ಆಡಳಿತ ಚುರುಕುಗೊಳಿಸಲು ಪ್ರಯತ್ನ: ಡಿಸಿ, ಸಿಇಒಗಳಿಗೆ ಗುರಿ ನಿಗದಿಪಡಿಸಿದ ಮುಖ್ಯಮಂತ್ರಿ

 ಬೆಂಗಳೂರು, ಜೂ 13 :  ಆಡಳಿತಕ್ಕೆ ಚುರುಕು ಮುಟ್ಟಿಸಲು ಹಾಗೂ ಸರ್ಕಾರದ  ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಹಲವು ಗುರಿಗಳನ್ನು ನೀಡಿ ಅವುಗಳ ಈಡೇರಿಕೆಗೆ ಕಾಲಮಿತಿಯಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ 

ವಿವಿಧ ಜಿಲ್ಲೆಗಳಲ್ಲಿ ನಿರ್ಮಿಸಲು  ಉದ್ದೇಶಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ  ನಿಲಯಗಳ ಕಟ್ಟಡ ನಿರ್ಮಾಣಕ್ಕೆ  ಅಗತ್ಯ ಅನುದಾನದ ಶೇಕಡಾ 75ರಷ್ಟನ್ನು ಬಿಡುಗಡೆ ಮಾಡಲಾಗುವುದು. ಕೂಡಲೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ 

ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಗಳಿಗೆ ಮಂಜೂರಾದ 4080 ಕಾಮಗಾರಿಗಳಲ್ಲಿ 765 ಪೂರ್ಣಗೊಂಡಿವೆ. 1939 ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸಭೆಯಲ್ಲಿ ಸೂಚನೆ ನೀಡಲಾಗಿದೆ 

ಎಲ್ಲ ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ತಪ್ಪದೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.   ಹೈದರಾಬಾದ್ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಲು ಅನುವಾಗುವಂತೆ ತುರ್ತಾಗಿ  ಭರ್ತಿ  ಮಾಡುವ ಅಗತ್ಯವಿರುವ ಹುದ್ದೆಗಳಿಗೆ ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ 

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ದೇವರಾಜ ಅರಸು ವಸತಿ ಯೋಜನೆಯಡಿ ದಮನಿತರು, ಶೋಷಿತ ವರ್ಗದವರಿಗೆ ವಸತಿ ಸೌಲಭ್ಯ ಮಂಜೂರು ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ. 

ನಿಗದಿ ಪಡಿಸಲಾಗಿರುವ 63,196 ಗುರಿಗೆ ಎದುರಾಗಿ ಕೇವಲ 32,075 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಶೀಘ್ರವೇ ಆಸಕ್ತಿ ವಹಿಸಿ, ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಫಲಾನುಭವಿಗಳನ್ನು ಗುರುತಿಸಿ ಮನೆ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ  ನೀಡಿದ್ದಾರೆ. 

ಮುಖ್ಯಮಂತ್ರಿ ಗಳ ಬಹುಮಹಡಿ ವಸತಿ ಯೋಜನೆಯಡಿ ಮನೆಗಳನ್ನು ನಿಮರ್ಿಸಲು ಕೂಡಲೇ ಜಮೀನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚಿನೆ ನೀಡಲಾಗಿದೆ.