ಬಸವೇಶ್ವರ ಎತ್ತಿನೀರಾವರಿ ಯೋಜನೆ ಕಾಲುವೆಗೆ ನೀರು ಹರಿಸಲು ಆಗ್ರಹ
Demand to release water into the Basaveshwara Lift Irrigation Project canal
ಸಂಬರಗಿ 06: ಗಡಿ ಪ್ರದೇಶವು ತೀವ್ರ ಬರಗಾಲದ ಸಂಕಷ್ಟ ಎದುರಿಸುತ್ತಿದ್ದು, ಬಸವೇಶ್ವರ ಎತ್ತಿನೀರಾವರಿ ಯೋಜನೆಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ರೈತ ಹೋರಾಟಗಾರ ಹಾಗೂ ಹಿರಿಯ ವಕೀಲ ಎಸ್.ಎಸ್. ಪಾಟೀಲ ಸರ್ಕಾರವನ್ನು ಆಗ್ರಹಿಸಿದರು.
ಗಡಿ ಪ್ರದೇಶದ ಕಾಲುವೆ ಪರೀಶೀಲಿಸಿದ ಬಳಿಕ ಮದಭಾವಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗಿ ತರಕಾರಿ-ಮಹೈಸಾಳ ಯೋಜನೆಯ ನೀರು ಅಗರ್ ನದಿಗೆ ತಲುಪಿದ್ದರೂ, ಬಸವೇಶ್ವರ ಎತ್ತಿನೀರಾವರಿ ಯೋಜನೆಯ ಕಾಲುವೆಗೆ ಇನ್ನೂ ನೀರು ಬಿಡದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ಮಳೆ ಕೊರತೆಯಿಂದ ಮುಂಗಾರು ಬೆಳೆ ಶೇ.50ರಷ್ಟು ಹಾನಿಗೊಳಗಾಗಿದೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳು ನೀರಿನ ಅಭಾವದಿಂದ ಒಣಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿ ಸಮೀಕ್ಷೆ ನಡೆಸಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ನೀರಿನ ಕೊರತೆಯಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೂಲಿ ಕಾರ್ಮಿಕರಿಗೆ ಉದ್ಯೋಗವೂ ಇಲ್ಲದಂತಾಗಿದೆ. ಪರಿಣಾಮವಾಗಿ ಅನೇಕರು ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಹಾಗೂ ಸಾತಾರ ಜಿಲ್ಲೆಗಳಿಗೆ ಉದ್ಯೋಗ ಅರಸಿ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದರೂ, ಗಡಿ ಭಾಗದ ಕಾಲುವೆಗಳಿಗೆ ನೀರು ಹರಿಸದಿರುವುದು ಸರಿಯಲ್ಲ. ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ನೀರು ಬಿಡುಗಡೆ ಮಾಡಬೇಕು. ಗಡಿ ಭಾಗದ ಬಾಕಿ ಇರುವ ನೀರಾವರಿ ಕಾಮಗಾರಿಗಳನ್ನೂ ಶೀಘ್ರ ಪೂರ್ಣಗೊಳಿಸಿ ರೈತರ ಸಂಕಷ್ಟ ನಿವಾರಿಸಬೇಕು ಎಂದು ಎಸ್.ಎಸ್. ಪಾಟೀಲ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿ.ಎಂ. ಹಿಪ್ಪಳಗಾರ್, ಚೇತನ ಪಾಟೀಲ, ಎಂ.ವಿ. ಪೂಜಾರಿ, ಸಂಜಯ ಕಾಗವಾಡಿ, ಪಿ.ಆರ್. ಕಾಶಿದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 