ಧಾರವಾಡಕ್ಕೆ ಹಿಡಕಲ್ ನೀರು ಕಾಮಗಾರಿ ವಿರೋಧಿಸಿ ನಾಳೆ ಡಿಸಿ ಕಚೇರಿಗೆ ಮುತ್ತಿಗೆ: ದೀಪಕ್

DC office to be besieged tomorrow to protest against Hidkal water project to Dharwad: Deepak

ಬೆಳಗಾವಿ 29: ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರಿನ ಪೈಪ್ ಲೈನ್ ಕಾಮಗಾರಿಯನ್ನು ವಿರೋಧಿಸಿ ಶುಕ್ರವಾರ ಕರವೇ ನಾರಾಯಣಗೌಡ ಬಣ ರಾಜ್ಯ ಸರಕಾರದ ವಿರುದ್ಧ ಬೃಹತ್ ಹೋರಾಟ ನಡೆಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಹೇಳಿದರು.  

ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿದ ಅವರು ಸಂಬಂಧಿಸಿದ ಇಲಾಖಾಧಿಕಾರಿಗಳು ಸರಕಾರದ ಗಮನಕ್ಕೆ ತಂದು ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಕೊಂಡೊಯ್ಯುವ ಕಾಮಗಾರಿಗೆ ಬೆಳಗಾವಿ ಜನರ ವಿರೋಧವಿದ್ದು, ಶುಕ್ರವಾರ ದಿ. 30ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.  

ಈ ಹಿಂದೆಯೂ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಕುಡಿಯುವ ನೀರಿನ ಸಲುವಾಗಿ ಪೈಪ್ ಲೈನ್ ಕಾಮಗಾರಿಗೆ ನಮ್ಮ ನೀರು ನಮ್ಮ ಹಕ್ಕು ಹೋರಾಟದ ಅಡಿಯಲ್ಲಿ ವಿವಿಧ ಸಂಘ, ಸಂಸ್ಥೆಗಳು ಭಾಗವಹಿಸಿ ವಿರೋಧ ಮಾಡಿ ತಡೆಯಲಾಗಿತ್ತು. ಈಗ ಮತ್ತೇ ಸರಕಾರ ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಕೊಂಡೊಯ್ಯಲು ಕಾಮಗಾರಿಗೆ ಅನುಮೋದನೆ ನೀಡಿದ್ದು ದೊಡ್ಡ ದುರಂತವೇ ಸರಿ ಎಂದ ಅವರು ಸರಕಾರದಿಂದ ಅಧಿಕೃತವಾಗಿ ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ಪೈಪ್ ಲೈನ್ ಕಾಮಗಾರಿಗೆ ವಿರೋಧದ ಜೊತೆಗೂ ಕಾನೂನು ಹೋರಾಟ ನಡೆಸಲಾಗುವುದು ಎಂದರು.  

ಹಿಡಕಲ್ ಜಲಾಶಯದಿಂದ ಬಾಗಲಕೋಟೆಯ ಜನರಿಗೂ ಕುಡಿಯುವ ನೀರು ಹೋಗುತ್ತಿದೆ. ಅಲ್ಲಿನ ಜನರು ಸಹ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.  

ಜಿಲ್ಲೆಯ ಒಬ್ಬರು ಸಚಿವರ ಮುಂದಾಳತ್ವದಲ್ಲಿ ಬೆಳಗಾವಿ ಜನರ ನಿಯೋಗ ಕರೆದುಕೊಂಡು ಹೋಗಿ ಹಿಡಕಲ್ ಜಲಾಶಯದ ನೀರು ಉಳಿಸುವ ನಿಟ್ಟಿನಲ್ಲಿ ಸಚಿವರು ಮುಂದಾಗಬೇಕು ಎಂದರು.  

ಕರವೇ ರಾಜ್ಯ ಸಂಚಾಲಕ ಸುರೇಶ ಗವನ್ನವರ ಮಾತನಾಡಿ, ಬೆಳಗಾವಿ ಜನರ ಜೀವನಾಡಿ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರಿನ ಪೈಪ್ ಲೈನ್ ಕಾಮಗಾರಿಗೆ ನಮ್ಮ ವಿರೋಧ ಇದೆ. ನಮ್ಮ ಬೆಳಗಾವಿ ಜಿಲ್ಲೆಯಲ್ಲಿಯೂ ಕೈಗಾರಿಕಾ ಕಂಪನಿಗಳಿವೆ. ಇಲ್ಲಿಯೇ ನೀರಿನ ಅಭಾವ ಇದೆ. ಅದರ ಹೊರತಾಗಿಯೂ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪೈಪ್ ಲೈನ್ ಕಾಮಗಾರಿ ಮಾಡುತ್ತಿರುವುದು ಸರಿಯಲ್ಲ. ಇಲ್ಲಿನ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರದೆ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಸ್ಥಿಕೆ ವಹಿಸಿ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರಿನ ಪೈಪ್ ಲೈನ್ ಕಾಮಗಾರಿ ಸ್ಥಗಿತಗೊಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.  

ಕರವೇ ಉಪಾಧ್ಯಕ್ಷ ಗಣೇಶ ರೋಕಡೆ ಮಾತನಾಡಿ, ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಕೊಂಡೊಯುತ್ತಿದ್ದರೂ ಇಲ್ಲಿನ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.  

ಪತ್ರಿಕಾ ಗೋಷ್ಟಿಯಲ್ಲಿ ಕರವೇ ಜಿಲ್ಲಾ ಅಧ್ಯಕ್ಷ, ಉಪಾಧ್ಯಕ್ಷರು, ಪದಾಧಿಕಾರಿಗಳು ಇತರರು ಇದ್ದರು.