ಕೆಲಸಕ್ಕೆ ಬೇಡಿಕೆ ಸಲ್ಲಿಸಿ; ಖಾತರಿ ಉದ್ಯೋಗ ಪಡೆಯಿರಿ: ಇಒ ದನವಾಡಕರ್

ಕೆಲಸಕ್ಕೆ ಬೇಡಿಕೆ ಸಲ್ಲಿಸಿ; ಖಾತರಿ ಉದ್ಯೋಗ ಪಡೆಯಿರಿ: ಇಒ ದನವಾಡಕರ್ Apply for a job; get guaranteed employment: EO Danwadakar

ಕಾರವಾರ 15:- ಗ್ರಾಮೀಣ ಪ್ರದೇಶದ ಜನರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ವ್ಯಾಪಕ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗಿದ್ದು, ಯಲ್ಲಾಪುರ ತಾಲೂಕಿನ ಉದ್ಯೋಗ ಆಕಾಂಕ್ಷಿಗಳು ತಮ್ಮ ಗ್ರಾಮ ಪಂಚಾಯತಿಗಳಿಗೆ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದರೆ ಕಡ್ಡಾಯವಾಗಿ ಉದ್ಯೋಗ ನೀಡಲು ತಾಲೂಕು ಪಂಚಾಯತಿಯಿಂದ ಸೂಚಿಸಲಾಗಿದೆ ಎಂದು ಯಲ್ಲಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ದನವಾಡಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 ಗ್ರಾಮೀಣ ಭಾಗದ ಕೂಲಿಕಾರರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ನರೇಗಾ ಯೋಜನೆ ಸಹಕಾರಿಯಾಗಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಕೂಡಲೇ ಅವರಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು. ಕೆಲಸಕ್ಕೆ ಬೇಡಿಕೆ ಸಲ್ಲಿಸಿದ 15 ದಿನಗಳ ಒಳಗಾಗಿ ಉದ್ಯೋಗ ನೀಡಲಾಗುವುದು.

ಒಂದು ವೇಳೆ 15 ದಿನದೊಳಗಾಗಿ ಉದ್ಯೋಗ ನೀಡಲು ವಿಫಲವಾದರೆ ನಿರುದ್ಯೋಗ ಭತ್ಯೆ ಸಹ ನೀಡಬೇಕಾಗುತ್ತದೆ. ಹೀಗಾಗಿ ಕೂಲಿಕಾರರು ತಮ್ಮ ಗ್ರಾಮದ ವ್ಯಾಪ್ತಿಯಲ್ಲಿಯೇ ಕೆಲಸ ಪಡೆಯಲು ಉತ್ತಮ ಅವಕಾಶವಿದೆ. ಯೋಜನೆ ಅಡಿಯಲ್ಲಿ ಗಂಡು ಮತ್ತು ಹೆಣ್ಣಿಗೆ ಸಮಾನ ವೇತನ, ದಿನಕ್ಕೆ 370 ರೂಪಾಯಿ ಕೂಲಿ ದರ ನಿಗದಿಪಡಿಸಿದ್ದು, ಕೆಲಸ ಮಾಡಿದ 15 ದಿನದೊಳಗೆ ಸರ್ಕಾರದಿಂದ ಕೂಲಿ ಮೊತ್ತ ನೇರವಾಗಿ ಕೂಲಿಕಾರರ ಬ್ಯಾಂಕ್ ಖಾತೆಗೆ ಕೂಲಿ ಪಾವತಿಸಲಾಗುವುದು.