ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ
Deputy Commissioner Nagendra Prasad K.K. responsible for census work at training workshop
ಬಳ್ಳಾರಿ 09: ದಶಕದ ಪ್ರಕ್ರಿಯೆಯಾದ ದೇಶದ ಪ್ರಮುಖ ‘ಜನಗಣತಿ' ಕಾರ್ಯ ಪುನಾರಂಭಗೊಳ್ಳುತ್ತಿದ್ದು, ಈ ಕುರಿತು ಅಧಿಕಾರಿ-ಸಿಬ್ಬಂದಿ ಸೂಕ್ತ ತರಬೇತಿ ಪಡೆದುಕೊಂಡು ಜವಾಬ್ದಾರಿಯಿಂದ ಜನಗಣತಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಜಿಲ್ಲಾಡಳಿತ ವತಿಯಿಂದ ಜನಗಣತಿ-2027 ಕಾರ್ಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರಿ್ಡಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದ ವಿಳಂಬವಾಗಿದ್ದ 2021ರ ಜನಗಣತಿಯನ್ನು ಈಗ ಭಾರತ ಸರ್ಕಾರದ ಆದೇಶದಂತೆ ಹೊಸದಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಬಾರಿಯ ಜನಗಣತಿಯಲ್ಲಿ ಮೊದಲ ಬಾರಿಗೆ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ದತ್ತಾಂಶಗಳನ್ನು ಆನ್ಲೈನ್ ಮೂಲಕವೇ ಸಂಗ್ರಹಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಏಪ್ರಿಲ್ 01 ರಿಂದ 15 ರ ವರೆಗೆ ಸಾರ್ವಜನಿಕರಿಗೆ ಸ್ವಯಂ ಗಣತಿಗೆ ಅವಕಾಶ ಮತ್ತು ಏಪ್ರಿಲ್ 16 ರಿಂದ ಮೇ 16 ರವರೆಗೆ ಮನೆ ಪಟ್ಟಿ ಮಾಡುವ ಕ್ಷೇತ್ರ ಕಾರ್ಯ ನಡೆಯಲಿದೆ. ಈ ಹಿಂದಿನ ಸಾಮಾಜಿಕ-ಆರ್ಥಿಕ ಸಮೀಕ್ಷೆಗಿಂತ ಈ ಬಾರಿಯ ಜನಗಣತಿ ಪ್ರಕ್ರಿಯೆ ಸರಳವಾಗಿರಲಿದ್ದು, ಕನಿಷ್ಟ ಮತ್ತು ಅಗತ್ಯ ಮಾಹಿತಿಗಳನ್ನು ಮಾತ್ರ ಸಂಗ್ರಹಿಸಲಾಗುತ್ತದೆ ಎಂದರು.
ಜನಗಣತಿ ಕಾರ್ಯಕ್ಕೆ ನೆರವಾಗಲು ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ಸಹಾಯಕರು ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ಗಳನ್ನು ಏಜೆನ್ಸಿಗಳ ಮೂಲಕ ನೇಮಿಸಿಕೊಳ್ಳಲಾಗುತ್ತಿದೆ. ಗಣತಿ ಅವಧಿಯಲ್ಲಿಯೇ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕೂಡಾ ನಡೆಯಲಿದೆ ಎಂದು ಹೇಳಿದರು.
ಗಣತಿ ಪ್ರಕ್ರಿಯೆಯು ಆರಂಭದಿಂದ ಮುಕ್ತಾಯದವರೆಗೆ ನಿರ್ವಹಿಸಲು ‘ಜನಗಣತಿ ನಿರ್ವಹಣೆ ಮತ್ತು ಮಾನಿಟರಿಂಗ್ ಸಿಸ್ಟಂ’ (ಸಿಎಂಎಂಎಸ್) ಎಂಬ ವಿಶೇಷ ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದೆ. ಹಾಗಾಗಿ ಅಧಿಕಾರಿಗಳು ಈ ಮೂರು ದಿನಗಳ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಗಣತಿ ಪ್ರಕ್ರಿಯೆಯ ಬಗ್ಗೆ ಇರುವ ತಾಂತ್ರಿಕ ಅನುಮಾನಗಳನ್ನು ಬಗೆಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜನಗಣತಿ ಪ್ರಕ್ರಿಯೆಯಲ್ಲಿ ಈ ಬಾರಿ ಎಚ್.ಎಲ್.ಒ ಆಪ್ ಇಂಗ್ಲೀಷ್ ಜೊತೆಗೆ ಕನ್ನಡದಲ್ಲೂ ಲಭ್ಯವಿದ್ದು, ಇದು ಸ್ಥಳೀಯ ಸಿಬ್ಬಂದಿಗೆ ಸಹಕಾರಿಯಾಗಲಿದೆ. ಈ ಬಾರಿಯ ಪ್ರಶ್ನಾವಳಿಯಲ್ಲಿ ಇಂಟರ್ನೆಟ್ ಬಳಕೆ ಸೇರಿದಂತೆ ಕೆಲವು ಹೊಸ ಮತ್ತು ಗೌಪ್ಯ ಮಾಹಿತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸೇರಿಸಲಾಗಿದೆ. ಇಂಟರ್ನೆಟ್ ಸಮಸ್ಯೆ ಇರುವ ಗುಡ್ಡಗಾಡು ಪ್ರದೇಶಗಳಲ್ಲಿ ಅನುಕೂಲವಾಗುವಂತೆ ಆಫ್ಲೈನ್ನಲ್ಲಿ ಡೇಟಾ ಉಳಿಸಿ ನಂತರ ಸಿಂಕ್ ಮಾಡುವ ಆಯ್ಕೆಯನ್ನು ನೀಡಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರರು ಮತ್ತು ನಗರ ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಖಾರಿಗಳು ಮೊದಲು ತಾವೇ ಆಪ್ ಬಳಸಿ ಲಾಗಿನ್ ಆಗುವ ಮೂಲಕ ತಂತ್ರಜ್ಞಾನದ ಬಗ್ಗೆ ಪರಿಚಿತರಾಗಬೇಕು. ಇದರಿಂದ ಅವರು ತಮ್ಮ ಕೆಳಗಿನ ಸಿಬ್ಬಂದಿಗೆ ಸರಿಯಾದ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ. ಕೊನೆಯಲ್ಲಿ, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜನಗಣತಿಯನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ಗಣತಿ ಉದ್ದೇಶಕ್ಕಾಗಿ ಬ್ಲಾಕ್ ರಚಿಸಲಾಗುತ್ತಿದ್ದು, 700ರಿಂದ 800 ಜನಸಂಖ್ಯೆಗೆ ಒಬ್ಬ ಗಣತಿದಾರರನ್ನು ಮತ್ತು ಪ್ರತಿ ಆರು ಜನ ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಿಸಲಾಗುವುದು ಎಂಉ ತಿಳಿಸಿದರು.
ಗಣತಿದಾರರಿಗಿಂತ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಮೇಲ್ವಿಚಾರಕರ ಹುದ್ದೆಗೆ ಪರಿಗಣಿಸಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ತಹಶೀಲ್ದಾರರು ಹಾಗೂ ನಗರ ಪ್ರದೇಶಗಳಲ್ಲಿ ನಗರಸಭೆ, ಪುರಸಭೆಯ ಮುಖ್ಯಾಧಿಕಾರಿಗಳು ಉಸ್ತುವಾರಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರಧಾನ ಜನಗಣತಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರು ಈ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಬಳಿಕ ಕಾರ್ಯಾಗಾರದಲ್ಲಿ ಜನಗಣತಿ ಕಾರ್ಯಾಚರಣೆಯ ನಿರ್ದೇಶನಾಲಯದ ಡಿಡಿಸಿಒ ಕೆ.ಜ್ಞಾನ ಪ್ರಕಾಶಂ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಜನಗಣತಿ ಪ್ರಕ್ರಿಯೆ ಕುರಿತು ಸವಿವರವಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಸೇರಿದಂತೆ ಐದು ತಾಲ್ಲೂಕುಗಳ ತಹಶೀಲ್ದಾರರು, ನಗರ- ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿ- ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 