ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ
Awareness program on banning child marriage
ಕೊಪ್ಪಳ 17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳ ಕಛೇರಿ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಗಂಗಾವತಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಸ್ಲಾಂಪೂರ-ಗಂಗಾವತಿ ಇವರ ಸಂಯುಕ್ತಾಶ್ರಯದಲ್ಲಿ ಗಂಗಾವತಿಯ ಜಯನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜುಲೈ 15 ರಂದು ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗಾವತಿಯ ಡಾ.ವಿನೋದ ಅವರು ಮಾತನಾಡಿ, ಬಾಲ್ಯ ವಿವಾಹ ನಮ್ಮ ಸಮಾಜದ ಒಂದು ಸವಾಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ ಯುವಜನತೆಗೆ ಮತ್ತು ಪಾಲಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ಎಂದರೆ ಯಾವುದೇ 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಅಥವಾ 21 ವರ್ಷದೊಳಗಿನ ಗಂಡುಮಕ್ಕಳಿಗೆ ಮದುವೆ ಮಾಡುವುದಕ್ಕೆ ಬಾಲ್ಯವಿವಾಹ ಎಂದು ಕರೆಯುತ್ತಾರೆ. ಬಾಲ್ಯವಿವಾಹಕ್ಕೆ ಕಾರಣಗಳೆಂದರೆ ಬಡತನ, ಅನಕ್ಷರತೆ, ಮೂಢನಂಬಿಕೆ, ಬಾಲ್ಯವಿವಾಹದ ದುಷ್ಪರಿಣಾಮದ ಬಗ್ಗೆ ಅರಿವು ಇಲ್ಲದೇ ಇರುವುದು, ರಕ್ತ ಸಂಬಂಧವನ್ನು ಉಳಿಸಿಕೊಳ್ಳುವುದು, ಕುಟುಂಬದ ಆಸ್ತಿಯನ್ನು ಉಳಿಸಿಕೊಳ್ಳುವುದು, ಪಾಲಕರು ಮದುವೆ ಮಾಡಿ ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳುವುದು, ಸಾಮೂಹಿಕ ವಿವಾಹದಲ್ಲಿ ಕಡಿಮೆ ಖರ್ಚು ಆಗುತ್ತದೆ ಎಂಬ ಭಾವನೆ, ವೃದ್ಧರು ಹಾಗೂ ಅನಾರೋಗ್ಯದ ಹಿರಿಯರ ಆಸೆ ಈಡೇರಿಸುವ ಉದ್ದೇಶದಿಂದ ಬಾಲ್ಯವಿವಾಹ ನಡೆಯುತ್ತವೆ ಎಂದು ಹೇಳಿದರು.
ಬಾಲ್ಯವಿವಾಹ ಮಾಡುವುದರಿಂದ ಹೆಣ್ಣುಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಲ್ಯವಿವಾಹ ಮಾಡುವುದರಿಂದ ಇಬ್ಬರಿಗೂ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದಂತಾಗುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಹೆರಿಗೆ ಸಮಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ವಿಕಲಾಂಗ ಮಕ್ಕಳ ಜನನವಾಗುತ್ತದೆ. ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಬಲಾತ್ಕಾರಕ್ಕೆ ಒಳಗಾಗುತ್ತಾರೆ. ಲೈಂಗಿಕ ಖಾಯಿಲೆಗಳಿಂದ ಹೆಚ್.ಐ.ವಿ/ಏಡ್ಸ್ ರೋಗಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ ಹಾಗೂ ರಕ್ತಹೀನತೆ ಉಂಟಾಗುತ್ತದೆ ಮತ್ತು ಕಡಿಮೆ ತೂಕದ ಮಗುವಿನ ಜನನವಾಗುವ ಸಾಧ್ಯತೆ ಇರುತ್ತದೆ. ಶಿಶುಗಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ, ವಾರ್ಡ್ಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತು, ನಿರಂತರವಾಗಿ ಪಾಲಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನ ಮಾಡುವವರಿಗೆ ಮತ್ತು ಮಾಡಿಸುವವರಿಗೆ ಜೈಲುಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಕೊಪ್ಪಳವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ವಿದ್ಯಾರ್ಥಿಗಳು ನಾಯಕತ್ವ ವಹಿಸಿಕೊಂಡು ಜಾಗೃತಿ ಮೂಡಿಸಬೇಕು ಮತ್ತು ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆಮಾಡಿ ಬಾಲ್ಯ ವಿವಾಹ ನಿಯಂತ್ರಣ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಕ್ಷಯರೋಗ ಹಾಗೂ ಕುಷ್ಠರೋಗ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿವರವಾಗಿ ಮಾತನಾಡಿದರು. ಆರೋಗ್ಯ ನೀರೀಕ್ಷಣಾಧಿಕಾರಿ ಗುರುರಾಜ ಹೆಚ್.ಎಂ ಅವರು ಅಸಾಂಕ್ರಾಮಿಕ ರೋಗಗಳು, ಮಳೆಗಾಲದಲ್ಲಿ ಸೋಂಕಿತ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಚಿಕನ್ಗುನ್ಯಾ, ಮಲೇರಿಯಾ, ಮೆದುಳುಜ್ವರ, ಆನೆಕಾಲುರೋಗ ಹರಡದಂತೆ, ತಾಯಿ ಮಕ್ಕಳ ಆರೋಗ್ಯ ರಕ್ಷಣೆ, ಕುಟುಂಬ ಕಲ್ಯಾಣ ಕಾರ್ಯಕ್ರಮ ಕುರಿತು ವಿವರವಾಗಿ ಮಾತನಾಡಿದರು.
ವಸತಿ ನಿಲಯದ ವಾರ್ಡನ್ ಗೋವಿಂದಪ್ಪ ಅವರು ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಇಲಾಖೆಗಳು ಜಾಗೃತಿ ಮೂಡಿಸಿದರೆ ಸಾಲದು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಬಲವಾದ ಕಾನೂನುಗಳಿಂದ ಮಾತ್ರ ಬಾಲ್ಯ ವಿವಾಹ ನಿಷೇಧ ಮಾಡಲು ಸಾಧ್ಯ. ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳು ಹದಿ-ಹರೆಯದವರಿಗೆ ಬಹಳಷ್ಟು ಉಪಯುಕ್ತವಾಗಿವೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೇಲ್ವಿಚಾರಕರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಸರ್ವಮಂಗಳ, ಮಲೇರಿಯಾ ಲಿಂಕ್ ವರ್ಕರ್ ಹನುಮೇಶ, ರಮೇಶ, ಆರೋಗ್ಯ ಸ್ವಯಂ ಸೇವಕರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 