ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 3 ದಿನಗಳ ಕಾಲ ಸಿಬಿಐ ವಶಕ್ಕೆ

ನವದೆಹಲಿ 26: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲಾಗಿದೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಕೇಜ್ರಿವಾಲ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. ವಿಶೇಷ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಸಿಬಿಐ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶವನ್ನು ನೀಡಿದ್ದಾರೆ.

ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ತನಿಖಾ ಸಂಸ್ಥೆ ಬುಧವಾರ ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತ್ತು. ಇದೀಗ 3 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.

ಕೇಜ್ರಿವಾಲ್ ಅವರ ಕಸ್ಟಡಿಗೆ ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಪ್ರಕರಣದಲ್ಲಿ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಲು ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಕರಣದಲ್ಲಿ ಆರೋಪಿ ಗಳಾಗಿರುವ ಇತರ ವ್ಯಕ್ತಿಗಳ ಸಾಕ್ಷ್ಯಾಧಾರಗಳೊಂದಿಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರನ್ನು ವಿಚಾರಣೆ ನಡೆಸಬೇಕಿದೆ ಎಂದು ಸಿಬಿಐ ಹೇಳಿದೆ.

 ಇದೇ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಪುತ್ರಿ, ಕೆಚಂದ್ರಶೇಖರ್ ರಾವ್ ಪುತ್ರಿ ಕವಿತಾ ಕೂಡ ವಿಚಾರಣೆ ಎದುರಿಸುತ್ತಿದ್ದಾರೆ.