ವಿದ್ಯಾರ್ಥಿನಿಯರ ಪ್ರತಿಭೆ ಅನಾವರಣಕ್ಕೆ ಶಾಸ್ತ್ರೀಯ ಸಂಗೀತ ಸಹಕಾರಿ: ವೆಂಕಟೇಶ್

ವಿದ್ಯಾರ್ಥಿನಿಯರ ಪ್ರತಿಭೆ ಅನಾವರಣಕ್ಕೆ ಶಾಸ್ತ್ರೀಯ ಸಂಗೀತ ಸಹಕಾರಿ: ವೆಂಕಟೇಶ್  Classical music helps showcase students' talent: Venkatesh

ಲೋಕದರ್ಶನ ವರದಿ  

ಬಳ್ಳಾರಿ  31: ವಿದ್ಯಾರ್ಥಿನಿಯರ ಪ್ರತಿಭೆಯನ್ನು ಉತ್ತೇಜಿಸುವ ಜೊತೆಗೆ ಭಾರತೀಯ ಸಂಗೀತ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಡೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ್ ಹೇಳಿದರು.  

ಪಟ್ಟಣದ ಡಾ. ಬಿ.ಆರ್‌. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರಿಗಾಗಿ ಗುರುವಾರ ಆಯೋಜಿಸಿದ್ದ ‘ಶಾಸ್ತ್ರೀಯ ಸಂಗೀತ’ ಕಲಿಕಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಶಿಕ್ಷಣದ ಜೊತೆಗೆ ವಿದ್ಯಾರ್ಥಿನಿಯರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಶಾಸ್ತ್ರೀಯ ಸಂಗೀತವು ಭಾರತೀಯ ಸಂಸ್ಕೃತಿಯ ಅಮೂಲ್ಯ ಪರಂಪರೆಯಾಗಿದ್ದು, ವಿದ್ಯಾರ್ಥಿನಿಯರಲ್ಲಿ ಶಿಸ್ತು, ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಲು ನೆರವಾಗುತ್ತದೆ ಎಂದು ತಿಳಿಸಿದರು.  

ಈ ತರಬೇತಿಯಿಂದ ವಿದ್ಯಾರ್ಥಿನಿಯರಲ್ಲಿರುವ ಸಂಗೀತ ಪ್ರತಿಭೆ ಹೊರಹೊಮ್ಮಲಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶಗಳು ದೊರೆಯಲಿವೆ. ಪ್ರತಿಭೆ ಅನಾವರಣಕ್ಕೆ ಇಂತಹ ತರಬೇತಿಗಳು ಸಹಕಾರಿಯಾಗಲಿವೆ ಎಂದು ಹೇಳಿದರು.  

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.  ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೇತ್ರಾವತಿ, ಬಿ. ತಾಯಪ್ಪ, ವಿಠಲ್, ರಾಜೇಶ್, ಆಸಿಯಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.