ಮಾನವ ಕಳ್ಳಸಾಗಣೆ ತಡೆಗೆ ಎಲ್ಲರ ಸಹಕಾರ ಅಗತ್ಯ: ನ್ಯಾಯಾಧೀಶೆ ಶ್ರೀಶೈಲಜಾ ಎಚ್‌.ವಿ.

ಮಾನವ ಕಳ್ಳಸಾಗಣೆ ತಡೆಗೆ ಎಲ್ಲರ ಸಹಕಾರ ಅಗತ್ಯ: ನ್ಯಾಯಾಧೀಶೆ ಶ್ರೀಶೈಲಜಾ ಎಚ್‌.ವಿ. Cooperation of all is essential to prevent human trafficking: Judge Srishailaja H.V.

ಲೋಕದರ್ಶನ ವರದಿ 

  ಹಾವೇರಿ, ಜು.31: ಮಾನವ ಕಳ್ಳಸಾಗಣೆ ತಡೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಈ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್‌.ವಿ. ಹೇಳಿದರು.  

ನಗರದ ಜೆಪಿ ರೋಟರಿ ಪ್ರೌಢಶಾಲೆಯಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಮಾನವ ಕಳ್ಳಸಾಗಣೆ ಸಮಾಜಕ್ಕೆ ದೊಡ್ಡ ಸವಾಲಾಗಿದ್ದು, ಸಣ್ಣ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಸೇರಿದಂತೆ ದುರ್ಬಲ ವರ್ಗದವರು ಇದರ ಬಲಿಯಾಗುತ್ತಿದ್ದಾರೆ. ಈ ಅಪರಾಧವನ್ನು ತಡೆಗಟ್ಟಲು ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಯಾವುದೇ ಅನುಮಾನಾಸ್ಪದ ಪ್ರಕರಣಗಳ ಬಗ್ಗೆ ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.  

ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್‌.ಎನ್‌. ದಿಳ್ಳೆಪ್ಪ ಅವರು ಮಾನವ ಕಳ್ಳಸಾಗಣೆ ತಡೆ ಕುರಿತಂತೆ ಉಪನ್ಯಾಸ ನೀಡಿದರು. ಮುಖ್ಯೋಪಾಧ್ಯಾಯ ಸಿ.ಎವೈ. ದಳವಾಯಿ ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ದೊರೆಯುವ ಉಚಿತ ಕಾನೂನು ನೆರವಿನ ಕುರಿತು ಮಾಹಿತಿ ನೀಡಿದರು.  

ಮುಖ್ಯ ಕಾನೂನು ನೆರವು ಅಭಿರಕ್ಷಣಾ ವಕೀಲ ವಿ.ಜಿ. ದೊಡ್ಡಗೌಡರ ಅವರು ಮಾನವ ಕಳ್ಳಸಾಗಣೆ ತಡೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.  ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.