ಮುದ್ದೆಬಿಹಾಳ 13: ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವದು ಶಿಕ್ಷಾರ್ಹ ಅಪರಾಧ. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಇಂತಹ ಪ್ರಕರಣಗಳಲ್ಲಿ ಮುಲಾಜಿಲ್ಲದೇ ಕ್ರಮವಹಿಸಬೇಕು ಎಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ ಕೌಶಿಕ ಅವರು ಹೇಳಿದರು.ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯುವ ಉದ್ದೇಶದಿಂದ ದೇಶದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪ್ರತೀ ವರ್ಷ ಆಚರಿಸುತ್ತ ಬರುತ್ತಿದ್ದರೂ, ಇನ್ನೂ ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗದಿರುವದು ಬೇಸರದ ಸಂಗತಿ. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಪ್ರಕರಣಗಳು ಕಂಡು ಬಂದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಯಾವ ಪ್ರಭಾವಕ್ಕೂ ಒಳಗಾಗದೇ ಕ್ರಮಕ್ಕೆ ಮುಂದಾಗಬೇಕು. ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮೇಲಿಂದ ಮೇಲೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಅವರು ಮಾತನಾಡಿ 1986ರಲ್ಲಿ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಜಾರಿಗೆ ಬಂದಿದೆ. 14ವರ್ಷದ ಒಳಗಿನ ಮಕ್ಕಳು ಬಾಲ ಕಾರ್ಮಿಕರಾಗುತ್ತಾರೆ. ಕಾಯ್ದೆಯ ಪ್ರಕಾರ ಬಾಲ ಕಾರ್ಮಿಕರನ್ನು ದುಡಿಸಿಕೊಂಡಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ. ಹಾಗಾಗಿ ಯಾವ ಮಾಲೀಕರೂ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಲು ಮುಂದಾಗಬಾರದು ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅವರು ಮಾತನಾಡಿ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯುವದು ಕೇವಲ ಅಧಿಕಾರಿಗಳ ಜವಾಬ್ದಾರಿಯಲ್ಲ, ನಮ್ಮ ನಿಮ್ಮೆಲ್ಲರ ಜವಾಬ್ದಾರಿಯೂ ಆಗಿದೆ. ಪಾಲಕರು ತಮ್ಮ ಮಕ್ಕಳ ಬಾಲ್ಯದ ದುಡಿಮೆಗೆ ಆಸೆ ಪಡೆದೇ ಚನ್ನಾಗಿ ಓದಿಸಲು ಮುಂದಾಗಬೇಕು ಎಂದರು. ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ ವಿಶೇಶ ಉಪನ್ಯಾಸ ನೀಡಿದರು. ಕಾರ್ಮಿಕ ನೀರೀಕ್ಷಕ ಅಲೀಂ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ವಿದ್ಯಾಲಯದ ಮುಖ್ಯಗುರು ಅನೀಲ ರಾಠೋಡ, ದೈಹಿಕ ಶಿಕ್ಷಕ ಎ.ಸಿ.ಕೆರೂರ, ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ್ ಮಹಾಂತೇಶ ಹಚರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.ಕೋಟ್:
14ವರ್ಷದ ಒಳಗಿನ ಮಕ್ಕಳು ಕಾರ್ಖಾನೆ, ಹೋಟಲ್ ಸೇರಿದಂತೆ ಇನ್ನೀತರ ಯಾವುದಾದರೂ ಅಂಗಡಿಗಳಲ್ಲಿ ದುಡಿಯುತ್ತಿರೋದು ಕಂಡು ಬಂದಲ್ಲಿ ಕೂಡಲೇ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಅಥವಾ ಪಟ್ಟಣದ ನ್ಯಾಯಾಲಯದಲ್ಲಿರುವ ಕಾನೂನು ಸೇವಾ ಸಮಿತಿಗೆ ದೂರು ನೀಡುವ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವಲ್ಲಿ ಸಹಕರಿಸಿ.-ರವೀಂದ್ರಕುಮಾರ ಕಟ್ಟಿಮನಿ. ಅಧ್ಯಕ್ಷರು ಕಾನೂನು ಸೇವಾ ಸಮಿತಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರು.