ರೈತ ಉತ್ಪಾದಕ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ನಿರ್ದೇಶಕರಿಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮ
Capacity development program for CEOs and board directors of farmer producer companies
ಲೋಕದರ್ಶನ ವರದಿ
ನೇಸರಗಿ 06: ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ, ಬೆಂಗಳೂರು ಇವರ ಸಹಯೋಗದಲ್ಲಿ ಜಲಾನಯನ ಮತ್ತು ತೋಟಗಾರಿಕೆ ಇಲಾಖೆ ಪ್ರೋತ್ಸಾಹಿತ ರೈತ ಉತ್ಪಾದಕ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ನಿರ್ದೇಶಕರಿಗೆ ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕ ಹೆಚ್. ಡಿ. ಕೋಳೆಕರ ಮಾತನಾಡಿ, ಜಿಲ್ಲೆಯಲ್ಲಿ ಅನೇಕ ರೈತ ಉತ್ಪಾದಕ ಸಂಸ್ಥೆಗಳು ರಚನೆಗೊಂಡು ಕಾರ್ಯಪ್ರವೃತ್ತವಾಗಿವೆ. ಆದಾಗ್ಯೂ ನೀರೀಕ್ಷಿತ ಮಟ್ಟದಲ್ಲಿ ರೈತ ಉತ್ಪಾದಕ ಗುಂಪುಗಳು ಸ್ವಾವಲಂಬನೆ ಸಾಧಿಸುವಲ್ಲಿ ಹಿಂದುಳಿದಿವೆ. ಈ ಕುರಿತು ನಿರ್ದೇಶಕ ಮಂಡಳಿಗಳು ರೈತ ಉತ್ಪಾದಕ ಕಂಪನಿಗಳ ಉತ್ಕೃಷ್ಟ ಕೇಂದ್ರವು ಕಾಲಕಾಲಕ್ಕೆ ನೀಡುವ ತರಬೇತಿಗಳ ಮೂಲಕ ಕೌಶಲ್ಯಯುಕ್ತವಾಗಿ ಆಡಳಿತ ಸುಧಾರಣೆಗಳನ್ನು ತಂದು ಸೂಕ್ತ ಕ್ರಮಗಳನ್ನು ಅನುಸರಿಸಿ ಸ್ವಾವಲಂಬನೆ ಸಾಧಿಸಬೇಕೆಂದು ಕರೆ ನೀಡಿದರು.
ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ಹಿರಿಯ ಸಲಹೆಗಾರ ಜಯಣ್ಣ ವಾಯ್. ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ರೈತ ಉತ್ಪಾದಕ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಬಲಪಡಿಸಲು ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ವತಿಯಿಂದ ರೈತ ಉತ್ಪಾದಕ ಕಂಪನಿಗಳ ರಚನೆ, ಜವಾಬ್ದಾರಿಗಳು, ಆಡಳಿತ್ಮಾಕ ನಿರ್ವಹಣೆ ಹಾಗೂ ಮೌಲ್ಯ ಸರಪಳಿ ವಿಶ್ಲೇಷಣೆ ಕುರಿತು ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ತರಬೇತಿಯನ್ನು ಕಾಲಕಾಲಕ್ಕೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು ಹಾಗೂ ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನ ಪಡೆದು ಸಂಸ್ಥೆಯ ಕಾರ್ಯಕ್ಷಮತೆಯನ್ನು ಉತ್ತಮಪಡಿಸಬೇಕೆಂದು ತಿಳಿಸಿದರು.
ವಿಜಯಪುರ ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಉಪಾಧ್ಯಕ್ಷ ಮದನ ಲೋಣಿ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಅವರು, ರೈತ ಉತ್ಪಾದಕ ಕಂಪನಿಗಳ ಸಮಸ್ಯೆಗಳನ್ನು ಆಯಾ ಕಂಪನಿಗಳಿಂದ ಸ್ವೀಕರಿಸಿ ಪರಿಹಾರ ಕಂಡುಕೊಳ್ಳಲು ಒಕ್ಕೂಟವು ಸರ್ಕಾರದೊಂದಿಗೆ ಸೇತುವೆಯಂತೆ ಕೆಲಸ ಮಾಡಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿಯವರು ಮಾತನಾಡಿ, ರೈತರ ಗುಂಪನ್ನು ಬಲಪಡಿಸಲು ಹಾಗೂ ಪರಸ್ಪರ ಸಂಪರ್ಕದೊಂದಿಗೆ ಕೃಷಿಯನ್ನು ಲಾಭದಾಯಕ ಮಾಡುವ ಹಾಗೂ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ದೇಶದಲ್ಲಿ 10,000 ರೈತ ಉತ್ಪಾದಕ ಸಂಸ್ಥೆಗಳನ್ನು ರಚನೆ ಮಾಡಲಾಗುತ್ತಿದೆ. ಈ ಸಂಸ್ಥೆಗಳ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ರೈತರಿಗೆ ಅನೇಕ ತಂತ್ರಜ್ಞಾನಗಳ ಮಾಹಿತಿಯನ್ನು ರೈತ ಉತ್ಪಾದಕ ಸಂಸ್ಥೆಯ ಸದಸ್ಯರಿಗೆ ಕಾಲಕಾಲಕ್ಕೆ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ನೀಡಿ ರೈತರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು. ಈ ಹಿನ್ನಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಯ ಸದಸ್ಯರು ಕೃಷಿ ವಿಜ್ಞಾನ ಕೇಂದ್ರದ ಸಂಪರ್ಕವಿಟ್ಟುಕೊಂಡು ಉತ್ಪಾದಕತೆ ಹೆಚ್ಚಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿ ಎಸ್. ಎಮ್. ವಾರದ ಸ್ವಾಗತಿಸಿದರು, ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ವಂದಿಸಿದರು. ರೈತ ಉತ್ಪಾದಕ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ನಿರ್ದೇಶಕರು ಸೇರಿದಂತೆ ಒಟ್ಟು 63 ಜನ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 