ಜನರ ಬೇಡಿಕೆ ಸರ್ಕಾರಕ್ಕೆ ಸಲ್ಲಿಸಿ: ಶಾಸಕ ಬಿ.ನಾಗೇಂದ್ರ

ಜನರ ಬೇಡಿಕೆ ಸರ್ಕಾರಕ್ಕೆ ಸಲ್ಲಿಸಿ: ಶಾಸಕ ಬಿ.ನಾಗೇಂದ್ರ Bellary Taluk Panchayat 1st Quarter KDP Progress Review Meeting

ಬಳ್ಳಾರಿ ತಾಪಂ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆ:  

ಬಳ್ಳಾರಿ 21: ಇಲಾಖೆಗಳ ವಿವಿಧ ಯೋಜನೆಗಳಡಿ ಸೌಲಭ್ಯಗಳು, ಕೃಷಿ ಹಾಗೂ ಇತರೆ ಇಲಾಖೆಗಳ ಸಾಮಾಗ್ರಿ-ಸಲಕರಣೆಗಳು ಜನರಿಗೆ ವಿತರಿಸಲು ಸರ್ಕಾರ ಗುರಿ ನಿಗದಿಪಡಿಸುವುದಕ್ಕಿಂತ ಮುಂಚೆಯೇ ಜನರಿಗೆ ಯಾವ ಸೌಲಭ್ಯ ನೀಡಬೇಕು ಎನ್ನುವುದರ ಕುರಿತು ಆಯಾ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಹೇಳಿದರು.  

ನಗರದ ಕೋಟೆ ಪ್ರದೇಶದ ತಾಲ್ಲೂಕು ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಏರಿ​‍್ಡಸಿದ್ದ ಬಳ್ಳಾರಿ ತಾಲ್ಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಮಾತನಾಡಿ, ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಜೊತೆಗೂಡಿ ರೈತರಿಗೆ ತಾವು ಬೆಳೆದ ಬೆಳೆಗಳಿಗೆ ವಿಮೆ ಮಾಡಿಸುವಂತೆ ಜಾಗೃತಿ ನೀಡಬೇಕು. ಈವರೆಗೆ ಶೇ.01 ರಷ್ಟು ಸಹ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿಲ್ಲ. ಬೆಳೆ ಹಾನಿಯಾದಾಗ ವಿಮೆಯು ರೈತರನ್ನು ಕೈ ಹಿಡಿಯುತ್ತದೆ.  ಅವಧಿ ಮುಗಿದ ಬಳಿಕ ನೋಂದಾಯಿಸಿಕೊಂಡರೆ ಕೈ ಸುಟ್ಟು ಕೊಂಡಂತಾಗುತ್ತದೆ. ಹಾಗಾಗಿ ಆಯಾ ಪಿಡಿಒ ಗಳ ಸಹಕಾರದೊಂದಿಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ರೈತರಿಗೆ ಹೆಚ್ಚಾಗಿ ಮಾಹಿತಿ ನೀಡಬೇಕು ಎಂದರು. 

ಜಿಲ್ಲೆಯಲ್ಲಿ ಈ ಬಾರಿ ಮೆಣಸಿನಕಾಯಿ ಬೆಳೆ ಬೆಳೆಯಲು ರೈತರು ಹಿಂದೇಟು ಹಾಕುತ್ತಿದ್ದಾರೆ. ವಿವಿಧ ಯೋಜನೆಗಳಡಿ ಪರ್ಯಾಯ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಗೆ ಮನವರಿಕೆ ಮಾಡುವ ಮೂಲಕ ಅವರಿಗೆ ತೋಟಗಾರಿಕೆ ಇಲಾಖೆಯಿಂದ ಉತ್ತೇಜನ ನೀಡಬೇಕು ಅಧಿಕಾರಿಗಳಿಗೆ ತಿಳಿಸಿದರು. 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯನ್ನು ಮುಂಚೂಣಿಯಲ್ಲಿರಿಸಲು ಅಧಿಕಾರಿಗಳು ಸಾಕಷ್ಟು ಶ್ರಮವಹಿಸಬೇಕಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಅಗತ್ಯಕ್ಕೆ ತಕ್ಕಂತೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ, ನಮ್ಮ ಜಿಲ್ಲೆ ಇತರೆ ಜಿಲ್ಲೆಗಳಿಗೆ ಮಾದರಿಯಾಗಬೇಕು ಎಂದರಲ್ಲದೇ, ಬಳ್ಳಾರಿ ನಗರ ಮತ್ತು ಬಳ್ಳಾರಿ ಗ್ರಾಮೀಣಕ್ಕೆ ಪ್ರತ್ಯೇಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸರ್ಕಾರಕ್ಕೆ ಪತ್ರ ಬರೆಯಿರಿ ಎಂದರು. 

ಸಭೆಯಲ್ಲಿ ವಿವಿಧ ಇಲಾಖೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.  

ಸಭೆಗೂ ಮುನ್ನ ಗ್ಯಾರಂಟಿ ಯೋಜನೆಯ ಯುವನಿಧಿ ಯ ಮೂರನೇ ವರ್ಷದ ನೋಂದಣಿ ಪ್ರಕ್ರಿಯೆ ಮಾಹಿತಿ  ಕುರಿತ ಭಿತ್ತಿಚಿತ್ರ ಮತ್ತು ಡಿಎಪಿ ರಸಗೊಬ್ಬರ ಬಳಕೆ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಕೆ ಮಾಡುವ ಕುರಿತ ಮಾಹಿತಿ ಭಿತ್ತಿಚಿತ್ರ ಗಣ್ಯರು ಅನಾವರಣಗೊಳಿಸಿದರು. 

ಈ ವೇಳೆ ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಬಳ್ಳಾರಿ ತಾಪಂ ಆಡಳಿತಾಧಿಕಾರಿಯೂ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ, ಬಳ್ಳಾರಿ ತಾಪಂ ಇಓ ಶ್ರೀಧರ್ ಐ ಬಾರಿಕಾರ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.