ಬಳ್ಳಾರಿ: ಹೆಣ್ಣು ಮಕ್ಕಳ ಜನ್ಮೋತ್ಸವ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ
Bellary: Justice Rajesh N. Hosamane at the birth anniversary of a girl child
ಬಳ್ಳಾರಿ: ಹೆಣ್ಣು ಮಕ್ಕಳ ಜನ್ಮೋತ್ಸವ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ 24: ಸಮಾಜದಲ್ಲಿ ಹೆಣ್ಣು-ಗಂಡು ಎರಡು ಕಣ್ಣುಗಳಿದ್ದಂತೆ, ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಸಾಧನೆಗೈತ್ತಿರುವುದು ಸಂತಸದ ವಿಷಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದಡಿ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಹೆಣ್ಣುಮಕ್ಕಳ ಜನ್ಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ರಾಷ್ಟ್ರಪತಿಯವರು ಮತ್ತು ನಮ್ಮ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ನಿತರೆ ಉನ್ನತ ಹುದ್ದೆಗಳಲ್ಲಿ ಹೆಣ್ಣು ಮಕ್ಕಳು ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರ ಎಂಬ ಕಾರ್ಯಾಚರಣೆಯನ್ನೂ ಹೆಣ್ಣುಮಕ್ಕಳು ನಿರ್ವಹಿಸಿರುವುದು ಹೆಮ್ಮಯ ವಿಚಾರ. ಸಮಾಜದಲ್ಲಿ ಅವರಿಗೆ ಶಿಕ್ಷಣ, ಸಮಾನತೆ, ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.ಪ್ರಸ್ತುತ ದಿನಗಳಲ್ಲಿ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಲೈಂಗಿಕ ಶೋಷಣೆ, ಲಿಂಗ ತಾರತಮ್ಯ ಸೇರಿದಂತೆ ಇನ್ನಿತರೆ ದೌರ್ಜನ್ಯಗಳು ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿವೆ. ಇವುಗಳನ್ನು ಪ್ರೋತ್ಸಾಹಿಸದೇ ನಾವೆಲ್ಲರೂ ಒಗ್ಗೂಡಿ ತಡೆಗಟ್ಟಬೇಕಿದೆ. ಹೆಣ್ಣು ಮಕ್ಕಳು ಸರ್ಕಾರದ ಹಲವಾರು ಯೋಜನೆಗಳು ಮತ್ತು ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಕಿವಿಮಾತು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಎಂಬುದು ಭಾರತ ಸರ್ಕಾರದ ಒಂದು ಸಾಮಾಜಿಕ ಅಭಿಯಾನವಾಗಿದ್ದು,ಇದರ ಮುಖ್ಯ ಉದ್ದೇಶ ಹೆಣ್ಣು ಮಕ್ಕಳನ್ನು ಉಳಿಸುವುದು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಮತ್ತು ದೇಶದಲ್ಲಿ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಸುಧಾರಿಸುವುದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು 2015 ರ ಜನವರಿ 22 ರಂದು ಹರಿಯಾಣದ ಪಾಣಿಪತ್ನಲ್ಲಿ ಈ ಯೋಜನೆ ಪ್ರಾರಂಭಿಸಿದರು ಎಂದು ತಿಳಿಸಿದರು.ಹೆಣ್ಣು ಮಕ್ಕಳಿಗೆ ಸಮಾನವಾದ ಶಿಕ್ಷಣದ ಅವಕಾಶ ಒದಗಿಸಬೇಕಿದೆ. ಕುಸಿಯುತ್ತಿರುವ ಮಕ್ಕಳ ಲಿಂಗಾನುಪಾತದ ಸಮಸ್ಯೆಯನ್ನು ನಿವಾರಿಸಬೇಕಿದೆ. ಹೆಣ್ಣು ಮಕ್ಕಳ ಸಬಲೀಕರಣ ಮತ್ತು ಅವರ ಹಕ್ಕುಗಳನ್ನು ಉತ್ತೇಜಿಸುವುದು. ಹೆಣ್ಣು ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶದ ಸ್ಥಿತಿಯನ್ನು ಸುಧಾರಿಸುವುದು. ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಉಳಿಸುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರೂ ಹೆಣ್ಣುಮಕ್ಕಳಿಗೆ ಗೌರವ ಮತ್ತು ಪ್ರಾಮುಖ್ಯತೆ ನೀಡಬೇಕು. ಅವರು ಚೆನ್ನಾಗಿದ್ದರೆ ಸಮಾಜ ಮತ್ತು ನಮ್ಮ ಮನೆ ಚೆನ್ನಾಗಿರುತ್ತದೆ. ಎಲ್ಲಾ ಪೋಷಕರು ಲಿಂಗ ತಾರತಮ್ಯ, ಭೇದ-ಭಾವ, ಹೆಣ್ಣು ಮಕ್ಕಳು ಕುಟುಂಬಕ್ಕೆ ಹೊರೆ ಎಂದು ಭಾವಿಸದೇ ಅವರಿಗೆ ಉನ್ನತ ಶಿಕ್ಷಣ ಕೊಡಿಸಿ ಆರ್ಥಿಕವಾಗಿ ಸದೃಢರಾಗುವಂತೆ ಮಾಡಬೇಕು. ಎಲ್ಲಾ ಕ್ಷೇತ್ರಗಳಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾ ಆಸ್ಪತ್ರೆಯಲ್ಲಿ ಇತ್ತೀಚಿನ ನಾಲ್ಕೈದು ದಿನದಲ್ಲಿ ಹೆರಿಗೆ ವಿಭಾಗದಲ್ಲಿ ಹೆಣ್ಣು ಮಗುವಿನ ಜನನ ಅಧಿಕವಾಗಿದ್ದು, ಅ.17 ರಿಂದ 23 ರ ವರೆಗೆ ಸಂಭವಿಸಿದ 79 ಹೆರಿಗೆಯಲ್ಲಿ 50 ಹೆಣ್ಣು ಮಗು ಮತ್ತು 29 ಗಂಡು ಮಗು ಜನಿಸಿವೆ ಎಂದು ಮಾಹಿತಿ ನೀಡಿದರು.ಇದೇ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಅವರು ಹೆಣ್ಣ ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಎಂಬ ಪ್ರತಿಜ್ಞಾ ವಿಧಿ ಭೋದಿಸಿದರು.ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಹೆಣ್ಣುಮಗುವಿನ ಜನನ ಆಚರಣೆ ಮಾಡಲಾಯಿತು ಮತ್ತು ತಾಯಂದಿರಿಗೆ ಮಕ್ಕಳ ಕಿಟ್ ವಿತರಿಸಲಾಯಿತು.ಬಳಿಕ ಗಣ್ಯರು ಮಿಷನ್ ಶಕ್ತಿ ಯೋಜನೆ ಮತ್ತು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಭಿತ್ತಿ ಪತ್ರ ಅನಾವರಣಗೊಳಿಸಿದರು.ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಪೋಷಣೆಯ ಸಲುವಾಗಿ ಏರಿ್ಡಸಿದ್ದ ಸಹಿ ಸಂಗ್ರಹಣಾ ಫಲಕಕ್ಕೆ ನ್ಯಾ.ರಾಜೇಶ್ ಎನ್.ಹೊಸಮನೆ ಅವರು ಸಹಿ ಹಾಕುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಆಕರ್ಷಕ ಮಗುವಿನ ತೊಟ್ಟಿಲನ್ನು ಏರಿ್ಡಸಲಾಗಿತ್ತು. ತಾಯಂದಿರು ತಮ್ಮ ಮಗುವನ್ನು ತೊಟ್ಟಿಲಲ್ಲಿ ಹಾಕಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಉಮಾದೇವಿ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಸವಿತಾ, ಬಳ್ಳಾರಿ ನಗರ ಮತ್ತು ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೋಹನ್ ಕುಮಾರಿ, ವೈದ್ಯಾಧಿಕಾರಿಗಳಾದ ಡಾ.ವಿಶ್ವನಾಥ, ಡಾ.ವಿಮಲಾ ಸೇರಿದಂತೆ ವೈದ್ಯಾಧಿಕಾರಿಗಳು, ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ತಾಯಂದಿರು, ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 