ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ
DIG M.N. Anuchet assumes charge as Commissioner of Information Department
ಬಳ್ಳಾರಿ 25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು. ಎಂ.ಎನ್.ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಬಾರದಲ್ಲೂ ಇವರನ್ನು ಇರಿಸಿ ಸರ್ಕಾರ ಆದೇಶಿಸಿದೆ.
ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಆ ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ ಶ್ರಮಿಸಿ, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್ ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಇವರು ಆಯ್ಕೆಯಾದರು. ವಾರ್ತಾ ಇಲಾಖೆಯ ಕಾರ್ಯವೈಖರಿಗೆ ಹೊಸ ವೇಗ ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಚೇತ್ ಅವರು, ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರಾಗಿದ್ದಾರೆ. ಈ ಹಿಂದೆ ಇವರು ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪ್ರತಿಷ್ಠಿತ “ಕೇಂದ್ರ ಗೃಹ ಸಚಿವರ ತನಿಖೆಗಾಗಿನ ಅತ್ಯುತ್ತಮ ಪದಕ ನೀಡಿ ಗೌರವಿಸಿದೆ.
2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ ಇವರು, ಆ ಬಳಿಕ ಸಿಐಡಿ ವಿಭಾಗದ ಎಸ್ಪಿ ಆಗಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ ಆಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿ, ನಗರದ ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಬರುವ ಮುನ್ನ ಇವರು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರ್ಪ ಜಿ.ಬಿ., ಸಿ.ಆರ್.ನವೀನ್, ಉಪನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ, ಶಫಿ ಸಾದುದ್ಧಿನ್ ಸೇರಿದಂತೆ ಇತರರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 