ಡಿಜಿಟಲ್ ಪೋಸ್ಟರ್ ವಿಚಾರಕ್ಕೆ ಗಲಾಟೆ; 7 ಮಂದಿಗೆ ಗಾಯ

ಡಿಜಿಟಲ್ ಪೋಸ್ಟರ್ ವಿಚಾರಕ್ಕೆ ಗಲಾಟೆ; 7 ಮಂದಿಗೆ ಗಾಯ  Clash over digital poster; 7 injured.

ಡಿಜಿಟಲ್ ಪೋಸ್ಟರ್ ವಿಚಾರಕ್ಕೆ ಗಲಾಟೆ; 7 ಮಂದಿಗೆ ಗಾಯ  

ಸಂಬರಗಿ  12: ಸಮೀಪದ ಮಹಾರಾಷ್ಟ್ರದ ಜತ್ ತಾಲೂಕಿನ ಡಫಳಾಪುರದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ಉಮಾಜಿರಾವ್ ನಾಯಕ್ ಅವರ ಡಿಜಿಟಲ್ ಪೋಸ್ಟರ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.  

ಘಟನೆಯಲ್ಲಿ ಪೊಲೀಸ್ ವಾಹನಕ್ಕೆ ಹಾನಿಯಾಗಿದ್ದು, ಗ್ರಾಮದ ಅಂಗಡಿಯೊಂದಕ್ಕೂ ಹಾನಿಯಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ. ಗಾಯಗೊಂಡ ಏಳು ಮಂದಿಯಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಜತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮೂರು ದಿನಗಳ ಹಿಂದೆ ಉಮಾಜಿರಾವ್ ನಾಯಕ್ ಅವರ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿತ್ತು. ಶನಿವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಡಿಜಿಟಲ್ ಪೋಸ್ಟರ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ವಾಗ್ವಾದ ಆರಂಭವಾಗಿ, ಬಳಿಕ ಗಲಾಟೆಗೆ ತಿರುಗಿದೆ.  

ಮಾಹಿತಿ ತಿಳಿದು ಜತ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಮುನ್ನವೇ ಜಿಲ್ಲಾ ಪೊಲೀಸ್ ತಂಡವನ್ನೂ ಸ್ಥಳಕ್ಕೆ ಕರೆಸಲಾಯಿತು. ಸುಮಾರು ಎರಡು ಗಂಟೆಗಳ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗ್ಗೆಯಿಂದ ಸಂಜೆವರೆಗೆ ಗ್ರಾಮವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಗಾಯಾಳುಗಳನ್ನು ಮೀರಜ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಂಗ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ತುಷಾರ್ ದೋಶಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.  

ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಗ್ರಾಮದಲ್ಲಿ ಶಾಂತಿ ಕಾಪಾಡಲು ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಡಫಳಾಪುರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್‌ ನಿಯೋಜಿಸಲಾಗಿದೆ. ಎಲ್ಲರೂ ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.