ಬಾಲ ಕಾರ್ಮಿಕ ಪದ್ದತಿಯಿಂದ ಮಕ್ಕಳ ಬೆಳವಣಿಗೆ ಕುಂಠಿತ

ಬಾಲ ಕಾರ್ಮಿಕ ಪದ್ದತಿಯಿಂದ ಮಕ್ಕಳ ಬೆಳವಣಿಗೆ ಕುಂಠಿತ Child labor stunts children's growth

ಕಾರವಾರ 12 :- ಬಾಲ ಕಾರ್ಮಿಕ ಪದ್ದತಿಯಿಂದ ಮಕ್ಕಳ ಭೌತಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತಗೊಳ್ಳಲಿದ್ದು,  ಮಕ್ಕಳಿಗೆ ಆಟ ಪಾಠದ ಜೊತೆ ಉತ್ತಮ ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಒದಗಿಸುವ ಉದ್ದೇಶದಿಂದ, ಬಾಲ ಕಾರ್ಮಿಕ ಪದ್ದತಿ ನಿಮೂಲನೆ ಮಾಡುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್ ಹೇಳಿದರು. 

ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ (ರಿ), ಸೆಂಟ್ ಜೋಸೆಫ್ಸ್‌ ಪದವಿ ಪೂರ್ವ ಮಹಾ ವಿದ್ಯಾಲಯ ಕಾಜುಭಾಗ ಇವರ ಸಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

 ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ವರ್ಷಪೂರ್ತಿ ಅದರ ಉದ್ದೇಶವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೆಚ್ಚಿನ ಮಕ್ಕಳು ಬಡತನ ಮತ್ತು ವಲಸೆಯ ಕಾರಣದಿಂದಾಗಿ ಬಾಲ ಕಾರ್ಮಿಕ ಪದ್ಧತಿಗೆ ದೂಡಲ್ಪಡುತ್ತಿದ್ದಾರೆ.  ಕಾರ್ಖಾನೆ, ಹೋಟೆಲ್ ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಪಾಲಕರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಆ ನಿಟ್ಟಿನಲ್ಲಿ ಅವರಿಗೆ ಸರ್ಕಾರದ ವಿವಿಧ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.