ಬಾಲ್ಯವಿವಾಹ ಸಮಾಜಕ್ಕೆ ಮಾರಕ: ಕಾನೂನು ಬಾಹಿರ ಸಂಡೂರಿನಲ್ಲಿ ಜಾಗೃತಿ ಕಾರ್ಯಕ್ರಮ

ಬಾಲ್ಯವಿವಾಹ ಸಮಾಜಕ್ಕೆ ಮಾರಕ: ಕಾನೂನು ಬಾಹಿರ ಸಂಡೂರಿನಲ್ಲಿ ಜಾಗೃತಿ ಕಾರ್ಯಕ್ರಮ  Child marriage is detrimental to society and illegal; awareness program held in Sandur

ಲೋಕದರ್ಶನ ವರದಿ 

ಬಳ್ಳಾರಿ, ಸೆ.15 (ಕರ್ನಾಟಕ ವಾರ್ತೆ): 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗಂಡುಮಕ್ಕಳಿಗೆ ವಿವಾಹ ಮಾಡುವುದು ಕಾನೂನು ಬಾಹಿರವಾಗಿದ್ದು, ಇದು ಸಮಾಜಕ್ಕೆ ದೊಡ್ಡ ಪಿಡುಗಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಹೇಳಿದರು.  

ಸಂಡೂರಿನ ಎಸ್‌ಇಎಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ‘ಬಾಲ್ಯವಿವಾಹ ನಿಷೇಧ ಹಾಗೂ ಹದಿಹರೆಯದವರ ಆರೋಗ್ಯ ರಕ್ಷಣೆ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ಬಡತನ, ಅಜ್ಞಾನ, ಮೂಢನಂಬಿಕೆ ಹಾಗೂ ಕುಟುಂಬದ ಆಸ್ತಿ ಉಳಿಸಿಕೊಳ್ಳುವ ಉದ್ದೇಶದಿಂದ ಇಂದಿಗೂ ಬಾಲ್ಯವಿವಾಹಗಳು ನಡೆಯುತ್ತಿರುವುದು ವಿಷಾದನೀಯ. ಇದರಿಂದ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಅಡ್ಡಿಯಾಗುವುದರ ಜತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೂ ತೀವ್ರ ದುಷ್ಪರಿಣಾಮ ಬೀರುತ್ತದೆ. ಬಾಲ್ಯದಲ್ಲೇ ಗರ್ಭಧಾರಣೆಯಾದರೆ ರಕ್ತಹೀನತೆ, ಅಪೌಷ್ಟಿಕತೆ ಸೇರಿದಂತೆ ತಾಯಿ ಮತ್ತು ಶಿಶು ಮರಣದ ಅಪಾಯ ಹೆಚ್ಚಾಗುತ್ತದೆ ಎಂದು ತಿಳಿಸಿದರು.  

ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡಿಸುವುದು, ಅದರಲ್ಲಿ ಭಾಗಿಯಾಗುವುದು ಅಥವಾ ಪ್ರೋತ್ಸಾಹಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ತಪ್ಪಿತಸ್ಥರಿಗೆ ಎರಡು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದರೆ ಸಾರ್ವಜನಿಕರು ಮಕ್ಕಳ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.  

ಪೋಕ್ಸೋ ಕಾಯ್ದೆ-2012 ಹಾಗೂ ಮಾನಸಿಕ ಆರೋಗ್ಯ ನೆರವಿಗಾಗಿ ‘ಟೆಲಿ-ಮಾನಸ್‌’ (14416) ಸಹಾಯವಾಣಿಯ ಬಗ್ಗೆಯೂ ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸಲಾಯಿತು.  ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಬಂಡೇಗೌಡ ಅವರು ಕ್ಷಯ, ಕುಷ್ಠರೋಗ ಹಾಗೂ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ವಿವರಿಸಿದರು. ಆರ್‌.ಕೆ.ಎಸ್‌.ಕೆ ಆಪ್ತಸಮಾಲೋಚಕ ಪತೇಗೌಡ ಅವರು ಮೈತ್ರಿ ಮುಟ್ಟಿನ ಕಪ್ ಬಳಕೆ ಹಾಗೂ ಪೋಷಣ್ ಮಾಸಾಚರಣೆಯ ಮಹತ್ವ ವಿವರಿಸಿದರು.  

ಶಾಲೆಯ ಮುಖ್ಯೋಪಾಧ್ಯಾಯಿನಿ ಕಲ್ಲಯ್ಯ ಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅನಸೂಯ ಹಾಗೂ ಎಚ್‌ಐವಿ ಅನುರಣಾ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಶಾಲೆಯ ನೂರಾರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.