes Out at Congress Governme
ರಾಣೆಬೆನ್ನೂರು, 6: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಾಜಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಗುರುವಾರ ನಗರದ ಹೊರವಲಯದ ಮಾಕೋಡಿ ಇಟಗಿ ರಸ್ತೆ ಬಳಿ ತುಂಗಾ ಮೇಲ್ದಂಡೆ ಯೋಜನೆಯ ಮೂಲಕ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಯೋಜನಾ ಕಚೇರಿ ಮುತ್ತಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರ್ಪ ಅವರ ಆಡಳಿತದ ಅವಧಿಯಲ್ಲಿ ರೈತರ ಹಿತಕ್ಕಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೂಪಿಸಲಾಗಿತ್ತು. ಆದರೆ ಹಣ ಮೀಸಲಿಟ್ಟಿದ್ದರೂ ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದ ಕೆರೆಗಳಿಗೆ ನೀರು ಹರಿದಿಲ್ಲ ಎಂದು ಬಿ.ಸಿ. ಪಾಟೀಲ್ ಆರೋಪಿಸಿದರು.
ಯೋಜನೆ ಪೂರ್ಣಗೊಂಡಿದ್ದರೆ ಅಂತರ್ಜಲ ಮಟ್ಟ ಹೆಚ್ಚಾಗಿ ಕೊಳವೆ ಬಾವಿಗಳಲ್ಲಿ ನೀರು ಲಭ್ಯವಾಗುತ್ತಿತ್ತು. ರೈತರು ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತಿತ್ತು. ಆದರೆ ಮಳೆ ಕೊರತೆ, ಬರ ಪರಿಸ್ಥಿತಿ ಮತ್ತು ಸರ್ಕಾರದ ನಿರ್ಲಕ್ಷ್ಯದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.
20 ದಿನಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಭರವಸೆ
ಬೆಳಗ್ಗೆ 11 ಗಂಟೆಯಿಂದ ಆರಂಭವಾದ ಪ್ರತಿಭಟನೆ ಮಧ್ಯಾಹ್ನದವರೆಗೂ ಮುಂದುವರಿಯಿತು. ಸ್ಥಳಕ್ಕೆ ಆಗಮಿಸಿದ ಯುಟಿಪಿ ಇಲಾಖೆ ಅಧಿಕಾರಿಗಳು 20 ದಿನಗಳ ಒಳಗೆ ಎಲ್ಲ ಕೆರೆಗಳಿಗೆ ನೀರು ತುಂಬಿಸುವುದಾಗಿ ಭರವಸೆ ನೀಡಿದರು.
ಆದರೆ ಅಧಿಕಾರಿಗಳ ಭರವಸೆಗೆ ತೃಪ್ತರಾಗದ ಬಿ.ಸಿ. ಪಾಟೀಲ್, "ನಿಗದಿತ ಅವಧಿಯಲ್ಲಿ ಕೆರೆಗಳು ತುಂಬದಿದ್ದರೆ ಡಿಸೆಂಬರ್ 20ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುವುದು" ಎಂದು ಎಚ್ಚರಿಕೆ ನೀಡಿದರು. ಹೆದ್ದಾರಿ ತಡೆಯಿಂದ ಉಂಟಾಗುವ ಸಮಸ್ಯೆಗಳಿಗೆ ಅಧಿಕಾರಿಗಳೇ ಹೊಣೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ
ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಶಾಸಕರು ಸಚಿವ ಸ್ಥಾನಕ್ಕಾಗಿ ಓಡಾಡುತ್ತಿದ್ದಾರೆ. ರೈತರ ಹಿತಕ್ಕಿಂತ ಅಧಿಕಾರದ ಆಸಕ್ತಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಜನರು ದಿನನಿತ್ಯದ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಆರೋಪಿಸಿದರು.
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ರಾಣೆಬೆನ್ನೂರು ಮತ್ತು ಚಳಗೇರಿ ಕೆರೆ ಯೋಜನೆಗಳು ಹಲವು ವರ್ಷಗಳ ಹಿಂದೆ ಆರಂಭಗೊಂಡಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೆರೆ ತುಂಬಿಸುವ ಯೋಜನೆಗೆ ಎರಡು ಬಾರಿ ಶಂಕುಸ್ಥಾಪನೆ ಮಾಡಲಾಗಿದೆ, ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ದೂರಿದರು. "ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರ ತಕ್ಷಣ ಯೋಜನೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಈ ವಿಷಯವನ್ನು ಬಹಿರಂಗ ಚರ್ಚೆಗೆ ತರಬೇಕು" ಎಂದು ಅವರು ಸವಾಲು ಹಾಕಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 