ಧಾರವಾಡ ಜಿಲ್ಲೆಯಲ್ಲಿ ಬೆಳೆ ಹಾನಿ ಪರೀಶೀಲನೆ: ಪರಿಹಾರಕ್ಕೆ ಸರ್ಕಾರದ ಕ್ರಮ

ಧಾರವಾಡ ಜಿಲ್ಲೆಯಲ್ಲಿ ಬೆಳೆ ಹಾನಿ ಪರೀಶೀಲನೆ: ಪರಿಹಾರಕ್ಕೆ ಸರ್ಕಾರದ ಕ್ರಮ  Assessment of crop damage in Dharwad district: Government measures for relief

ಲೋಕದರ್ಶನ ವರದಿ 

ಧಾರವಾಡ 06 : ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ನೇತೃತ್ವದ ಅಧಿಕಾರಿಗಳ ತಂಡ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಯನ್ನು ಪರೀಶೀಲಿಸಿತು.  

ಜಿಲ್ಲೆಯ ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಶೇ.96ರಷ್ಟು ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಹೆಸರು, ಉದ್ದು, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮಳೆಯ ಪ್ರಮಾಣಕ್ಕಿಂತ ಬೆಳೆ ಬೆಳವಣಿಗೆಗೆ ಅಗತ್ಯವಾದ ಸಮಯದಲ್ಲಿ ಮಳೆಯಾಗದಿರುವುದು ಹಾನಿಗೆ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದರು.  

ರೈತರ ಸಮಸ್ಯೆಗಳ ಕುರಿತು ಸ್ಥಳೀಯ ರೈತರು, ರೈತ ಮುಖಂಡರು ಹಾಗೂ ತಾಂತ್ರಿಕ ತಜ್ಞರೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಲಾಗುತ್ತಿದೆ. ಬೆಳೆ ವಿಮೆ ಸೇರಿದಂತೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.  

ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ತಾಂತ್ರಿಕ ಮಾನದಂಡಗಳ ಆಧಾರದಲ್ಲಿ ಪರಿಹಾರ ನಿರ್ಧರಿಸಲಾಗುವುದು. ರೈತರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರದ ಗಮನಕ್ಕೆ ವಿಷಯ ತರಲಾಗುವುದು ಎಂದು ಸಂತೋಷ ಲಾಡ್ ತಿಳಿಸಿದರು.  

ನವಲಗುಂದ ಶಾಸಕ ಎನ್‌.ಎಚ್‌. ಕೋನರಡ್ಡಿ ಮಾತನಾಡಿ, ಹೆಸರು ಮತ್ತು ಹತ್ತಿ ಬೆಳೆಗಳು ಹೊರಗೆ ಹಸಿರಾಗಿದ್ದರೂ ಒಳಗಿನಿಂದ ಬೆಳವಣಿಗೆ ಕುಂಠಿತಗೊಂಡಿವೆ. ಹತ್ತಿ ಕಾಯಿಗಳ ಸಂಖ್ಯೆ ಕಡಿಮೆಯಾಗಿದ್ದು, ಪರಿಹಾರ ನೀಡುವ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಒತ್ತಾಯಿಸಿದರು.  

ಜಿಲ್ಲಾಧಿಕಾರಿ ಸ್ನೇಹಲ್ ಆರ್‌., ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಹಲವು ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಬೆಳೆಗಳ ಪರಿಸ್ಥಿತಿ ಪರೀಶೀಲಿಸಿದರು.