ಆಯುರ್ವೇದವು ಆರೋಗ್ಯಕರ ಜೀವನದರ್ಶನ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್

ಆಯುರ್ವೇದವು ಆರೋಗ್ಯಕರ ಜೀವನದರ್ಶನ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್  Ayurveda is a philosophy of healthy living: Governor Thawar Chand Gehlot

ಗದಗ 23: "ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಪದ್ಧತಿ ಮಾತ್ರವಲ್ಲ; ಅದು ಆರೋಗ್ಯಕರ ಜೀವನಶೈಲಿಯನ್ನು ರೂಪಿಸುವ ವೈಜ್ಞಾನಿಕ ಜೀವನದರ್ಶನವಾಗಿದೆ. ಪ್ರಾಚೀನ ಜ್ಞಾನವನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಆಯುರ್ವೇದವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಪರಿಚಯಿಸುವ ಅಗತ್ಯವಿದೆ" ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೇಳಿದರು.  

ಗಜೇಂದ್ರಗಡದ ಟಿ.ಟಿ.ಡಿ. ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಭಗವಾನ್ ಮಹಾವೀರ ಜೈನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.  

ಕರ್ನಾಟಕವು ಆಯುರ್ವೇದ, ಯೋಗ ಹಾಗೂ ಪ್ರಕೃತಿ ಚಿಕಿತ್ಸೆಯ ಕ್ಷೇತ್ರದಲ್ಲಿ ದೇಶದಲ್ಲೇ ವಿಶಿಷ್ಟ ಸ್ಥಾನ ಪಡೆದಿದ್ದು, ರಾಜ್ಯದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಯುವಜನತೆಗೆ ಉತ್ತಮ ಭವಿಷ್ಯ ನಿರ್ಮಿಸುತ್ತಿವೆ ಎಂದು ಹೇಳಿದರು.  

ಭಾರತೀಯ ಸಂಸ್ಕೃತಿಯಲ್ಲಿ ವೈದ್ಯರನ್ನು ದೇವರ ಸ್ವರೂಪವೆಂದು ಪರಿಗಣಿಸಲಾಗಿದೆ. ಮಹರ್ಷಿ ಚರಕರು ವೈದ್ಯ ವೃತ್ತಿಯನ್ನು ಸೇವೆಯೆಂದು ಬೋಧಿಸಿದ್ದು, ಭಗವಾನ್ ಮಹಾವೀರರ ಅಹಿಂಸಾ ತತ್ವವನ್ನು ವೈದ್ಯರು ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಂಡು ಸಮಾಜಸೇವೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.