ಈದ್ ಮಿಲಾದ್ ಶಾಂತಿ, ಸೌಹಾರ್ದತೆಯಿಂದ ಆಚರಿಸಿ

ಈದ್ ಮಿಲಾದ್ ಶಾಂತಿ, ಸೌಹಾರ್ದತೆಯಿಂದ ಆಚರಿಸಿ Celebrate Eid Milad with peace and harmony

ತಾಳಿಕೋಟಿ ೨೪: ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸ್ಮರಣಾರ್ಥ ಆ.೨೬ರಂದು ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಪಟ್ಟಣದಲ್ಲಿ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಪಿಎಸ್‌ಐ ಜ್ಯೋತಿ ಖೋತ್ ಹೇಳಿದರು. 

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈದ್ ಮಿಲಾದ್ ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಹಬ್ಬವಾಗಿದೆ. ಎಲ್ಲ ಸಮುದಾಯಗಳ ಜನರು ಪರಸ್ಪರ ಗೌರವ ಹಾಗೂ ಸಹಬಾಳ್ವೆಯಿಂದ ಹಬ್ಬ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. 

ಸಮಾಜದ ಪ್ರಮುಖರಾದ ಮೊದಿನಸಾಬ್ ನಾಗರಚಿ ಮಾತನಾಡಿ, ಪಟ್ಟಣದಲ್ಲಿ ಎಲ್ಲ ಸಮುದಾಯದವರು ಒಗ್ಗಟ್ಟಿನಿಂದ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸುವ ಪರಂಪರೆಯನ್ನು ಮುಂದುವರಿಸಬೇಕು ಎಂದರು. 

ಈದ್ ಮಿಲಾದ್ ಅಂಗವಾಗಿ ಪಟ್ಟಣದಲ್ಲಿ ದೊಡ್ಡ ಪ್ರಮಾಣದ ಮೆರವಣಿಗೆ ನಡೆಸದೆ, ಮೂರು ಬಡಾವಣೆಗಳಲ್ಲಿ ಯುವಕರು ಆಯೋಜಿಸಿರುವ ಸಿಹಿ ವಿತರಣೆ ಸೇರಿದಂತೆ ಸಣ್ಣ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. 

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಬೂಬ್ ಚೋರಗಸ್ತಿ, ಕಾಂಗ್ರೆಸ್ ಯುವ ಮುಖಂಡ ಫಯಾಜ್ ಉತಾಳ, ಉಸ್ಮಾನ್ ಪಟೇಲ್, ಸಮಾಜ ಸೇವಕರಾದ ಮೊಹಮ್ಮದ್ ಶಫೀಕ್ ಇನಾಮದಾರ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.