ಆರೋಗ್ಯವಂತ ಸಮಾಜದಿಂದ ಆರೋಗ್ಯಕರ ರಾಷ್ಟ್ರ ನಿರ್ಮಾಣ ಸಾಧ್ಯ: ಅವ್ವಾರು ಮಂಜುನಾಥ್

ಆರೋಗ್ಯವಂತ ಸಮಾಜದಿಂದ ಆರೋಗ್ಯಕರ ರಾಷ್ಟ್ರ ನಿರ್ಮಾಣ ಸಾಧ್ಯ: ಅವ್ವಾರು ಮಂಜುನಾಥ್  Building a healthy nation is possible through a healthy society: Avvaru Manjunath

ಬಳ್ಳಾರಿ 26: ಆರೋಗ್ಯವಂತ ಸಮಾಜದಿಂದ ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸಲು ಸಾಧ್ಯ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಹೇಳಿದರು.  

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ಹಾಗೂ ಸುಭದ್ರ ಹೆಲ್ತ್‌ ಕೇರ್ ಸಂಯುಕ್ತವಾಗಿ ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಆರೋಗ್ಯವು ಪ್ರತಿಯೊಬ್ಬರಿಗೂ ಅಮೂಲ್ಯ ಆಸ್ತಿ. ಆರೋಗ್ಯವಂತ ವ್ಯಕ್ತಿಗಳಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ಒದಗಿಸುವ ಉದ್ದೇಶದಿಂದ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.  

ಶಿಬಿರವನ್ನು ಉದ್ಘಾಟಿಸಿದ ಬಳ್ಳಾರಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಮಾತನಾಡಿ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವ್ಯಾಪಾರ ಮತ್ತು ಕೈಗಾರಿಕೆಗೆ ಮಾತ್ರ ಸೀಮಿತವಾಗದೆ ಆರೋಗ್ಯ, ಕೌಶಲ್ಯಾಭಿವೃದ್ಧಿ, ಶಿಕ್ಷಣ ಹಾಗೂ ಕೃಷಿ ಕ್ಷೇತ್ರಗಳಲ್ಲಿಯೂ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.  

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಡಿ. ಪೆನ್ನೇಕರ್, ಸಾರ್ವಜನಿಕರು ಹಾಗೂ ಸಂಸ್ಥೆಯ ಸದಸ್ಯರಿಗಾಗಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿರುವುದು ಸಂಸ್ಥೆಯ ಸೇವಾ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.  

ಸ್ಪರ್ಶ್‌ ಆಸ್ಪತ್ರೆಯ ಡಾ. ಸಂದೀಪ್ ಆರ್‌. ಮಾಳಬಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಆಸ್ಪತ್ರೆಯು ವಿವಿಧ ಆರೋಗ್ಯ ಯೋಜನೆಗಳ ಮೂಲಕ ಸಾರ್ವಜನಿಕರಿಗೆ ಹಾಗೂ ಅರ್ಹರಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹನುಮಂತಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್‌. ಬಸಾರೆಡ್ಡಿ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಎಸ್‌. ದೊಡ್ಡನಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

ಸ್ಪರ್ಶ್‌ ಆಸ್ಪತ್ರೆಯ ವಿಶ್ವನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶ್ಬಾಬು ವಂದಿಸಿದರು.  

ಶಿಬಿರದಲ್ಲಿ ಸಾವಿರಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜೀವಮಾನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.