ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ: ಅಬ್ಬಯ್ಯ ಪ್ರಸಾದ

Department officials should work in coordination with each other: Abbayya Prasad

ಮಳೆ ಹಾನಿ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಸಭೆ 

ವಾರ್ಡವಾರು ಸ್ವಚ್ಛತೆಗೆ ಆದ್ಯತೆ ನೀಡಿ 

ಹುಬ್ಬಳ್ಳಿ 18: ಮಳೆಗಾಲದ ಸಮಯದಲ್ಲಿ ಅಧಿಕಾರಿಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕಾಗುತ್ತದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಣೆ ಮಾಡಬೇಕು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಅಬ್ಬಯ್ಯ ಪ್ರಸಾದ ಹೇಳಿದರು.  

ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಹುಬ್ಬಳ್ಳಿ ಶಹರದಲ್ಲಿನ ಮಳೆ ಹಾನಿ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಮಳೆಯಾಗಿದೆ. ಹುಬ್ಬಳ್ಳಿಯಲ್ಲೂ ಸಹ ಹೆಚ್ಚು ಮಳೆಯಾಗಿರುತ್ತದೆ. ಅಪಾರ ಪ್ರಮಾಣದ ಮಳೆಯಿಂದಾಗಿ ಸಾವಿರಾರು ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಆ ನಿಟ್ಟಿನಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯಿಂದ ಸಾಕಷ್ಟು ಜನರ ಮನೆಗಳಿಗೆ ಹಾನಿಯಾಗಿವೆ. ಜನರಿಗೆ ಸರ್ಕಾರದಿಂದ ಪರಿಹಾರವನ್ನು ಒದಗಿಸುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. 

ಭವಿಷ್ಯದ 10 ರಿಂದ 15 ವರ್ಷದ ದೃಷ್ಟಿಕೋನವನ್ನು ಇಟ್ಟುಕೊಂಡು ಕಾಮಗಾರಿಗಳನ್ನು ಕೈಗೊಳ್ಳಬೇಕು. ಹಳೇ ಹುಬ್ಬಳ್ಳಿ ವೃತ್ತದ ರಸ್ತೆಯನ್ನು ದುರಸ್ತಿಗೊಳಿಸಬೇಕಾಗಿದೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗುತ್ತಿಲ್ಲ. ಅಧಿಕಾರಿಗಳು ಹೆಚ್ಚಿನ ಮುತುವರ್ಜಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಕೆಲಸಗಳಾಗುತ್ತವೆ ಎಂದರು.  

ಅಧಿಕಾರಿಗಳು ಕಚೇರಿ ಬಿಟ್ಟು ಪರಿಸ್ಥಿತಿಯನ್ನು ಅವಲೋಕಿಸಿ 

ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಮಳೆಯಿಂದ ಹಾನಿಯಾಗಿದೇಯಾ ಎಂಬುದನ್ನು ಗಮನಿಸಬೇಕು. ಚರಂಡಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಯಾವುದೇ ರೀತಿಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಪಾಲಿಕೆಯ ಆರೋಗ್ಯ ನೀರೀಕ್ಷಕರು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅಧಿಕಾರಿಗಳು ಕಚೇರಿ ಬಿಟ್ಟು ಪರಿಸ್ಥಿತಿಯನ್ನು ಅವಲೋಕಿಸಿ, ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  

ವಾರ್ಡವಾರು ಸ್ವಚ್ಛತೆಗೆ ಆದ್ಯತೆ ನೀಡಿ 

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛ, ಸುಂದರ ವಾತಾವರಣ ನಿರ್ಮಾಣ ಮಾಡಲು ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಮೈಸೂರು, ಶಿವಮೊಗ್ಗ, ದಾವಣಗೆರೆ, ಬೆಳಗಾವಿ ನಗರಗಳಂತೆ ಹುಬ್ಬಳ್ಳಿ ಧಾರವಾಡ ನಗರಗಳು ಸ್ವಚ್ಛಂದವಾಗಬೇಕು. ಅಲ್ಲಿನ ವಿಶಾಲ ರಸ್ತೆಗಳಂತೆ ಇಲ್ಲಿನ ರಸ್ತೆಗಳಾಗಬೇಕಿವೆ. ಕಸ, ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ವಾರ್ಡವಾರು ಸ್ವಚ್ಛತೆಗೆ ಆದ್ಯತೆ ನೀಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.  

ರಾಜ ಕಾಲುವೆ ಸ್ವಚ್ಛಗೊಳಿಸಿ 

ಹುಬ್ಬಳ್ಳಿಯ ಉಣಕಲ್ ಕೆರೆಯಿಂದ ಗಬ್ಬೂರುವರೆಗೆ ಹರಿಯುವ ರಾಜ ಕಾಲುವೆಯನ್ನು ಸ್ವಚ್ಛ ಮಾಡಬೇಕು. ಜನರು ತ್ಯಾಜ್ಯವನ್ನು ಕಾಲುವೆಗೆ ಎಸೆಯದಂತೆ ಸೂಚನೆ ನೀಡಬೇಕು. ತ್ಯಾಜ್ಯದಿಂದಾಗಿ ರಾಜ ಕಾಲುವೆ ಹರಿಯುವ ಮಟ್ಟವನ್ನು ಬಿಟ್ಟು ಮನೆಗಳಿಗೆ ನೀರು ನುಗ್ಗುತ್ತದೆ. ರಾಜ ಕಾಲುವೆಯನ್ನು ಸ್ವಚ್ಛಗೊಳಿಸಿದ ಮಣ್ಣನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಗುತ್ತದೆ. ಮಣ್ಣನ್ನು ಅಲ್ಲಿಯೇ ಬಿಟ್ಟರೇ ಮಳೆಯಾದಾಗ ಮರಳಿ ರಾಜಕಾಲುವೆಗೆ ಮಣ್ಣು ಸೇರುತ್ತದೆ. ಇದರಿಂದ ಸುಮಾರು 2 ಕೋಟಿಗೂ ಅಧಿಕ ಹಣ ವ್ಯರ್ಥವಾಗಲಿದೆ. ರಾಜ ಕಾಲುವೆ ತಡೆಗೋಡೆಗಳನ್ನು ಎತ್ತರಿಸುವ ಕುರಿತು ಗಮನ ಹರಿಸಲಾಗುವುದು. ರಾಜ ಕಾಲುವೆ ಒತ್ತುವರಿಯನ್ನು ತೆರವುಗೊಳಿಸಲಾಗುವುದು. ಒಟ್ಟಿನಲ್ಲಿ ಸಮರ​‍್ಕ ಕೆಲಸ ಕಾರ್ಯಗಳಾಗಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.  

ಮ್ಯಾನ್‌ಹೋಲ್‌ಗಳನ್ನು ಸರಿಯಾಗಿ ಮುಚ್ಚಿ 

ನಗರದ ಬಹಳಷ್ಟು ಕಡೆಗಳಲ್ಲಿ ಮ್ಯಾನ್‌ಹೋಲ್‌ಗಳನ್ನು ಸರಿಯಾಗಿ ಮುಚ್ಚಿರುವುದಿಲ್ಲ. ಇದರಿಂದ ಸಾಕಷ್ಟು ಅವಘಡಗಳು ಸಂಭವಿಸುತ್ತಿವೆ. ಹೀಗಾಗಿ ಮ್ಯಾನ್‌ಹೋಲ್‌ಗಳನ್ನು ಕೂಡಲೇ ಪರೀಶೀಲಿಸಿ ಮುಚ್ಚಬೇಕು. ತಗ್ಗು ಗುಂಡಿಗಳನ್ನು ಸಹ ಮುಚ್ಚಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.  

ಶಾಲಾ ಕಟ್ಟಡಗಳ ಬಗ್ಗೆ ಗಮನಹರಿಸಿ 

ಶಾಲಾ ಕಟ್ಟಡಗಳು ಬೀಳುವ ಹಂತದಲ್ಲಿದ್ದರೆ ಅವುಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ನೀಡಬಾರದು. ಈಗಾಗಲೇ ಪೆಂಡಾರ ಓಣಿ, ಬಿಡ್ನಾಳ, ಸದಾಶಿವ ನಗರ, ಕೌಲಪೇಟ ಶಾಲೆಗಳಿಗೆ ಅನುದಾನವನ್ನು ಬಿಡುಗಡೆ ಮಾಡಿಸಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಎ??????ಲ್‌ಸಿ ಪರೀಕ್ಷೆಯ ಫಲಿತಾಂಶ ನೀರೀಕ???ತವಾಗಿರುವುದಿಲ್ಲ. ಹೀಗಾಗಿ ಗುಣಮಟ್ಟದ ಶಿಕ್ಷಣ ನೀಡುವತ್ತ ಶಿಕ್ಷಣ ಇಲಾಖೆ ಮುಂದಾಗಬೇಕಿದೆ ಎಂದು ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.  

ಟ್ರಾಫಿಕ್ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿ 

ನಗರದಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೊಲೀಸರು ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು. ಸಾರ್ವಜನಿಕರು ಸರಿಯಾದ ರೀತಿಯಲ್ಲಿ ವಾಹನಗಳನ್ನು ಪಾರ್ಕ ಮಾಡುತ್ತಿಲ್ಲ. ಮಾರುಕಟ್ಟೆ ಪ್ರದೇಶದಲ್ಲಿ ವಾಹನಗಳ ದಟ್ಟನೆ ಜಾಸ್ತಿಯಾಗಿರುತ್ತದೆ. ಸಾರ್ವಜನಿಕರು ಓಡಾಡಲು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅಲ್ಲದೇ ಜನರಿಂದ ದೂರುಗಳು ಕೇಳಿ ಬಂದಿರುತ್ತವೆ. ಶೀಘ್ರದಲ್ಲಿ ಟ್ರಾಫಿಕ್ ಸಮಸ್ಯೆ ಪರಿಹರಿಸುವಂತೆ ಸಹಾಯಕ ಪೊಲೀಸ್ ಆಯುಕ್ತರಾದ ರವೀಶ ಸಿ.ಆರ್‌. ಅವರಿಗೆ ಸೂಚನೆ ನೀಡಿದರು.  

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್‌.ಜೆ. ಮಾತನಾಡಿ, ಈಗಾಗಲೇ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆಯಾಗಿದೆ. ಸಾಕಷ್ಟು ಹಾನಿಗಳು ಸಹ ಆಗಿವೆ. ಎಸ್‌ಡಿಆರ್‌ಎಫ್ ತಂಡ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ರಸ್ತೆಗಳ ದುರಸ್ತಿ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೇಸಿಗೆ ಅವಧಿಯಲ್ಲೇ ಚರಂಡಿ, ನಾಲಾಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಚರಂಡಿಗಳನ್ನು ಸ್ವಚ್ಛಗೊಳಿಸದಿರುವುದು ಗಮನಕ್ಕೆ ಬಂದಿರುತ್ತದೆ. ಸ್ವಚ್ಛತೆ ಕುರಿತಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಾರ್ಡಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕಾಗುತ್ತದೆ. ಕಸ ಸಂಗ್ರಹ ವಾಹನಗಳನ್ನು ಸರಿಯಾಗಿ ಬಳಸಬೇಕು. ಬೇರೆ ಕೆಲಸ ಕಾರ್ಯಗಳಿಗೆ ವಾಹನಗಳನ್ನು ಬಳಸಬಾರದು. ಅಂಗನವಾಡಿ, ಶಾಲಾ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಕಾರ್ಯ ನಿರ್ವಹಿಸಬೇಕು. ಸಿಸಿಎಂಎಸ್ ಪೋರ್ಟಲ್ ನಲ್ಲಿ ಯಾವುದೇ ಕೋರ್ಟ್‌ ಕೇಸಗಳು ಯಾವ ಹಂತದಲ್ಲಿವೆ ಎಂಬುದನ್ನು ಪರೀಶೀಲಿಸಬಹುದಾಗಿದೆ. ನಗರದಲ್ಲಿ ಮೇಲ್ಸೆತುವೆ ಕಾಮಗಾರಿ ಸುಗಮವಾಗಿ ಸಾಗುತ್ತಿದೆ. ಈಗಾಗಲೇ ಹೊಸುರ ವೃತ್ತದಿಂದ ವಿಜಯಪುರ ರಸ್ತೆವರೆಗಿನ ಕಾಮಗಾರಿಯೂ ಆಗಸ್ಟ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದಿನ ಹಂತದ ಕಾಮಗಾರಿಯನ್ನು ತದನಂತರ ಕೈಗೊಳ್ಳಲಾಗುವುದು ಎಂದು ಅವರು ಸಭೆಗೆ ತಿಳಿಸಿದರು.  

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ ಮಾತನಾಡಿ, ಸುಮಾರು 1188 ಮನೆಗಳಿಗೆ ಮಳೆ ನೀರು ನುಗ್ಗಿದೆ. 16 ಮನೆಗಳು ಬಿದ್ದು ಹೋಗಿವೆ. 3 ಮನೆಗಳಿಗೆ ಶೇ.50 ರಷ್ಟು ಹಾನಿಯಾಗಿರುತ್ತವೆ. ರಾಜ ಕಾಲುವೆಯ ಸ್ವಚ್ಛತೆಗೆ ಗಮನ ಹರಿಸಲಾಗುವುದು. ಕೆಲವು ಪ್ರದೇಶಗಳಲ್ಲಿ ರಸ್ತೆಗಳ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡಿರುವುದಿಲ್ಲ. ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಮ್ಯಾನ್‌ಹೋಲ್‌ಗಳನ್ನು ನಾಳೆ ಸಂಜೆಯೊಳಗೆ ಮುಚ್ಚಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. 

ನೇಕಾರನಗರದ ಕೆಳಹಂತದ ಸೇತುವೆ ಸ್ಥಳಕ್ಕೆ ಭೇಟಿ 

ಸಭೆಯ ನಂತರ ನೇಕಾರನಗರದ (ಸರ್ವಿಸ್ ರಸ್ತೆ ಹತ್ತಿರದ) ಕೆಳಹಂತದ ಸೇತುವೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕರು ಭೇಟಿ ನೀಡಿ ಪರೀಶೀಲಿಸಿದರು. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಬೇಕು. ಯಾವುದೇ ರೀತಿಯ ವಿಳಂಬವಾಗಬಾರದು. ರಾಜ ಕಾಲುವೆ ನೀರು ಹರಿದು ಹೋಗಲು ವ್ಯವಸ್ಥಿತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಸರ್ವಿಸ ರಸ್ತೆಯನ್ನು ನಿರ್ಮಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಈ ಸಂದರ್ಭದಲ್ಲಿ ಪ್ರೋಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಪಾಲಿಕೆಯ ಸಹಾಯಕ ಆಯುಕ್ತರಾದ ವಿಜಯಕುಮಾರ್, ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶ್ರೀಧರ ದಂಡಪ್ಪನವರ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧೀಕ್ಷಕ ಅಭಿಯಂತರರಾದ ಟಿ.ಪ್ರದೀಪ, ಲೋಕೋಪಯೋಗಿ ಇಲಾಖೆಯ ಎಇಇ ಎಚ್‌.ಜಿ.ಗುಂಡಳ್ಳಿ, ವಲಯ ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.